ಆರ್ಭಟಿಸುತ್ತಿರುವ ವರುಣ; ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಭೀತಿ
ಬಾಗಲಕೋಟೆ, ಅಕ್ಟೋಬರ್ 14: ಕೊರೊನಾ ಸೋಂಕು ದಿನದಿಂದ ಹೆಚ್ಚಾಗುತ್ತಿರುವ ನಡುವೆ ವರುಣನ ಆರ್ಭಟ ಜೋರಾಗಿದೆ. ಭಾರಿ ಮಳೆಯಿಂದ ಅನೇಕ ಅವಾಂತರಗಳು ಸೃಷ್ಟಿಯಾಗಿವೆ. ವರುಣನ ರುದ್ರನರ್ತನಕ್ಕೆ ಉತ್ತರ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗುತ್ತಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕ ರಾಜ್ಯದಲ್ಲಿ ಮಹಾ ಮಳೆ ಮುಂದುವರಿದಿದ್ದು, ಇದು ಇಲ್ಲಿಗೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ವಾಯುಭಾರ ಕುಸಿತ ಉಂಟಾಗಿರುವ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ.
ಈಗಾಗಲೇ ರಾಜ್ಯದ ಜನ ಕೊರೊನಾ ವೈರಸ್ ನಿಂದಾಗಿ ಇನ್ನಿಲ್ಲದ ಕಷ್ಟ ಅನುಭವಿಸುತ್ತಿದ್ದಾರೆ. ಈ ನಡುವೆ ಮಳೆಯ ಆರ್ಭಟಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಭಾರಿ ಮಳೆಯಿಂದಾಗಿ ನೂರಾರು ಎಕರೆ ಜಮೀನು ನೀರುಪಾಲಾಗಿದ್ದು, ಒಂದು ಹೊತ್ತಿನ ಊಟಕ್ಕೂ, ವಾಸ ಸ್ಥಳಕ್ಕೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಗ್ರಾಮಗಳ ರಸ್ತೆ ಸಂಪರ್ಕ ಕಡಿತ
ಕೊಪ್ಪಳ ಜಿಲ್ಲೆಯ ಕುಷ್ಟಗಿಯ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಬೈಕ್ ಸವಾರರನ್ನು ರಕ್ಷಣೆ ಮಾಡಲಾಗಿದೆ. ಮುದೇನೂರ ಗ್ರಾಮದ ಬನ್ನಟ್ಟಿ ಸೇತುವೆ ಕೊಚ್ಚಿ ಹೋಗಿದ್ದು, 10ಕ್ಕೂ ಹೆಚ್ಚು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ವಿಜಯಪುರ ಜಿಲ್ಲೆಯ ಸಾತಿಹಾಳದಲ್ಲಿಯೂ ಸೇತುವೆ ಜಲಾವೃತವಾಗಿದ್ದು, ರಸ್ತೆ ದಾಟುವ ವೇಳೆ ಬೈಕ್ ಸಮೇತ ಇಬ್ಬರು ಕೊಚ್ಚಿ ಹೋಗಿದ್ದರು. ಕಷ್ಟಪಟ್ಟು ದಡ ಸೇರುವುದರ ಜೊತೆಗೆ ಬೈಕನ್ನು ನೀರಿನಿಂದ ಎಳೆದು ತಂದಿದ್ದಾರೆ.

20ಕ್ಕೂ ಹೆಚ್ಚು ಮನೆಗಳು ನೆಲಸಮ
ಭಾರಿ ಮಳೆಯಿಂದಾಗಿ ತಿಕೋಟದ ಸಂಗಮನಾಥ ದೇವಾಲಯ ಸಂಪೂರ್ಣ ಜಲಾವೃತಗೊಂಡಿದ್ದು, ತುಂಬಿದ ನೀರಿನಲ್ಲೇ ನಿಂತು ಅರ್ಚಕರು ಪೂಜೆ ನೆರವೇರಿಸಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಭೀಮಾ ನದಿಯಿಂದ 40 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಭೀಮಾ ತೀರದ ವೀರಾಂಜನೇಯ, ಕಂಗಳೇಶ್ವರ ದೇವಸ್ಥಾನ ಜಲಾವೃತಗೊಂಡಿದೆ. ಶಹಾಪುರದಲ್ಲಿ ಮಳೆ ಅಬ್ಬರಕ್ಕೆ 20ಕ್ಕೂ ಹೆಚ್ಚು ಮನೆಗಳು ನೆಲಸಮಗೊಂಡಿದೆ. 2 ದಿನಗಳಿಂದ ಬಿದ್ದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ಮನೆ ಕಳೆದುಕೊಂಡವರ ಪರಿಸ್ಥಿತಿ ಹೇಳತೀರದಾಗಿದೆ.

ಸಂಡೂರಿನಲ್ಲಿ ಅತಿ ಹೆಚ್ಚು 10 ಸೆಂ.ಮೀ ಮಳೆಯಾಗಿದೆ
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಬಾಗಲಕೋಟೆ ಜಿಲ್ಲೆಯ ಹುನಗುಂದದ ಓಂ ಶಾಂತಿ ನಗರ ಬಡಾವಣೆ ಸಂಪೂರ್ಣ ಜಲಾವೃತಗೊಂಡಿದೆ. ಇನ್ನು ರಾಯಚೂರಿ ಜಿಲ್ಲೆಯ ಮಸ್ಕಿಯಲ್ಲಿ ಎರಡು ದಿನದ ಹಿಂದೆ ಹಳ್ಳದಲ್ಲಿ ಕೊಚ್ಚಿಹೋಗಿದ್ದ ಇಬ್ಬರು ವ್ಯಕ್ತಿಗಳಲ್ಲಿ ಒಬ್ಬ ವ್ಯಕ್ತಿ ಇನ್ನೂ ಪತ್ತೆಯಾಗಿಲ್ಲ. ಶೋಧ ಕಾರ್ಯ ಮುಂದುವರಿದಿದೆ. ಮಂಗಳವಾರ ಬೆಳಗ್ಗೆ 8.30ಕ್ಕೆ ಕೊರೊನಾ ಗೊಂಡಂತೆ ಕಳೆದ 24 ಗಂಟೆಯಲ್ಲಿ ರಾಜ್ಯದ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಅತಿ ಹೆಚ್ಚು 10 ಸೆಂ.ಮೀ ಮಳೆಯಾಗಿದೆ. ಉಳಿದಂತೆ ಬಾಗಲಕೋಟೆಯ ಬಾದಾಮಿ8, ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಕೊಪ್ಪಳದ ಕುಷ್ಟಗಿ, ಆಗುಂಬೆ, ಬಳ್ಳಾರಿಯ ಹಗರಿಬೊಮ್ಮನಹಳ್ಳಿ ತಲಾ 7 ಸೆಂ.ಮೀ ಮಳೆಯಾಗಿದೆ.

ಉಡುಪಿ ಭಾಗದಲ್ಲಿಯೂ ಭಾರೀ ಮಳೆ
ಉತ್ತರ ಕರ್ನಾಟಕದ ಬಳ್ಳಾರಿ, ರಾಯಚೂರು, ಚಿಕ್ಕೋಡಿ ಭಾಗದಲ್ಲಿ ಬೆಳೆದ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಮಹಾರಾಷ್ಟದ ಕೊಯ್ನಾ ಡ್ಯಾಂನಿಂದ ಕೃಷ್ಣಾ ನದಿಗೆ 12 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಚಿತ್ರದುರ್ಗದ ಅಕ್ಕಿತಿಮ್ಮಯ್ಯನಹಟ್ಟಿ ಗ್ರಾಮದ ಕೆರೆ ಏರಿ ಬಿರುಕು ಬಿಟ್ಟಿದೆ. ಇನ್ನುಳಿದಂತೆ ಮಡಿಕೇರಿ, ಉಡುಪಿ ಭಾಗದಲ್ಲಿಯೂ ಭಾರೀ ಮಳೆಯಾಗುತ್ತಿದೆ. ಕೊಪ್ಪಳದಲ್ಲೂ ಭಾರೀ ಮಳೆಯಾಗುತ್ತಿದೆ. ಪರಿಣಾಮ ಕನಕಗಿರಿಯ ಕೆರೆ ಸಂಪೂರ್ಣ ಭರ್ತಿಯಾಗಿದ್ದು, ವರ್ಷಗಳ ಬಳಿಕ ಲಕ್ಷ್ಮೀದೇವಿ ಕೆರೆ ಮೈದುಂಬಿಕೊಂಡಿದ್ದಾಳೆ.

3 ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಕಾರಣ ರಾಜ್ಯದಲ್ಲಿ ಇನ್ನೂ 3 ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ, ನಾಡಿದ್ದು ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಬೆಳಗಾವಿಯಲ್ಲಿ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಿದೆ.
ಪ್ರಸ್ತುತ ಮುಂಗಾರು ಅವಧಿಯಲ್ಲಿ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ಒಟ್ಟಾರೆ ವಾಡಿಕೆಗಿಂತ ಶೇ.27ರಷ್ಟು ಹೆಚ್ಚು ಮಳೆಯಾಗಿರುವ ಪರಿಣಾಮ ಎಲ್ಲಾ ಭಾಗಗಳಲ್ಲಿ ವಾತಾವರಣ ತುಸು ಹೆಚ್ಚೇ ತಂಪಾಗಿದೆ.












Click it and Unblock the Notifications