ಅಂಗಾಂಗ ದಾನ ಮಾಡಿದ ಮುಸ್ಲಿಂ ವ್ಯಕ್ತಿ ಕುಟುಂಬ ಸನ್ಮಾನಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು, ಜೂನ್ 12: ಅಂಗಾಂಗ ದಾನ ಮಾಡಿದ ವ್ಯಕ್ತಿಯ ಕುಟುಂಬವನ್ನು ಸನ್ಮಾನಿಸುವ ಮೂಲಕ ಅಂಗಾಂಗ ದಾನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರೋತ್ಸಾಹ ನೀಡಿದ್ದು, ಅಂಗಾಂಗ ದಾನ ನಿಜವಾಗಿ ಆತ್ಮ ಚೈತನ್ಯ ನೀಡುವ ಕಾರ್ಯ ಎಂದು ಹೇಳಿದ್ದಾರೆ.
ತನ್ನ ಸಾವಿನ ಬಳಿಕ ಅಂಗಾಂಗ ದಾನ ಮಾಡಿದ ಫಾರ್ದಿನ್ ಖಾನ್ ಮುಸ್ಲಿಂ ಕುಟುಂಬದ ಕಾರ್ಯವನ್ನು ಸಚಿವ ಗುಂಡೂರಾವ್ ಶ್ಲಾಘಿಸಿದ್ದಾರೆ. ಇಂದು ಫಾರ್ದಿನ್ ಖಾನ್ ಅವರ ನಿವಾಸಕ್ಕೆ ತೆರಳಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ಗುಂಡೂರಾವ್, ಅಂಗಾಂಗ ದಾನ ಮಾಡುವ ನಿರ್ಧಾರ ಕೈಗೊಂಡಿದ್ದ ಫಾರ್ದಿನ್ ಖಾನ್ ಅವರ ಕುಟಂಬವನ್ನು ಸನ್ಮಾನಿಸಿದರು.

22 ವರ್ಷದ ಫಾರ್ದಿನ್ ಖಾನ್ ಜೂನ್ 4 ರಂದು ಮದುವೆ ಸಮಾರಂಭ ಮುಗಿಸಿ ವಾಪಾಸ್ ಬರುತ್ತಿದ್ದಾಗ ತುಮಕೂರಿನ ಶಿರಾ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ದಾಖಲಿಸಿದರೂ, ಗಂಭೀರ ಸ್ವರೂಪದ ಗಾಯಗಳಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಫಾರ್ದಿಲ್ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು.
ಜೂನ್ 7 ಬೆಳಗ್ಗೆ 11.55ಕ್ಕೆ ಫಾರ್ದಿನ್ ಖಾನ್ 'ಮೆದುಳು ನಿಷ್ಕ್ರೀಯ'ಗೊಂಡಿರುವುದಾಗಿ ಆಸ್ಪತ್ರೆಯ ವೈದ್ಯರು ಘೋಷಿಸಿದ್ದರು. ಆದರೆ, ಮೆದುಳು ಮಾತ್ರ ನಿಷ್ಕ್ರೀಯಗೊಂಡುರು ಉಳಿದೆಲ್ಲಾ ಅಂಗಾಂಗಗಳು ವೆಂಟಿಲೇಟರ್ ಸಹಾಯದಿಂದ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದವು. ಈ ದುಃಖದ ಸನ್ನಿವೇಶದಲ್ಲಿ ಫಾರ್ದಿನ್ ಕುಟುಂಬದವರು ತಮ್ಮ ಮಗನ ದೇಹದ ಅಂಗಾಂಗಳನ್ನು ದಾನ ಮಾಡುವ ದೊಡ್ಡ ನಿರ್ಧಾರ ತೆಗೆದುಕೊಳ್ಳುವ ಮೂಲಕ 6 ಜನರಿಗೆ ಜೀವ ತುಂಬಿದ್ದಾರೆ.
ಫಾರ್ದಿನ್ ಖಾನ್ ಹೃದಯವನ್ನು ನಾರಾಯಣ ಹೃದಯಾಲಯದಲ್ಲಿ ದಾಖಲಾಗಿದ್ದ 57 ವರ್ಷದ ವ್ಯಕ್ತಿಗೆ ಕಸಿ ಮಾಡಲಾಗಿದ್ದು, ಪಿತ್ತಜನಕಾಂಗವನ್ನು ಯಶವಂತಪುರ ಸ್ಪರ್ಶ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ 42 ವರ್ಷದ ರೋಗಿಗೆ ಕಸಿ ಮಾಡಲಾಗಿದೆ. ಎಡ ಮೂತ್ರಪಿಂಡ ಮತ್ತು ಫ್ಯಾಂಕ್ರಿಯಾಸ್ನ್ನು ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗೆ ಬಹು ಅಂಗಾಂಗ ಕಸಿ ಮಾಡಲಾಗಿದೆ. ಬಲ ಮೂತ್ರಪಿಂಡವನ್ನು ಸ್ಪರ್ಶ್ ಆಸ್ಪತ್ರೆಯ ರೋಗಿಗೆ ಕಸಿ ಮಾಡಿದರೆ, ಕಣ್ಣಿನ ಕಾರ್ನಿಯಾವನ್ನು ನಾರಾಯಣ ನೇತ್ರಾಲಯಕ್ಕೆ ನೀಡಲಾಗಿದೆ.

ಮುಸ್ಲಿಂ ಸಮುದಾಯದಲ್ಲಿ ಅಂಗಾಂಗ ದಾನಕ್ಕೆ ಧಾರ್ಮಿಕ ಕಟ್ಟುಪಾಡುಗಳಿವೆ. ಆದರೆ ಫಾರ್ದಿನ್ ಕುಟುಂಬ ಧಾರ್ಮಿಕ ಕಟ್ಟುಪಾಡುಗಳನ್ನು ಮೀರಿ ಫಾರ್ದಿನ್ ದೇಹದ ಅಂಗಾಂಗಳನ್ನು ದಾನ ಮಾಡುವ ಮೂಲಕ ಆರು ಜನರ ಬದುಕಿಗೆ ಮರುಜೀವ ನೀಡಿದ್ದಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶಂಶಸಿದ್ದಾರೆ..












Click it and Unblock the Notifications