ಲಸಿಕೆ ಹಾಕಿಸಿಕೊಂಡ ನಂತರ ಸೋಂಕು; ಸಚಿವ ಸುಧಾಕರ್ ಸ್ಪಷ್ಟನೆ
ಬೆಂಗಳೂರು, ಜನವರಿ 30: ಭಾರತದಾದ್ಯಂತ ಕೊರೊನಾ ಲಸಿಕಾ ಅಭಿಯಾನ ನಡೆಯುತ್ತಿದ್ದು, ಆರೋಗ್ಯ ಕಾರ್ಯಕರ್ತರಿಗೆ ಆದ್ಯತೆಯಲ್ಲಿ ಲಸಿಕೆ ನೀಡಲಾಗುತ್ತಿದೆ. ಆದರೆ ಲಸಿಕೆ ಹಾಕಿಸಿಕೊಂಡ ಕೆಲವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಲಸಿಕೆ ಬಗ್ಗೆ ಆತಂಕ, ಅನುಮಾನಗಳು ವ್ಯಕ್ತವಾಗಿವೆ.
ಕರ್ನಾಟಕದಲ್ಲಿಯೂ ಲಸಿಕೆ ಪಡೆದ ಕೆಲವರಲ್ಲಿ ಸೋಂಕು ಕಾಣಿಸಿಕೊಂಡಿರುವ ಸಂಗತಿ ಬೆಳಕಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಲಸಿಕೆ ಸುರಕ್ಷತೆ ಮತ್ತು ದಕ್ಷತೆ ಬಗ್ಗೆ ಮತ್ತೊಮ್ಮೆ ಆರೋಗ್ಯ ಸಚಿವ ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಕೊರೊನಾ ಲಸಿಕೆಯ ಮೊದಲನೇ ಡೋಸ್ ಪಡೆದ 28 ದಿನಗಳ ನಂತರ ಎರಡನೇ ಡೋಸ್ ಪಡೆಯಬೇಕಿದೆ. ಎರಡನೇ ಡೋಸ್ ಪಡೆದ 14-15 ದಿನಗಳ ನಂತರ, ಅಂದರೆ, ಮೊದಲನೇ ಡೋಸ್ ಪಡೆದ ಸುಮಾರು 45 ದಿನಗಳ ನಂತರವಷ್ಟೇ ರೋಗ ನಿರೋಧಕ ಶಕ್ತಿ ಬರಲಿದೆ. ಈ ನಡುವೆ ಲಸಿಕೆ ಪಡೆದ ವ್ಯಕ್ತಿ ವೈರಾಣುವಿನ ಸಂಪರ್ಕಕ್ಕೆ ಬಂದಿದ್ದರೆ ಸೋಂಕು ತಗುಲುವ ಸಾಧ್ಯತೆ ಇರುತ್ತದೆ ಎಂದು ವಿವರಣೆ ನೀಡಿದ್ದಾರೆ.

ಸರ್ಕಾರದಿಂದ ಅನುಮೋದನೆ ದೊರೆತಿರುವ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡೂ ಲಸಿಕೆಗಳು ಸಂಪೂರ್ಣ ಸುರಕ್ಷಿತವಾಗಿವೆ. ಈ ಲಸಿಕೆಗಳನ್ನು ಸಾರ್ವಜನಿಕರು ಯಾವುದೇ ಹಿಂಜರಿಕೆ ಇಲ್ಲದೆ ತೆಗೆದುಕೊಳ್ಳಬಹುದು. ಕೊರೊನಾ ಲಸಿಕೆಯ ಬಗ್ಗೆ ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡದೆ, ಕೇವಲ ಸರ್ಕಾರದ ಅಧಿಕೃತ ಮಾಹಿತಿಯನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.
ಕೊರೊನಾ ಲಸಿಕೆ ಪಡೆದ ಐವರು ವೈದ್ಯರಿಗೆ ಸೋಂಕು ತಗುಲಿರುವ ಸಂಗತಿ ಚಾಮರಾಜನಗರದಲ್ಲಿ ಬೆಳಕಿಗೆ ಬಂದಿದೆ. ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯ ಐದು ವೈದ್ಯರಿಗೆ ಕೊರೊನಾ ಲಸಿಕೆ ಪಡೆದ ಹತ್ತು ದಿನಗಳ ಅಂತರದಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಚಾಮರಾಜನಗರ ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.
ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದ್ದು, ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು, "ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು" ಎಂದು ಪೋಷಕರಿಗೆ ಕರೆ ನೀಡಿದ್ದಾರೆ.












Click it and Unblock the Notifications