Heat Wave: ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ ಎಚ್ಚರಿಕೆ: ಮನೆ ಬಿಟ್ಟು ಹೊರ ಬರುವ ಮುನ್ನ ಹುಷಾರ್!
ಉತ್ತರ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು ಜನ ಮನೆ ಬಿಟ್ಟು ಹೊರಬಾರದಂತ ಪರಿಸ್ಥಿತಿ ಎದುರಾಗಿದೆ. ಒಂದೆಡೆ ನೀರಿನ ಸಮಸ್ಯೆ ಮತ್ತೊಂದೆಡೆ ತಾಪಮಾನದ ಏರಿಕೆಗೆ ಜನ ತತ್ತರಿಸಿದ್ದಾರೆ. ಹೀಗಾಗಿ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಿಗೆ ಉಷ್ಣ ಅಲೆ ಎದುರಾಗಿದ್ದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
ರಾಯಚೂರು, ಗದಗ, ವಿಜಯಪುರ, ಕಲಬುರಗಿ, ಬೀದರ್ ಬಾಗಲಕೋಟೆ, ಯಾದಗಿರಿ, ಕೊಪ್ಪಳ ಮೊದಲಾದ ಜಿಲ್ಲೆಗಳಲ್ಲಿ ಉಷ್ಣ ಅಲೆಯ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದಲ್ಲಿ ಕಳೆದ ವರ್ಷ ಮುಂಗಾರು ಹಾಗೂ ಹಿಂಗಾರು ಅವಧಿಯಲ್ಲಿ ಭಾರೀ ಪ್ರಮಾಣದ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಉಂಟಾಗಿದೆ. ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದ ಹಲವು ಗ್ರಾಮ, ನಗರ ಪ್ರದೇಶದಲ್ಲಿ ಜನರು ಹನಿ ನೀರಿಗೂ ಪರದಾಡುವಂತಾಗಿದೆ.

ಈ ನಡುವೆ ಮಾನವನಿಗೆ ಮಾತ್ರವಲ್ಲದೇ ಪ್ರಾಣಿ, ಪಕ್ಷಿ ಸೇರಿದಂತೆ ಇಡೀ ಜೀವ ಸಂಕುಲಕ್ಕೆ ಉಷ್ಣ ಅಲೆ ಸಂಕಷ್ಟ ಎದುರಾಗಿದೆ. ಬೇಸಿಗೆ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಪರಿಣಾಮದಿಂದ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ವಾಡಿಕೆ ಪ್ರಮಾಣಕ್ಕಿಂತ ಮೂರರಿಂದ ಐದು ಡಿಗ್ರಿ ಸೆಲ್ಸಿಯಸ್ಗೆ ಹೆಚ್ಚಾಗಿದೆ. ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚು ದಾಖಲಾಗುತ್ತಿದೆ. ಇದರ ಪರಿಣಾಮವಾಗಿ ಉಷ್ಣ ಅಲೆ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮಾರ್ಚ್ನಲ್ಲಿ ಉಷ್ಣ ಅಲೆ ಸೃಷ್ಟಿ
ಈ ಬಗ್ಗೆ ಮಾಹಿತಿ ನೀಡಿದ ಹವಾಮಾನ ತಜ್ಞ ಶ್ರೀನಿವಾಸ ರೆಡ್ಡಿ, 'ಮಳೆ ಕೊರತೆ ಹಾಗೂ ಎಲ್ಸಿಸೋ ಪ್ರಭಾವದ ಹಿನ್ನೆಲೆಯಲ್ಲಿ ಉಷ್ಣ ಅಲೆ ರಾಜ್ಯದ ಅಲ್ಲಲ್ಲಿ ಕಾಣಿಸಿಕೊಳ್ಳಲಿದೆ. ಮೇವರೆಗೆ ಗರಿಷ್ಠ ಉಷ್ಣಾಂಶ ಹೆಚ್ಚಾಗಿ ಇರಲಿದೆ' ಎಂದರು. ಸಾಮಾನ್ಯವಾಗಿ ರಾಜ್ಯದಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೇಸಿಗೆ ಬಿಸಿ ಹೆಚ್ಚಾಗಿ ಉಷ್ಣ ಅಲೆ ಸೃಷ್ಟಿಯಾಗುತ್ತದೆ. ಆದರೆ ಈ ಬಾರಿ ಒಂದು ತಿಂಗಳ ಮೊದಲೇ ಉಷ್ಣ ಮಾರುತ ಎದುರಾಗುವ ಮುನ್ಸೂಚನೆ ಲಭ್ಯವಾಗಿದೆ. ಕಳೆದ ವರ್ಷ ಸಹ ಇದೇ ಅವಧಿಯಲ್ಲಿ ರಾಜ್ಯದ ಕರಾವಳಿಯ ಕಾರವಾರ, ಹೊನ್ನಾವರದಲ್ಲಿ ದಾಖಲೆಯ ಪ್ರಮಾಣ ಗರಿಷ್ಠ ಉಷ್ಣಾಂಶ ದಾಖಲಾಗಿ ಉಷ್ಣ ಮಾರುತ ಸೃಷ್ಟಿಯಾಗಿತ್ತು.

ಗರಿಷ್ಠ ಉಷ್ಣಾಂಶ ದಾಖಲಾಗುತ್ತಿರುವ ಜಿಲ್ಲೆಗಳ ಮೇಲೆ ಹವಾಮಾನ ಇಲಾಖೆ ನಿಗಾವಹಿಸಿದ್ದು, ಸತತವಾಗಿ ನಾಲ್ಕು ಕೇಂದ್ರದಲ್ಲಿ ಸಾಮಾನ್ಯಕ್ಕಿಂತ 4ರಿಂದ5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳವಾಗಬೇಕು. ಮೂರು ಜಿಲ್ಲೆಗಳಲ್ಲಿ ಈ ರೀತಿ ಕಂಡುಬಂದರೆ ಮಾತ್ರ ಉಷ್ಣ ಅಲೆಯನ್ನು ಹವಾಮಾನ ಇಲಾಖೆ ಘೋಷಣೆ ಮಾಡಲಿದೆ. ಹೀಗಾಗಿ ಉಷ್ಣಾಂಶದ ಅಂಕಿ-ಅಂಶಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯವಾಗಿ ಕಳೆದ ವರ್ಷ ಮಳೆ ಕೊರತೆಯಿಂದ ಇದೀಗ ಗಾಳಿ ಮತ್ತು ಮಣ್ಣು ಎರಡರಲ್ಲಿಯೂ ತೇವಾಂಶದ ಕೊರತೆ ಇದೆ. ಜಾಗತಿಕ ಮಟ್ಟದಲ್ಲಿ ಎಲ್ನಿಯೋ ಪ್ರಭಾವ ಇರುವುದು ಉಷ್ಣ ಅಲೆ ಸೃಷ್ಟಿಗೆ ಪ್ರಮುಖ ಕಾರಣವಾಗಿದೆ.
ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆ ಮುನ್ಸೂಚನೆ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಲೇ ಇದೆ. ಆದ್ರೆ ಕೆಲವೆಡೆ ಮೊದಲ ಮಳೆಯಾಗಿದೆ. ಇಂದು ಸಹ ಕೆಲವೆಡೆ ಲಘು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕೊಡಗು ಮತ್ತು ದಕ್ಷಿಣ ಕನ್ನಡದ ಘಟ್ಟಗಳ ಭಾಗಗಳಲ್ಲಿ ಇಂದು ಲಘು ಮಳೆಯಾಗುವ ಸಾಧ್ಯತೆ ಇದೆಯಂತೆ. ಜನ ಸಹ ಮಳೆಗಾಗಿ ಕಾಯ್ತಾ ಇದ್ದಾರೆ.
ನಿನ್ನೆ ಚಿಕ್ಕಮಗಳೂರಿನಲ್ಲಿ ವರ್ಷದ ಮೊದಲ ಮಳೆಯಾಗಿದೆ. ಒಂದೇ ಗಂಟೆಗೆ ಒಂದೂವರೆ ಇಂಚಿನಷ್ಟು ಮಳೆಯಾಗಿದೆ. ಮಳೆ ಕಂಡು ರೈತರು ಸಂತಗೊಂಡಿದ್ದಾರೆ.ಮಡಿಕೇರಿ, ಭಾಗಮಂಡಲ, ಸುಳ್ಯ, ವಿರಾಜಪೇಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾರ್ಚ್ 20ರ ನಂತರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಇನ್ನೂ ರಾಜ್ಯದ ಬೇರೆ ಬೇರೆ ಕಡೆ ಒಣಹವೆ ಮುಂದುವರೆಯಲಿದೆ. ಬೆಂಗಳೂರಲ್ಲೂ ಹೆಚ್ಚು ಬಿಸಿಲಿದೆ. ಉಷ್ಣಾಂಶ ಹೆಚ್ಚಾಗಲಿದೆ ಎಂದು ತಿಳಿದು ಬಂದಿದೆ.












Click it and Unblock the Notifications