Heavy Rain Alert: ಈ ಜಿಲ್ಲೆಗಳಿಗೆ ಗುಡುಗು, ಸಿಡಿಲು ಸಹಿತ ಮಳೆ ಎಚ್ಚರಿಕೆ
ಒಂದು ಕಡೆ ಚಳಿ ಮತ್ತೊಂದು ಕಡೆ ತುಂತುರು ಮಳೆ, ಭಾನುವಾರ ಬೆಂಗಳೂರು ಜನತೆಗೆ ಹವಾಮಾನ ಶಾಕ್ ಕೊಟ್ಟಿದೆ. ಮುಂಜಾನೆ ಎದ್ದವರಿಗೆ ಸೋನೆ ಮಳೆ ಸ್ವಾಗತಿಸಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರ ತುಂತುರು ಮಳೆಯಾದರೆ ಇನ್ನೂ ಹಲವು ಕಡೆಗಳಲ್ಲಿ ಸಾಧಾರಣ ಮಳೆ ಸುರಿದಿದೆ. ಜನವರಿಯಲ್ಲಿ ಕೂಡ ಮಳೆಯಾಗುತ್ತಿರುವುದು ವಾತಾವರಣವನ್ನು ಏರುಪೇರಾಗಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಕೂಡ ಮಳೆ ಮುನ್ಸೂಚನೆ ಇದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆ ಗುಡುಗು, ಸಿಡಿಲಿನೊಂದಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಭಾನುವಾರ ರಾತ್ರಿ ಈ ಎರಡೂ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹೇಳಿದೆ.

ಇನ್ನೂ ನಾಲ್ಕು ದಿನ ಮಳೆ ಸಾಧ್ಯತೆ
ಮುಂದಿನ ನಾಲ್ಕು ದಿನಗಳ ಕಾಲ ಇದೇ ವಾತಾವರಣ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಕೆಲವು ಕಡೆಗಳಲ್ಲಿ ಸಾಧಾರಣ ಮಂಜು ಇದ್ದರೆ ಇನ್ನೂ ಕೆಲವು ಕಡೆಗಳಲ್ಲಿ ದಟ್ಟ ಮಂಜು ಮುಸುಕಿನ ವಾತಾವರಣ ಇರಲಿದೆ ಎಂದು ತಿಳಿಸಿದೆ.
ಕಡಿಮೆಯಾಗಲಿದೆ ಚಳಿ
ಮೋಡ ಕವಿದ ವಾತಾವರಣ ಇರುವ ಕಾರಣ ಮುಂದಿನ ನಾಲ್ಕು ದಿನಗಳು ಚಳಿಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಭಾನುವಾರ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದರೆ ಅಲ್ಲಲ್ಲಿ ತುಂತುರು ಮಳೆಯಾಗಿದೆ. ತುಮಕೂರು ಜಿಲ್ಲೆಯಲ್ಲಿ ಹಲವು ಕಡೆಗಳಲ್ಲಿ ಭಾನುವಾರ ಸಾಧಾರಣ ಮಳೆಯಾಗಿದೆ ಎಂದು ವರದಿಯಾಗಿದೆ.ಜಲಾಶಯಗಳಲ್ಲಿ ನೀರಿನ ಮಟ್ಟ
ರಾಜ್ಯದಲ್ಲಿ ಕಳೆದ ಮುಂಗಾರು ಮತ್ತು ಹಿಂಗಾರಿನಲ್ಲಿ ಉತ್ತಮ ಮಳೆಯಾಗಿದ್ದು ರಾಜ್ಯದ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ವಾಣಿ ವಿಲಾಸ ಸಾಗರ ಈಗ ಭರ್ತಿಯಾಗಿದ್ದು ಚಿತ್ರದುರ್ಗ ಜಿಲ್ಲೆಯ ಹಲವು ತಾಲೂಕಿನ ನೀರಿನ ಭವಣೆ ನೀಗಿದೆ.
ಕೃಷ್ಣರಾಜ ಸಾಗರ (ಕೆಆರ್ ಎಸ್) ಜಲಾಶಯದಲ್ಲಿ ಇನ್ನು ಭಾರಿ ಪ್ರಮಾಣದಲ್ಲಿ ನೀರಿನ ಸಂಗ್ರಹವಿದ್ದು ಈ ಬಾರಿ ಬೇಸಿಗೆಯಲ್ಲಿ ನೀರಿನ ಕೊರತೆ ಕಾಡುವುದಿಲ್ಲ ಎಂದು ನಿರೀಕ್ಷೆ ಮಾಡಲಾಗಿದೆ. ತಮಿಳುನಾಡು ಕೂಡ ಕ್ಯಾತೆ ಮಾಡುವ ಸಾಧ್ಯತೆ ಕಡಿಮೆ ಇದೆ.












Click it and Unblock the Notifications