ಕೊರೊನಾ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಆರೋಗ್ಯ ಸಚಿವ ಕೆ.ಸುಧಾಕರ್
ಬೆಂಗಳೂರು, ಏಪ್ರಿಲ್ 3: ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಸರ್ಕಾರ ಜಾರಿಗೆ ತಂದಿರುವ ಹೊಸ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯಾವುದೇ ನಿರ್ಧಾರವನ್ನು ಏಕಾಏಕಿ ಕೈಗೊಂಡಿಲ್ಲ. ರಾಜ್ಯದಲ್ಲಿ ಕೊರೊನಾ 2ನೇ ಅಲೆ ಹೆಚ್ಚಾಗುತ್ತಿದೆ. ಕೊರೊನಾ ಸೋಂಕು ಪ್ರಕರಣಗಳನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಉದ್ದೇಶ ಪೂರ್ವಕವಾಗಿ ಯಾವುದೇ ನಿಯಮ ತಂದಿಲ್ಲ. ಹಾಗಾಗಿ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದರು.

ಈ ಮಾರ್ಗಸೂಚಿ ಏ.20ರವರೆಗೂ ಜಾರಿ
ಮುಂದಿನ 2 ತಿಂಗಳು ಕೊರೊನಾ ಸೋಂಕು ಹೆಚ್ಚಾಗುವ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಮಾಹಿತಿ ನೀಡಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಈ ಮಾರ್ಗಸೂಚಿ ಏ.20ರವರೆಗೂ ಜಾರಿಯಲ್ಲಿರುತ್ತದೆ ಎಂದು ತಿಳಿಸಿದರು.
ಶುಕ್ರವಾರ ಸಂಜೆ ಬಿಡುಗಡೆಯಾದ ನೂತ ಮಾರ್ಗಸೂಚಿಯಲ್ಲಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಸೂಚಿಸಲಾಗಿದೆ. ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್ಗಳ ತರಗತಿಗಳಲ್ಲಿ ಮಂಡಳಿಯ/ ವಿಶ್ವವಿದ್ಯಾಲಯಗಳ ಪರೀಕ್ಷೆ ಬರೆಯುವ ಹಾಗೂ ವೈದ್ಯಕೀಯ ಶಿಕ್ಷಣದ ತರಗತಿಗಳನ್ನು ಹೊರತುಪಡಿಸಿ ಇತರ ಎಲ್ಲಾ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ.

ಮಾಸ್ಕ್ ಧರಿಸುವುದು ಕಡ್ಡಾಯ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ ವ್ಯಾಪ್ತಿ, ಮೈಸೂರು, ಕಲಬುರಗಿ ದಕ್ಷಿಣ ಕನ್ನಡ, ಉಡುಪಿ, ಬೀದರ್ ಮತ್ತು ಧಾರವಾಡ ನಗರದ ಚಿತ್ರಮಂದಿರದಲ್ಲಿ ಶೇ.50ರಷ್ಟು ಮಾತ್ರ ಸೀಟು ಭರ್ತಿ ಮಾಡಬೇಕು. ಒಂದು ಆಸನ ಬಿಟ್ಟು ಒಂದು ಆಸನದಲ್ಲಿ ಕೂರಬೇಕು. ಅದ್ಧೂರಿ ಜಾತ್ರೆ/ ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಇತರ ಕಾರ್ಯಕ್ರಮಗಳಿಗೆ ಜನಸಂದಣಿ ಸೇರುವಂತಿಲ್ಲ. ಸಾರ್ವಜನಿಕ ಪ್ರದೇಶದಲ್ಲಿ, ವಾಹನ ಚಾಲನೆ ಮಾಡುವಾಗ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದನ್ನು ಪೊಲೀಸ್, ಸ್ಥಳೀಯ ಸಂಸ್ಥೆಗಳು ಗಮನಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಿಲಾಗಿದೆ.

ಸುರಕ್ಷತೆಯ ಹಿತದೃಷ್ಟಿಯಿಂದ ಈ ನಿರ್ಧಾರ
ಸಚಿವ ಸುಧಾಕರ್ ಅವರು ಟ್ವೀಟ್ ಮೂಲಕ ಕೊರೊನಾ ಮಾರ್ಗಸೂಚಿಗಳ ಬಗ್ಗೆ ಸ್ಪಷ್ಟನೆ ನೀಡಿದ್ದು, ಕಳೆದ ಕೆಲವು ದಿನಗಳಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಕೆಲ ಮಾರ್ಗಸೂಚಿಗಳನ್ನು ಜಾರಿ ಮಾಡಲಾಗಿದೆ ಎಂದಿದ್ದಾರೆ. ಮುಖ್ಯಮಂತ್ರಿಗಳು, ಸಚಿವ ಸಂಪುಟದ ಸದಸ್ಯರು, ತಾಂತ್ರಿಕ ಸಲಹಾ ಸಮಿತಿಯ ತಜ್ಞರು, ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಎಲ್ಲಾ ಆಯಾಮಗಳನ್ನು ಪರಿಗಣಿಸಿ ರಾಜ್ಯದ ಜನರ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ನಿರ್ಬಂಧಗಳಿಂದ ಚಿತ್ರರಂಗಕ್ಕೆ ತೊಂದರೆ
ಕಳೆದ ವರ್ಷದ ಲಾಕ್ ಡೌನ್ ಮತ್ತು ನಂತರದ ನಿರ್ಬಂಧಗಳಿಂದ ಚಿತ್ರರಂಗ ಸೇರಿದಂತೆ ಅನೇಕ ಉದ್ದಿಮೆ, ವ್ಯಾಪಾರ, ವಹಿವಾಟುಗಳಿಗೆ ತೊಂದರೆ ಆಗಿರುವುದರ ಬಗ್ಗೆ ಸರ್ಕಾರಕ್ಕೆ ಅರಿವಿದೆ, ಕಳಕಳಿಯೂ ಇದೆ. ಆದರೆ ಒಲ್ಲದ ಮನಸ್ಸಿನಿಂದ ಅನಿವಾರ್ಯವಾಗಿ ಈ ಕಠಿಣ ನಿರ್ಧಾರ ತೆಗೆದುಕೊಳ್ಳುವ ಪರಿಸ್ಥಿತಿ ಮತ್ತೆ ಎದುರಾಗಿದೆ.
Recommended Video

ಕೆಲವು ದಿನಗಳ ಕಾಲ ಕಠಿಣ ನಿಯಮ ಪಾಲಿಸಿ
ಈಗ ಲಸಿಕೆ ಸಹ ಲಭ್ಯವಿರುವುದರಿಂದ ಹೆಚ್ಚು ಹೆಚ್ಚು ಮಂದಿ ಲಸಿಕೆ ಪಡೆದು, ಕೆಲವು ದಿನಗಳ ಕಾಲ ಕಠಿಣ ನಿಯಮಗಳನ್ನು ಪಾಲಿಸಿ ನಿಮ್ಮೆಲ್ಲರ ಸಹಕಾರದಿಂದ ಪ್ರಕರಣಗಳು ಕಡಿಮೆಯಾದರೆ ಮತ್ತೆ ಎಂದಿನಂತೆ ಪೂರ್ಣ ಪ್ರಮಾಣದಲ್ಲಿ ಚಟುವಟಿಕೆಗಳನ್ನು ಪುನರಾರಂಭಿಸಬಹುದು. ಈ ನಿರ್ಧಾರ ವೈಜ್ಞಾನಿಕ ನೆಲೆಗಟ್ಟಿಯಲ್ಲಿ ರಾಜ್ಯದ ಜನರ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ತೆಗೆದುಕೊಂಡಿರುವ ಆಡಳಿತಾತ್ಮಕ ನಿರ್ಧಾರವಾಗಿದ್ದು, ಇದನ್ನು ರಾಜಕೀಯ ಅಥವಾ ಇನ್ಯಾವುದೇ ದೃಷ್ಟಿಯಿಂದ ಪರಿಗಣಿಸಬಾರದು ಎಂದು ಮನವಿ ಮಾಡುತ್ತೇನೆ ಎಂದು ಸಚಿವ ಸುಧಾಕರ್ ಟ್ವೀಟ್ ನಲ್ಲಿ ಹೇಳಿದ್ದಾರೆ.












Click it and Unblock the Notifications