School Holidays: ಕರುನಾಡಿನಲ್ಲಿ ಮುಂಗಾರು ಅಬ್ಬರ; ಈ ಜಿಲ್ಲೆಗಳಿಗೆ ರೆಡ್ ಅಲರ್ಟ್, ಶಾಲಾ- ಕಾಲೇಜುಗಳಿಗೆ ರಜೆ
ಕರ್ನಾಟಕದಲ್ಲಿ ಒಂದು ತಿಂಗಳ ನಂತರ ಮುಂಗಾರು ಮಳೆಯ ಅಬ್ಬರ ಮರುಕಳಿಸಿದೆ. ವರುಣ ದೇವನು ಮತ್ತೆ ತನ್ನ ಪ್ರತಾಪವನ್ನು ತೋರಿಸಲು ಆರಂಭಿಸಿದ್ದು, ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮುಂಗಾರು ಚುರುಕುಗೊಂಡಿರುವುದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವಿಶೇಷವಾಗಿ ಮಲೆನಾಡು, ಕರಾವಳಿ ಮತ್ತು ಕೊಡಗು ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆಡಳಿತ ಮಂಡಳಿಗಳು ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿವೆ.
ಕೊಡಗು ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
ಕಾಫಿ ನಾಡು ಕೊಡಗು ಜಿಲ್ಲೆಯಲ್ಲಿ ಭಾರಿ ಗಾಳಿ ಮತ್ತು ಮಳೆಯಿಂದಾಗಿ ಜನಜೀವನ ತತ್ತರಿಸಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ಮುಂಜಾಗ್ರತಾ ಕ್ರಮವಾಗಿ ಕೊಡಗಿನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ ಕೇಂದ್ರಗಳು ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ನಾಳೆ ಒಂದು ದಿನದ ಮಟ್ಟಿಗೆ ರಜೆಯನ್ನು ನೀಡಿದೆ. ರಸ್ತೆಗಳು ಜಲಾವೃತಗೊಂಡಿದ್ದು, ಗುಡ್ಡ ಕುಸಿತದ ಭೀತಿ ಇರುವುದರಿಂದ ವಿದ್ಯಾರ್ಥಿಗಳು ಮನೆಯಲ್ಲೇ ಸುರಕ್ಷಿತವಾಗಿರುವಂತೆ ಆಡಳಿತ ಮಂಡಳಿ ಸೂಚಿಸಿದೆ.

ಸಾಗರ ತಾಲೂಕಿನಲ್ಲಿಯೂ ಶಾಲಾ-ಕಾಲೇಜುಗಳಿಗೆ ರಜೆ
ಮತ್ತೊಂದೆಡೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲೂ ಮಳೆಯ ಅಬ್ಬರ ಹೆಚ್ಚಾಗಿದೆ. ಭಾರಿ ಮಳೆಯಿಂದಾಗಿ ತಾಲೂಕಿನಾದ್ಯಂತ ನದಿಗಳು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ನೀರಿನ ಹರಿವು ಹೆಚ್ಚಾಗಿರುವುದರಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಹಾಗೂ ಅಪಾಯದ ಮಟ್ಟ ಮೀರುವ ಸಾಧ್ಯತೆ ಇದೆ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಾಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಾಗರ ತಹಶೀಲ್ದಾರ್ ಡಾ. ಪ್ರತಿಭಾ ಅವರು ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದು, ನಾಳೆ ಶಾಲಾ-ಕಾಲೇಜುಗಳು, ಡಿಪ್ಲೊಮಾ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ರೆಡ್ ಅಲರ್ಟ್
ಕಳೆದ ಎರಡು-ಮೂರು ದಿನಗಳಿಂದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಬಿಟ್ಟು ಬಿಡದೆ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಮುಂಬರುವ ಮೂರು ದಿನಗಳ ಕಾಲ ರಾಜ್ಯದಲ್ಲಿ ಮತ್ತಷ್ಟು ಮಳೆಯಾಗುವ ಮುನ್ಸೂಚನೆ ನೀಡಿದೆ.
ಅಷ್ಟೇ ಅಲ್ಲದೆ, ಇಂದು ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇರುವುದರಿಂದ ಈ ಹವಾಮಾನ ಮುನ್ನೆಚ್ಚರಿಕೆ ನೀಡಲಾಗಿದೆ.
ಮುಂಗಾರಿನ ಅಬ್ಬರ: ಕೃಷಿ ಹಾನಿ
ಜೂನ್ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದರಿಂದ ನಿರಾಸೆಗೊಂಡಿದ್ದ ರೈತರಿಗೆ, ಜುಲೈ ತಿಂಗಳ ಮಳೆ ಕೊಂಚ ನೆಮ್ಮದಿ ತಂದರೂ, ಜೊತೆಯಲ್ಲೇ ಅತಿವೃಷ್ಟಿ ಆತಂಕವನ್ನು ಸೃಷ್ಟಿಸಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಾರವಾಡದಲ್ಲಿ ಭಾರಿ ಕಡಲ ಕೊರೆತದ ಭೀತಿ ಎದುರಾಗಿದೆ. ಸಮುದ್ರದ ದೊಡ್ಡ ದೊಡ್ಡ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದ್ದು, ಸಮುದ್ರ ತೀರದಲ್ಲಿರುವ ಎರಡು ಮನೆಗಳು ನೀರುಪಾಲಾಗುವ ಆತಂಕ ಎದುರಾಗಿದೆ.
ಇನ್ನು ಮಲೆನಾಡು ಭಾಗದಲ್ಲಿ ಮಳೆಯ ಜೊತೆಗೆ ಭಾರಿ ಬಿರುಗಾಳಿ ಬೀಸುತ್ತಿದ್ದು, ಅಪಾರ ಕೃಷಿ ಹಾನಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಉತ್ತಮೇಶ್ವರದ ಅಗ್ರವಳ್ಳಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 60ಕ್ಕೂ ಹೆಚ್ಚು ಅಡಿಕೆ ಮರಗಳು ಧರೆಗುರುಳಿವೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಮುಂದಿನ ಕೆಲವು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇರುವುದರಿಂದ, ನದಿಪಾತ್ರದ ಜನರು, ಪ್ರವಾಸಿಗರು ಮತ್ತು ಮೀನುಗಾರರು ನದಿ ಹಾಗೂ ಸಮುದ್ರದತ್ತ ತೆರಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.












Click it and Unblock the Notifications