ಕರ್ನಾಟಕ ಕರಾವಳಿಯಲ್ಲಿ ಜೂನ್ 13ರ ತನಕ ಮಳೆ
ಬೆಂಗಳೂರು, ಜೂನ್ 09; ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 10 ರಿಂದ 13ರ ತನಕ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಈಗಾಗಲೇ ರಾಜ್ಯ ಪ್ರವೇಶಿಸಿದರೂ ಮಳೆಯಾಗುತ್ತಿಲ್ಲ.
ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮೂರು ದಿನ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಗಾರು ರಾಜ್ಯಕ್ಕೆ ಪ್ರವೇಶವಾದ ಮೇಲೆ ಎರಡು ದಿನಗಳ ಕಾಲ ಮಳೆಯಾಗಿತ್ತು, ಬಳಿಕ ಮಳೆ ಕಡಿಮೆಯಾಗಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಈ ವಾರ ಪೂರ್ತಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಅವಧಿಯಲ್ಲಿ ರಾಜ್ಯದ 23 ಜಿಲ್ಲೆಯಲ್ಲಿ ವಾಡಿಕೆಯಷ್ಟು ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಸೋಮವಾರ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿತ್ತು. ರಾಯಚೂರು ಜಿಲ್ಲೆಯ ಮುದ್ಗಲ್ನಲ್ಲಿ 2 ಸೆಂ. ಮೀ., ಉತ್ತರ ಕನ್ನಡದ ಕದ್ರಾ ಮತ್ತು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ 1 ಸೆಂ. ಮೀ. ಮಳೆಯಾಗಿತ್ತು.
ಮಂಗಳವಾರ ಕೊಡಗು ಜಿಲ್ಲೆಯ ಪೊನ್ನಂಪೇಟೆ, ತಿತಿಮತಿ ಮತ್ತು ಮಡಿಕೇರಿಯಲ್ಲಿ ಸಾಧಾರಣ ಮಳೆಯಾಗಿದೆ. ಕಾರವಾರ ಮತ್ತು ಶಿರಸಿಯಲ್ಲಿ ಜಿಟಿಜಿಟಿ ಮಳೆ ಸುರಿದಿದೆ. ದಾಂಡೇಲಿ, ಜೋಯಿಡಾ, ಅಂಕೋಲಾ, ಸಿದ್ದಾಪುರ, ಹೊನ್ನಾವರ ಮತ್ತು ಗೋಕರ್ಣ ಸುತ್ತಮುತ್ತಲೂ ಮಳೆಯಾಗಿದೆ.












Click it and Unblock the Notifications