Karnataka Rain: ರಾಜ್ಯದಲ್ಲಿ ಭಾರಿ ಮಳೆ; ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಮುಂಗಾರು ಆರಂಭಕ್ಕೆ ಮುನ್ನವೇ ಅಬ್ಬರಿಸಿದ್ದ ಮಳೆ ಬಳಿಕ ಮಾಯವಾಗಿತ್ತು. ರಾಗಿ, ಶೇಂಗಾ, ಜೋಳ ಸೇರಿದಂತೆ ಮಳೆಯಾಶ್ರಿತ ಬೆಳೆಗಳನ್ನು ಹಾಕಿದ್ದ ರೈತರು ಮಳೆ ಕೈಕೊಟ್ಟ ಕಾರಣ ಕಂಗಾಲಾಗಿದ್ದರು. ರಾಜ್ಯದಲ್ಲಿ ಇದೀಗ ಮತ್ತೆ ಮಳೆ ಚುರುಕು ಪಡೆಯುತ್ತಿದ್ದು, ಮುಂದಿನ ಐದು ದಿನಗಳ ಕಾಲ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.
ಶನಿವಾರ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ದಕ್ಷಿಣ ಒಳನಾಡಿನ ವಿವಿಧ ಕಡೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಕೂಡ ಶನಿವಾರ ರಾತ್ರಿ ಉತ್ತಮ ಮಳೆಯಾಗಿದೆ. ಶನಿವಾರ ಬೆಂಗಳೂರಿನ ಮಹದೇವಪುರದ ದೊಡ್ಡನೆಕ್ಕುಂದಿಯಲ್ಲಿ 107.5 ಮಿ.ಮೀ ಮಳೆಯಾಗಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಸವನಪುರದಲ್ಲಿ 173.5 ಮಿ.ಮೀ ಮಳೆಯಾಗಿದ್ದು ಕಳೆದ 24 ಗಂಟೆಯಲ್ಲಿ ಹೆಚ್ಚು ಮಳೆಯಾಗಿದೆ.

ಮುಂದಿನ ಐದು ದಿನ ಭಾರಿ ಮಳೆ
ಮುಂದಿನ ಐದು ದಿನಗಳ ಕಾಲ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 2ರವರೆಗೂ ಗುಡುಗು ಮಿಂಚು ಮತ್ತು ಭಾರಿ ಗಾಳಿ ಸಹಿತ ಭಾರಿ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು ಬಳಿಕ ಮಳೆ ಅಬ್ಬರ ಕಡಿಮೆಯಾಗಲಿದೆ. ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಭಾನುವಾರ ಚದುರಿದಂತೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಈ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್
ಭಾನುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ಗದಗ, ತುಮಕೂರು, ಚಿಕ್ಕಮಗಳೂರು, ವಿಜಯಪುರ, ಬಾಗಲಕೋಟೆ, ಕೊಡಗು, ದಕ್ಷಿಣ ಕನ್ನಡ, ಶಿವಮೊಗ್ಗ, ಹಾವೇರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ.
ಶನಿವಾರ ಈ ಭಾಗದಲ್ಲಿ ಉತ್ತಮ ಮಳೆ
ಶನಿವಾರ ಮಂಡ್ಯ ಜಿಲ್ಲೆಯ ವಿವಿಧ ಕಡೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಎಚ್. ಬಸವಪುರದಲ್ಲಿ 173.5 ಮಿ.ಮೀ ಮಳೆಯಾಗಿದೆ. ತೊರೆಕಾಡನಹಳ್ಳಿ 161.5 ಮಿ.ಮೀ ಮಳೆಯಾಗಿದೆ. ನೆಲಮಕನಹಳ್ಳಿ 148 ಮಿ.ಮೀ, ಡಿ.ಕೆ. ಹಳ್ಳಿ 133 ಮಿ.ಮೀ ಮಳೆಯಾಗಿದೆ. ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಬಿಜ್ಜವರ 127.5 ಮಿಮೀ ಮಳೆಯಾಗಿದೆ. ರಾಮನಗರ ಜಿಲ್ಲೆಯ 118.5 ಮಿ.ಮೀ ಮಳೆಯಾಗಿದೆ. ತುಮಕೂರು ಜಿಲ್ಲೆಯ ಸೋರೆಕುಂಟೆಯಲ್ಲಿ 109.5 ಮಿ.ಮೀ ಮಳೆಯಾಗಿದೆ.












Click it and Unblock the Notifications