ಕರ್ನಾಟಕದ ಶೇ.100ರಷ್ಟು ಮಂದಿಯ ಆರೋಗ್ಯ ತಪಾಸಣೆ ಗುರಿ: ಸುಧಾಕರ್
ಬೆಂಗಳೂರು, ನವೆಂಬರ್ 28: ಕರ್ನಾಟಕದಲ್ಲಿ ಮುಂದಿನ 18 ತಿಂಗಳಲ್ಲಿ ಶೇ.100ರಷ್ಟು ಜನರಿಗೆ ಮಧುಮೇಹ, ಅಸಾಂಕ್ರಾಮಿಕ ರೋಗಗಳ ಆರೋಗ್ಯ ತಪಾಸಣೆ ಮಾಡಿಸಲು ಆರೋಗ್ಯ ಇಲಾಖೆ ಗುರಿ ಹೊಂದಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.
ಆರೋಗ್ಯ ಸಿಟಿ ಸಮ್ಮಿಟ್ನಲ್ಲಿ ಪಾಲ್ಗೊಂಡು ಮಾತನಾಡಿದ ಸುಧಾಕರ್, ಮಧುಮೇಹ ಸೇರಿದಂತೆ ಅಸಾಂಕ್ರಾಮಿಕ ರೋಗಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅವುಗಳ ನಿರ್ವಹಣ, ಸೂಕ್ತ ತಪಾಸಣೆಗಾಗಿ 'ನಮ್ಮ ಕ್ಲಿನಿಕ್'ನಡಿ 30 ವರ್ಷ ವಯಸ್ಸು ಮೇಲ್ಪಟ್ಟ ಪ್ರತಿ ವ್ಯಕ್ತಿಗೂ ಮಧುಮೇಹದ ತಪಾಸಣೆ ಮಾಡಲಾಗುವುದು ಎಂದರು.
ಶಬರಿಮಲೆಗೆ ತೆರಳುವ ಕರ್ನಾಟಕದ ಭಕ್ತರಿಗೆ ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ
ಕಳೆದ ಮೂರು ವರ್ಷಗಳಲ್ಲಿ ರಾಜ್ಯದ ಶೇ.50ರಷ್ಟು ಜನರನ್ನು ಅಸಾಂಕ್ರಾಮಿಕ ರೋಗಗಳ ತಪಾಸಣೆಗೆ ಒಳಪಡಿಸಲಾಗಿದೆ. ಮುಂದಿನ 18 ತಿಂಗಳಲ್ಲಿ ಶೇ.100ರಷ್ಟು ಜನರ ಆರೋಗ್ಯ ತಪಾಸಣೆಗೆ ಒಳಪಡಿಸಲಾಗುವುದು.
ಅಸಾಂಕ್ರಮಿಕ ರೋಗಗಳ ನಿರ್ವಹಣೆಗೆ ರಾಜ್ಯದ ನಗರಗಳಲ್ಲಿ 438 'ನಮ್ಮ ಕ್ಲಿನಿಕ್'ಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ. ಕೊಳೆಗೇರಿ, ಬಡ ಜನರು ವಾಸಿಸುವ ಪ್ರದೇಶಗಳಲ್ಲಿ ಇಂತಹ ಕ್ಲಿನಿಕ್ ಆರಂಭಿಸಿ ಜನರ ಆರೋಗ್ಯ ಕುರಿತು ಸರ್ಕಾರ ಕಾಳಜಿ ವಹಿಸಲಿದೆ. ವ್ಯಕ್ತಿಗಳಲ್ಲಿ ಮಧುಮೇಹ ಸೇರಿದಂತೆ ಅಸಾಂಕ್ರಾಮಿಕ ರೋಗಗಳು ಪತ್ತೆ ಆದರೆ ಆ ಸಂಖ್ಯೆ ಸಂಗ್ರಹಿಸಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಒಟ್ಟು ಮಧುಮೇಹಿಗಳಲ್ಲಿ ಶೇ. 75ರಷ್ಟು ಜನರು ಚಿಕಿತ್ಸೆಯನ್ನೇ ಪಡೆಯುತ್ತಿಲ್ಲ. ಆದ್ದರಿಂದ 30 ವರ್ಷ ವಯಸ್ಸು ಮೇಲ್ಪಟ್ಟ ಪ್ರತಿಯೊಬ್ಬರಲ್ಲೂ ಮಧುಮೇಹ ಪತ್ತೆ ತಪಾಸಣೆ ನಡೆಸಲಾಗುವುದು ಎಂದು ಅವರು ವಿವರಿಸಿದರು.
200ಕ್ಕೂ ಅಧಿಕ 'ನಮ್ಮ ಕ್ಲಿನಿಕ್' ಶುರು
ರಾಜ್ಯದಲ್ಲಿ 6,500 ಕ್ಕೂ ಅಧಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಈಗಾಗಲೇ ಆರಂಭಿಸಲಾಗಿದೆ. ಇವುಗಳ ಮೂಲಕ ಕೂಡ ಮಧುಮೇಹ ತಪಾಸಣೆ ಮಾಡಲಾಗುವುದು. 200 ಕ್ಕೂ ಅಧಿಕ 'ನಮ್ಮ ಕ್ಲಿನಿಕ್' ಕಾರ್ಯಾಚರಣೆಗೆ ಸಿದ್ಧವಾಗಿವೆ. ತಿಂಗಳಾಂತ್ಯದಲ್ಲಿ ಬೇರೆಡೆ ಸದ್ಯಕ್ಕೆ 100 ಹಾಗೂ ಮುಂದಿನ ವಾರದ ನಂತರ ಬೆಂಗಳೂರಿನಲ್ಲಿ ಹೊಸ ನಮ್ಮ ಕ್ಲಿನಿಕ್ ಗಳನ್ನು ಉದ್ಘಾಟಿಸಲಾಗುವುದು ಎಂದು ಆರೋಗ್ಯ ಸಚಿವ ಸುಧಾಕರ್ ವಿವರಿಸಿದರು.
ಮಧುಮೇಹ ಬಗ್ಗೆ ನಿರ್ಲಕ್ಷ್ಯ, ಜಾಗೃತಿ
30 ವರ್ಷ ವಯಸ್ಸಿನ ಮಧುಮೇಹಿಯೊಬ್ಬರು ಗ್ಯಾಂಗ್ರಿನ್ನಿಂದ ಕಾಲಿಗೆ ಹಾನಿ ಮಾಡಿಕೊಂಡಿದ್ದರು. ಆದರೆ ಅವರಿಗೆ ಮಧುಮೇಹ ಇದೆ ಎಂಬುದೇ ಗೊತ್ತಿರಲಿಲ್ಲ. ಇಂತಹ ನಿರ್ಲಕ್ಷ್ಯ, ಜಾಗೃತಿಯ ಕೊರತೆ ಎಲ್ಲೆಡೆ ಕಂಡು ಬರುತ್ತಿದೆ. ಪ್ರತಿ ವರ್ಷ ಆರೋಗ್ಯ ತಪಾಸಣೆಯನ್ನು ಕೂಡ ಜನರು ಮಾಡಿಕೊಳ್ಳುವುದಿಲ್ಲ. ಜನರು ವರ್ಷಕ್ಕೊಮ್ಮೆ ಕಡ್ಡಾಯವಾಗಿ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಾರ್ವಜನಿಕರಿಗೆ ಸಲಹೆ ನೀಡಿದರು.
ರಾಜ್ಯದ ಅನೇಕರಿಗೆ ಮಾನಸಿಕ ಸಮಸ್ಯೆ ಇದೆ ಎಂದೇ ಗೊತ್ತಿರುವುದಿಲ್ಲ. ಕ್ಯಾನ್ಸರ್ ವಿಚಾರದಲ್ಲೂ ಹೀಗೆಯೇ ಆಗುತ್ತಿದೆ. ಕಿದ್ವಾಯಿ ಸಂಸ್ಥೆ ಮೂಲಕ ಕ್ಯಾನ್ಸರ್ ಬಗ್ಗೆ ಹೆಚ್ಚು ಅರಿವು ಮೂಡಿಸಲಾಗುತ್ತಿದೆ. ರೋಗ ಬರುವುದಕ್ಕಿಂತ ಮೊದಲು ರೋಗ ಪೂರ್ವದ ನಿಯಂತ್ರಣ ಕ್ರಮಗಳಿಗೆ ಆದ್ಯತೆ ನೀಡಲಾಗಿದೆ ಎಂದರು.
ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ
ಐಟಿ ನಗರ ಬೆಂಗಳೂರು ಆರೋಗ್ಯ ನಗರವಾಗಿ ಬೆಳೆಯುತ್ತಿದೆ. 1.3 ಕೋಟಿ ಜನಸಂಖ್ಯೆ ಇರುವ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ, ಮಾಲಿನ್ಯ ಸೇರಿದಂತೆ ಅನೇಕ ಸಮಸ್ಯೆಗಳಿವೆ. ಕಳೆದ ಎರಡು ಮೂರು ದಶಕಕ್ಕೆ ಹೋಲಿಸಿದರೆ ಈಗ ಜನರ ಗರಿಷ್ಠ ವಯೋಮಿತಿ ಹೆಚ್ಚಾಗಿದೆ. ಹಿಂದೆ 40-52 ವಯೋಮಿತಿ ಇದ್ದು, ಈಗ 65-67 ಆಗಿದೆ. ವಯೋಮಿತಿ ಹೆಚ್ಚಳದ ಮೂಲಕ ನಾವು ಅಭಿವೃದ್ಧಿ ಸಾಧಿಸಿದ್ದೇವೆ ಎಂದು ತಿಳಿಸಿದರು.
ಪಾಸ್ಟ್ ಫುಡ್ಗೆ ಬೇಗ ಹೊಂದಿಕೊಳ್ಳುವ ಮಕ್ಕಳು
ಅಭಿವೃದ್ಧಿಶೀಲ ಹಾಗೂ ಹಿಂದುಳಿದ ದೇಶಗಳಲ್ಲಿ ಅಸಾಂಕ್ರಾಮಿಕ ರೋಗಗಳು ಹೆಚ್ಚು ದುಷ್ಪರಿಣಾಮ ಬೀರುತ್ತಿವೆ. ಅದರಲ್ಲೂ ಭಾರತದಲ್ಲಿ ಮಧುಮೇಹ ಹೆಚ್ಚು ಜನರನ್ನು ಕಾಡುತ್ತಿದೆ. ಮಕ್ಕಳು ಫಾಸ್ಟ್ ಫುಡ್ಗೆ ಬೇಗನೆ ಹೊಂದಿಕೊಳ್ಳುತ್ತಿದ್ದಾರೆ. ಮಕ್ಕಳು ಆಟವಾಡುವುದು ಕೂಡ ಕಡಿಮೆ ಆಗಿದೆ. ಹಿಂದಿನ ಜನಾಂಗ ಹೆಚ್ಚು ಆಟ, ಓಡಾಟ ಮಾಡುತ್ತಿದ್ದರು. ಇದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸಬಲರಾಗಿರುತ್ತಿದ್ದರು. ಈ ಬಗ್ಗೆ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದರು.