Karnataka Rain: ಭಾರೀ ಮಳೆ, ರಾಜ್ಯದ ವಿವಿಧೆಡೆ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ
ಬೆಳಗಾವಿ, ಜುಲೈ 25: ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 25 ರಂದು ಬೆಳಗಾವಿಯ ಖಾನಾಪುರದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಕಲಬುರಗಿ, ಬೀದರ್, ಯಾದಗಿರಿ ಮತ್ತು ವಿಜಯಪುರ ಎಂಬ ನಾಲ್ಕು ಜಿಲ್ಲೆಗಳಲ್ಲಿ ನಿನ್ನೆ ರಾಜ್ಯ ಸರ್ಕಾರ ಕಟ್ಟೆಚ್ಚರ ವಹಿಸಿದೆ.

ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ಶೇ 170ರಷ್ಟು ಹೆಚ್ಚು ಮಳೆಯಾಗಿದೆ. ಕಲಬುರಗಿಯಲ್ಲಿ ಶೇ.300; ಯಾದಗಿರಿ- ಶೇ.160, ಬೀದರ್- ಶೇ.155, ಬೆಳಗಾವಿ- ಶೇ.186, ಬಾಗಲಕೋಟೆ- ಶೇ.174, ವಿಜಯಪುರ- ಶೇ.185 ಮತ್ತು ಗದಗ- ಶೇ.166. ಜುಲೈ 28 ರವರೆಗೆ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮುಂದಿನ ನಾಲ್ಕು ದಿನಗಳು ನಿರ್ಣಾಯಕ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ವಿಧಾನಸೌಧದಲ್ಲಿ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೈರೇಗೌಡ, ಭಾರಿ ಮಳೆ ಹಿನ್ನೆಲೆಯಲ್ಲಿ ಸಂಭವಿಸಿದ ದುರಂತಗಳಿಂದ 27 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈಗ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡದಲ್ಲಿ ಒಂದು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ ಎಂದು ತಿಳಿಸಿದ್ದಾರೆ.
ಇತ್ತ ಮಡಿಕೇರಿ ಬಳಿ ಮದೆನಾಡು ಕರ್ತೋಜಿ ಎಂಬಲ್ಲಿ ಭೂಕುಸಿತ ಉಂಟಾಗಿದ್ದು, ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಇದರಿಂದ ನೂರಾರು ವಾಹನಗಳು ರಸ್ತೆಯ ಇಕ್ಕೆಲಗಳಲ್ಲಿ ನಿಂತಿವೆ. ಮಣ್ಣು ತೆರವು ಮಾಡಲು ಮಣ್ಣು ತೆಗೆಯುವ ಯಂತ್ರಗಳನ್ನು ಅಳವಡಿಸಲಾಗಿದೆ.
ತಹಶೀಲ್ದಾರ್ ಕಿರಣ ಗೌರಯ್ಯ ಮಾತನಾಡಿ, ರಸ್ತೆಯಲ್ಲಿನ ಮಣ್ಣು ತೆರವು ಮಾಡಿದ ನಂತರವೇ ವಾಹನಗಳಿಗೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ದ.ಕ., ಉಡುಪಿ ಮತ್ತು ಕೊಡಗು ಜಿಲ್ಲೆಗಳ ಸಂಯೋಜಿತ ಕಾಲೇಜುಗಳಲ್ಲಿ ಯುಜಿ ವಿದ್ಯಾರ್ಥಿಗಳಿಗೆ ನಿಗದಿಯಾಗಿದ್ದ ಎಲ್ಲಾ ಪರೀಕ್ಷೆಗಳನ್ನು ಮಂಗಳವಾರ ಮುಂದೂಡಿದೆ.
ಪರಿಷ್ಕೃತ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ (ಮೌಲ್ಯಮಾಪನ) ಡಾ ರಾಜು ಕೃಷ್ಣ ಚಲನ್ನವರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದೇ ವೇಳೆ, ಜುಲೈ 25 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.












Click it and Unblock the Notifications