ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಸಿಎಂ ತುರ್ತುಸಭೆ
ಬೆಂಗಳೂರು, ನ.5: ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ತತ್ತರಿಸಿದೆ. ತುರ್ತು ಪರಿಹಾರ ಕಾಮಗಾರಿಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗಳೊಂದಿಗೆ ಶುಕ್ರವಾರ ತುರ್ತು ಸಭೆ ನಡೆಸಿದರು.
ನಗರದಲ್ಲಿ ಕಳೆದೊಂದು ತಿಂಗಳಿನಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಮುಂಗಾರು ಅವಧಿ ಪೂರ್ಣಗೊಂಡಿದ್ದರೂ ಸಹ ನಗರದಲ್ಲಿ ಮಳೆ ಮಾತ್ರ ನಿಂತಿಲ್ಲ. ದಿನಬಿಟ್ಟು ದಿನ ಅಥವಾ ವಾರದಲ್ಲಿ ಮೂರ್ನಾಲ್ಕು ದಿನ ನಿರಂತರ ಮಳೆ ಸುರಿಯುತ್ತಿದೆ. ಬಹುತೇಕ ಪ್ರತಿನಿತ್ಯವೂ ಮೋಡ ಮುಸುಕಿದ ವಾತಾವರಣ ಇದೆ. ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.\
ಕಳೆದ ಅ.18ರಂದ ನಗರ ಪ್ರದಕ್ಷಿಣೆ ಮಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಳೆಯಿಂದ ಹಾನಿಗೆ ಒಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಲ್ಲದೆ, ಮಳೆ ನಿಂತ ತಕ್ಷಣವೇ ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ಯುದ್ಧೋಪಾದಿಯಲ್ಲಿ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ, ಇದುವರೆಗೂ ಯಾವುದೇ ಕಾಮಗಾರಿ ಪ್ರಾರಂಭ ಆಗುವುದರಿಂದ ಜನಸಾಮಾನ್ಯರು ಮತ್ತಷ್ಟು ತೊಂದರೆಗೆ ಸಿಲುಕಿದ್ದಾರೆ.
ನಗರದಲ್ಲಿ ಒಂದು ತಾಸಿಗೂ ಹೆಚ್ಚು ಕಾಲ ಜೋರಾದ ಮಳೆ ಬಿದ್ದರೆ ನಗರದ ರಸ್ತೆಗಳು ನದಿಯಂತಾಗುತ್ತವೆ. ರಸ್ತೆ ಮಧ್ಯದಲ್ಲಿ ಎಲ್ಲೆಂದರಲ್ಲಿ ವಾಹನಗಳು ನೀರುತುಂಬಿಕೊಂಡು ನಿಲ್ಲುತ್ತವೆ. ಮಳೆ ಕಾರಣದಿಂದಾಗಿ ಸಂಚಾರ ದಟ್ಟಣೆ ಉಂಟಾಗುತ್ತದೆ. ಕನಿಷ್ಠ ಮಳೆಗೂ ಸಹ ನಗರದ ಸಿದ್ಧ ಇಲ್ಲದಿರುವುದು ಜನರನ್ನು ಮತ್ತಷ್ಟು ತೊಂದರೆಗೆ ಸಿಲುಕಿಸಿದೆ. ಮಳೆಗಾಲಕ್ಕೆ ಪೂರ್ವಭಾವಿಯಾಗಿ ಮಾಡಬೇಕಾದ ಕಾಮಗಾರಿಗಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವುದೇ ಜನರನ್ನು ಈ ತೊಂದರೆಗೆ ಸಿಲುಕಿಸಿದೆ.
ಮುಖ್ಯಮಂತ್ರಿ ತುರ್ತು ಸಭೆ:
ನಗರದಲ್ಲಿ ಮಳೆಯಿಂದ ಉಂಟಾಗುತ್ತಿರುವ ಅವಾಂತರಗಳು ಮತ್ತು ಪರಿಹಾರ ಕಾಮಗಾರಿಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ತುರ್ತು ಸಭೆ ನಡೆಸಿದರು.
ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿ ಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತಾ ಮತ್ತು ಇತರರು ಉಪಸ್ಥಿತರಿದ್ದರು.
ನಗರದಲ್ಲಿ ಬಿಬಿಎಂಪಿ, ಬೆಂಗಳೂರು ಜಲಮಂಡಳಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಬೆಸ್ಕಾಂ ಕಾಮಗಾರಿಗಳು ನಿರಂತರವಾಗಿ ನಡೆಯುತ್ತಿರುತ್ತವೆ. ಆದರೆ, ಒಂದು ಸಂಸ್ಥೆಯೊಂದಿಗೆ ಮತ್ತೊಂದು ಸಂಸ್ಥೆ ಸಮರ್ಪಕ ಸಂಪರ್ಕ ಇಲ್ಲದೆ ಕಾಮಗಾರಿಗಳನ್ನು ನಡೆಸುತ್ತಿರುವುದರಿಂದ ನಾನಾ ಅವಾಂತರಗಳಿಗೆ ಕಾರಣವಾಗುತ್ತಿದೆ.
Recommended Video
ಈ ವಿಷಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿಂದೆಯೂ ಸಹ ಹೇಳಿದ್ದರು. ಈ ಎಲ್ಲ ಸಂಸ್ಥೆಗಳು ಆಂತರಿಕವಾಗಿ ಸಂಪರ್ಕ ಸಾಧಿಸಿಕೊಂಡು, ಸಹಯೋಗದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗುವುದು ಎಂದು ಹೇಳಿದ್ದರು. ಶುಕ್ರವಾರ ನಡೆದ ಸಭೆಯಲ್ಲಿ ಈ ಎಲ್ಲ ಸಂಸ್ಥೆಗಳ ಮುಖ್ಯಸ್ಥರೂ ಹಾಜರಿದ್ದರು.