ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ: ಕಟ್ಟೆಚ್ಚರ ವಹಿಸಲು ಮುಖ್ಯಮಂತ್ರಿ ಸೂಚನೆ
ಬೆಂಗಳೂರು, ಆಗಸ್ಟ್ 15: ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿರುವ ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಕುಮಾರಸ್ವಾಮಿ ಅವರು ನಿರ್ದೇಶನ ನೀಡಿದ್ದಾರೆ.
ಈ ಜಿಲ್ಲೆಗಳ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳು ಮಳೆಯಿಂದ ಸಂಭವಿಸಬಹುದಾದ ಪ್ರವಾಹ, ಭೂ ಕುಸಿತ ಮತ್ತಿತರ ಅನಾಹುತಗಳ ಕುರಿತು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಹಾಗೂ ಪರಿಹಾರ ಒದಗಿಸಲು ಸನ್ನದ್ಧರಾಗಿರುವಂತೆ ಸೂಚಿಸಿದ್ದಾರೆ.
ಅಂತೆಯೇ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ಭೇಟಿ ನೀಡಿ, ಮಳೆ ಹಾನಿ ಕುರಿತು ನಿಗಾ ವಹಿಸುವಂತೆ ತಿಳಿಸಿದ್ದಾರೆ. ಅಲ್ಲದೆ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಈ ಕುರಿತು ಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದಾರೆ.

ಬುಧವಾರವೂ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆದಿದ್ದು, ಹಲವು ಕಡೆ ಭೂ ಕುಸಿತ, ರಸ್ತೆ ಕುಸಿತಗಳು ಉಂಟಾಗಿದ್ದು, ಸಂಚಾರ ಅಸ್ತವ್ಯಸ್ಥವಾಗಿದೆ.
ಕೆಆರ್ಎಸ್ನಿಂದ ಇಂದೂ ಸಹ ನೀರು ಹೊರ ಬಿಡಲಾಗಿದ್ದು, ಕಾವೇರಿ ಉಕ್ಕಿ ಏರಿ, ನಿಮಿಶಾಂಬಾ ದೇವಾಲಯದೊಳಕ್ಕೆ ನದಿಯ ನೀರು ನಿಗ್ಗಿದೆ. ರಂಗನತಿಟ್ಟು ಪಕ್ಷಿಧಾಮಕ್ಕೂ ನೀರು ನುಗ್ಗಿದೆ.
ಕೊಡಗು ಜಿಲ್ಲೆಯಲ್ಲೂ ಭಾರಿ ಮಳೆ ಆಗುತ್ತಿದ್ದು, ಶಾಲಾ-ಕಾಲೇಜುಗಳ ರಜೆ ಮುಂದುವರೆದಿದೆ. ಮಂಗಳೂರಿನಲ್ಲೂ ಹಲವು ಕಡೆ ರಸ್ತೆ ಕುಸಿತ ಉಂಟಾಗಿದೆ. ಜಿಲ್ಲಾಧಿಕಾರಿಗಳು ಪರಿಸ್ಥಿತಿ ಅವಲೋಕನ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.












Click it and Unblock the Notifications