ಚುರುಕುಗೊಂಡ ಮುಂಗಾರು; ಜುಲೈ 9ರ ತನಕ ಭಾರಿ ಮಳೆ
ಬೆಂಗಳೂರು, ಜುಲೈ 05 : ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಜುಲೈ 9ರ ತನಕ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾಗಿದ್ದು, ನದಿಗಳ ನೀರಿನ ಮಟ್ಟ ಏರಿಕೆಯಾಗುತ್ತಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ 'ಯೆಲ್ಲೊ ಅಲರ್ಟ್' ಘೋಷಣೆ ಮಾಡಲಾಗಿದೆ. 45 ರಿಂದ 55 ಕಿ. ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡದ ಮುಲ್ಕಿಯಲ್ಲಿ ಶನಿವಾರ 15, ಕೋಟದಲ್ಲಿ 14 ಸೆಂ. ಮೀ. ಮಳೆಯಾಗಿದೆ. ಕಾರವಾರದಲ್ಲಿ 12, ಗೋಕರ್ಣದಲ್ಲಿ 11, ಉಡುಪಿಯಲ್ಲಿ 10, ಮಡಿಕೇರಿ, ವಿರಾಜಪೇಟೆ ಮತ್ತು ಕಳಸದಲ್ಲಿ 5 ಸೆಂ. ಮೀ. ಮಳೆಯಾಗಿದೆ.

ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಎರಡು ದಿನಗಳಿಂದ ಮಳೆ ಜೋರಾಗಿದ್ದು, ನದಿಗಳಲ್ಲಿನ ನೀರಿನ ಮಟ್ಟ ಹೆಚ್ಚಾಗುತ್ತಿದೆ. ನೇತ್ರಾವತಿ, ಕುಮಾರಧಾರ, ಪಯಸ್ವಿನಿ, ಫಲ್ಗುಣಿ ನದಿಗಳ ನೀರಿನ ಹರಿವು ರಭಸ ಪಡೆದುಕೊಂಡಿದೆ.
ಉಡುಪಿಯಲ್ಲಿ ಶನಿವಾರ ಸುರಿದ ಮಳೆಯಿಂದಾಗಿ ಬೈಲೈರು, ಬನ್ನಂಜೆ, ಮಠದ ಬೆಟ್ಟು ಪ್ರದೇಶಗಳು ಜಲಾವೃತವಾಗಿದ್ದವು. ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಭಾರಿ ಮಳೆಯಾಗಿದ್ದು ಕೊಟ್ಟಿಗೆಹಾರ ಮತ್ತು ಕಳಸದಲ್ಲಿ ಹೆಚ್ಚು ಮಳೆ ಸುರಿದಿದೆ.
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿದ್ದು ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ತ್ರಿವೇಣಿ ಸಂಗಮದಲ್ಲಿಯೂ ನೀರಿನ ಮಟ್ಟ ಏರಿಕೆಯಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿಯೂ ಮಳೆಯಾಗಿದೆ.












Click it and Unblock the Notifications