Karnataka Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ರಜೆ!
ಕೆಲ ದಿನಗಳಿಂದ ತಣ್ಣಗಾಗಿದ್ದ ಮಳೆರಾಯ ಮತ್ತೆ ಅಬ್ಬರಿಸುತ್ತಿದ್ದು, ಕರ್ನಾಟಕದಲ್ಲಿ ಮಳೆ ಆರ್ಭಟ ಜೋರಾಗಿದೆ. ಅದರಲ್ಲೂ ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ವರುಣ ದೇವನ ಕಾಟಕ್ಕೆ ಜನರು ಬೆಚ್ಚಿಬಿದ್ದಿದ್ದಾರೆ. ಮುಂದಿನ ಕೆಲ ದಿನಗಳ ಕಾಲ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಇದೇ ರೀತಿ ಮಳೆ ಬೀಳುವ ಮುನ್ಸೂಚನೆ ಇದ್ದು, ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.
ಹೌದು, ಈ ಬಾರಿ ಮುಂಗಾರು ಮಳೆ ಪ್ರವೇಶ ಸಾಕಷ್ಟು ನಿಧಾನವಾಗಿತ್ತು. ಇದೇ ಕಾರಣಕ್ಕೆ ರಾಜ್ಯದಲ್ಲಿ ಬರದ ಭೀತಿ ಎದುರಾಗಿತ್ತು. ಆದರೆ ಜುಲೈ ತಿಂಗಳ ಆರಂಭದಿಂದಲೇ ಮಳೆಯ ಅಬ್ಬರ ಜೋರಾಗಿ, ಬಹುತೇಕ ಒಣಗಿ ಹೋಗಿದ್ದ ರಾಜ್ಯದ ಹಲವು ಜಲಾಶಯಗಳು ಇದೀಗ ತುಂಬಿ ತುಳುಕುವ ಹಂತಕ್ಕೆ ಬಂದಿವೆ. ಆದರೆ ಭಾರಿ ಮಳೆಯ ಕಾರಣ ಜನಜೀವನ ಕೂಡ ಅಸ್ತವ್ಯಸ್ತವಾಗಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಮಳೆ ಬಿಟ್ಟುಬಿಡದೆ ಸುರಿಯುತ್ತಿರುವ ಕಾರಣ ಜನ ಚಿಂತಿಸುವಂತಾಗಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಕೆಲ ಜಿಲ್ಲೆಗಳ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಯಾವ ಯಾವ ಜಿಲ್ಲೆಯಲ್ಲಿ ರಜೆ ಘೋಷಣೆ?
ಮೊದಲನೇ ವಿಚಾರ ಏನೆಂದರೆ ಕರಾವಳಿ ರೀತಿ ಮಲೆನಾಡು ಭಾಗದಲ್ಲೂ ಮಳೆ ಅಬ್ಬರವು ಜೋರಾಗಿದೆ. ಹೀಗಾಗಿ ಉತ್ತರಕನ್ನಡದಲ್ಲಿ ಭಾರೀ ಮಳೆ ಹಿನ್ನಲೆ ನಾಳೆ ಅಂದ್ರೆ ಸೋಮವಾರ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ. ಕಾರವಾರ, ಕುಮಟ, ಹೊನ್ನಾವರ, ಭಟ್ಕಳ & ಯಲ್ಲಾಪುರ ಸೇರಿ ಆಯಾ ತಾಲೂಕು ತಹಶಿಲ್ದಾರರು ರಜೆ ಘೋಷಣೆ ಮಾಡಿದ್ದಾರೆ. ಸಿಕ್ಕಾಪಟ್ಟೆ ಮಳೆ ಬೀಳುತ್ತಿರುವ ಹಿನ್ನಲೆಯಲ್ಲಿ ಬಹುಪಾಲು ಜಲಾಶಯಗಳು ಭರ್ತಿಯಾಗಿವೆ. ಜಿಲ್ಲೆಯಲ್ಲಿ ಇನ್ನೂ ಎರಡು ದಿನಗಳ ಕಾಲ ಇದೇ ರೀತಿಯಾಗಿ ಮಳೆ ಬೀಳುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಾವೇರಿ ತವರು ಜಿಲ್ಲೆಯಲ್ಲೂ ಅಬ್ಬರ!
ಇನ್ನು ಕನ್ನಡಿಗರ ನಾಡಿನ ಜೀವನದಿ ಕಾವೇರಿ ಹುಟ್ಟುವ ಪುಣ್ಯಸ್ಥಳ ಕೊಡಗು ಕೂಡ ಭಾರಿ ಮಳೆಗೆ ತತ್ತರಿಸಿದೆ. ಕೊಡಗಿನಲ್ಲಿ ಧಾರಾಕಾರ ಮಳೆಯಾಗಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ನಾಳೆ ಅಂದ್ರೆ ಸೋಮವಾರ ಶಾಲಾ & ಕಾಲೇಜಿಗೆ ರಜೆ ಘೋಷಿಸಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನಲ್ಲಿ ಎಲ್ಲಾ ಶಾಲೆ ಮತ್ತು ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಶಿವಮೊಗ್ಗದಲ್ಲಿ ಕಳೆದ 4 ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ. ಹಾಸನದಲ್ಲೂ ಧಾರಕಾರ ಮಳೆಯಾಗುತ್ತಿರುವ ಕಾರಣ ಶಾಲೆ, ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಕರ್ನಾಟಕದ ಬಹುತೇಕ ಜಿಲ್ಲೆಯಲ್ಲಿ ಮಳೆ!
ಇದಿಷ್ಟೇ ಅಲ್ಲದೆ ಮುಂದಿನ ಕೆಲವು ದಿನಗಳ ಕಾಲ ಮತ್ತೆ ಇದೇ ರೀತಿಯಾಗಿ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ & ಕೊಡಗು ಜಿಲ್ಲೆಗಳಲ್ಲಿ ಜುಲೈ 24 ಹಾಗೂ 25ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ 26ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ನೀಡಲಾಗಿದೆ. ಹೀಗಾಗಿ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮವನ್ನ ಕೈಗೊಳ್ಳಲಾಗಿದೆ. ಹಾಗೇ ಅಪಾಯದ ಮಟ್ಟ ಮೀರಿ ಹರಿಯುವ ನದಿಗಳ ಬಳಿ ಯಾರೂ ಸುಳಿಯದಂತೆ ಮುನ್ನೆಚ್ಚರಿಕೆ ಕೂಡ ರವಾನಿಸಲಾಗಿದೆ.

ಮಲೆನಾಡು ಭಾಗ ಹಾಗೂ ಕರಾವಳಿ ಮಾತ್ರವಲ್ಲದೆ ಬೆಳಗಾವಿ, ಹಾಸನ, ಹಾವೇರಿ ಸೇರಿ ಬಳ್ಳಾರಿಯಲ್ಲೂ 24ರಿಂದ 28ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇದೆ. ಹೀಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯಪುರದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಅಗತ್ಯ ಇರುವ ಕಡೆ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ.












Click it and Unblock the Notifications