ಕೊರೊನಾ ಕರಾಳತೆ: ಇದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ ಕಥೆ?
ಬೆಂಗಳೂರು, ಏಪ್ರಿಲ್ 07: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಉದ್ದೇಶದಿಂದ ನೌಕರಸ್ಥರಿಗೆ ಉದ್ಯೋಗದ ಸ್ಥಳದಲ್ಲೇ ಲಸಿಕೆ ನೀಡುವ ವ್ಯವಸ್ಥೆ ಕಲ್ಪಿಸುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಕರ್ನಾಟಕ ಸರ್ಕಾರ ಕೂಡಾ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
Recommended Video
ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಸಂಬಂಧ ಬೀದರ್, ಬೆಳಗಾವಿ, ವಿಜಯಪುರ, ಕಲಬುರಗಿ, ತುಮಕೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಸಚಿವ ಡಾ. ಸುಧಾಕರ್ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ರಾಜ್ಯದ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ನಡೆಸಿ ನಡೆಸಿದ ನಂತರದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಡಾ. ಸುಧಾಕರ್ ಅವರು ಕೊರೊನಾವೈರಸ್ ಲಸಿಕೆ ವಿತರಣೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಅರ್ಹರಿಗೆ ಉದ್ಯೋಗದ ಸ್ಥಳದಲ್ಲೇ ಲಸಿಕೆ
ಕೇಂದ್ರ ಸರ್ಕಾರದ ಉದ್ಯೋಗಸ್ಥರಿಗೆ ಮತ್ತು ಲಸಿಕೆ ಪಡೆಯಲು ಅರ್ಹರಿರುವ ನೌಕರರಿಗೆ ಉದ್ಯೋಗದ ಸ್ಥಳದಲ್ಲೇ ಲಸಿಕೆ ನೀಡಲಾಗುವುದು. ದೊಡ್ಡ ಉದ್ಯಮಗಳು, ಐಟಿ ಉದ್ಯಮಗಳ ಮನವಿಗೆ ಕೇಂದ್ರದಿಂದಲೂ ಮಂಜೂರಾತಿ ಸಿಕ್ಕಿದೆ. ಏಪ್ರಿಲ್ 11 ಉದ್ಯೋಗದ ಸ್ಥಳದಲ್ಲೇ ಲಸಿಕೆ ನೀಡುವ ವ್ಯವಸ್ಥೆ ಜಾರಿಗೆ ಬರಲಿದೆ. ಇದರಿಂದಾಗಿ ಲಸಿಕೆ ಪಡೆಯುವವರ ಸಂಖ್ಯೆ ಹೆಚ್ಚಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಹಲವು ಜಿಲ್ಲೆಗಳಲ್ಲಿ ಕೊರೊನಾವೈರಸ್ ಅಪಾಯ
ಕರ್ನಾಟಕದಲ್ಲಿ ಕಳೆದ ಎರಡು ವಾರಗಳಿಂದ ಬಂದಿರುವ ಅಂಕಿ-ಅಂಶಗಳನ್ನು ಗಮನಿಸಿದಾಗ ಕೆಲವು ಜಿಲ್ಲೆಗಳಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಇನ್ನು ಕೆಲವು ಕಡೆ ಕೊವಿಡ್ ಪರೀಕ್ಷೆ ಕಡಿಮೆಯಾಗಿದೆ. ಸಾರಿ ಹಾಗೂ ಐಎಲ್ ಐ ಪ್ರಕರಣ ಪತ್ತೆ ಕಡಿಮೆ ಹಾಗೂ ಲಸಿಕೆ ಮೊದಲಾದ ವಿಷಯ ಕುರಿತು ಚರ್ಚಿಸಲಾಗಿದೆ. ಕೇಂದ್ರ ಆರೋಗ್ಯ ಸಚಿವರು ನೀಡಿದ ಮಾರ್ಗದರ್ಶನ ಬಗ್ಗೆ ತಿಳಿಸಲಾಗಿದೆ ಎಂದರು.

ರಾಜ್ಯದಲ್ಲೂ ಎದುರಾಗುತ್ತೆ ಹಾಸಿಗೆ ಕೊರತೆ ಭೀತಿ
ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕಾರ ನೀಡಬೇಕು. ರಾಜ್ಯದಲ್ಲಿ ಕೊವಿಡ್-19 2ನೇ ಅಲೆಯು ನಿರೀಕ್ಷೆಗೂ ಮೀರಿ ಹರಡುತ್ತಿದೆ. ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಾ ಹೋದರೆ, ಬೆಡ್ ಸಮಸ್ಯೆ ಎದುರಾಗುತ್ತದೆ. ಕಳೆದೊಂದು ವರ್ಷದಿಂದ ಎಲ್ಲ ಸಿದ್ಧತೆ ಮಾಡಿಕೊಂಡಿರುವುದರಿಂದ ಸದ್ಯಕ್ಕೆ ಅಂತಹ ಸಮಸ್ಯೆ ಇಲ್ಲ. ಆದರೆ ಇದೇ ರೀತಿ ಶೇ.6 ರಿಂದ ಶೇ. 9ರಷ್ಟು ಪಾಸಿಟಿವಿಟಿ ದರ ಬಂದರೆ ಅಥವಾ ಶೇ. 20 ರಿಂದ ಶೇ.25 ಬಂದರೆ ಎಷ್ಟು ಜನ ಐಸಿಯುಗೆ ಹೋಗಬೇಕಾಗುತ್ತದೆ ಎಂದು ಯೋಚಿಸಬೇಕಾಗುತ್ತದೆ ಎಂದು ತಿಳಿಸಿದರು.

ರಾಜ್ಯ ರಾಜಧಾನಿಗೇ ಕೊರೊನಾವೈರಸ್ ಕಂಟಕ
ಕರ್ನಾಟಕದಲ್ಲಿ ಒಂದೇ ದಿನ 6976 ಮಂದಿಯಲ್ಲಿ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡಿದ್ದರೆ, ಈ ಪೈಕಿ 5 ಸಾವಿರಕ್ಕಿಂತ ಹೆಚ್ಚು ಪ್ರಕರಣ ಬೆಂಗಳೂರಿನಲ್ಲೇ ಪತ್ತೆಯಾಗಿವೆ. ರಾಜಧಾನಿಯಲ್ಲಿ ಪಾಸಿಟಿವಿಟಿ ದರ ಶೇ.5.56ರಷ್ಟಿದೆ. ರಾಜ್ಯದಲ್ಲಿ 35 ಜನರು ಕೊವಿಡ್-19 ಸೋಂಕಿಗೆ ಬಲಿಯಾಗಿದ್ದರೆ, ಅದರಲ್ಲಿ 25 ಮಂದಿ ಬೆಂಗಳೂರಿನಲ್ಲೇ ಪ್ರಾಣ ಬಿಟ್ಟಿದ್ದಾರೆ. ಈ ಹಿನ್ನೆಲೆ ಗುರುವಾರ ಬಿಬಿಎಂಪಿ, ಬೆಂಗಳೂರು ನಗರ, ಗ್ರಾಮಾಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಸುಧಾಕರ್ ತಿಳಿಸಿದ್ದಾರೆ.












Click it and Unblock the Notifications