ರಾಜ್ಯಾದ್ಯಂತ ಭಾರಿ ಮಳೆ: ಟ್ರಾಫಿಕ್ ಜಾಮ್ ಸಮಸ್ಯೆ ಮಾತ್ರ ಇಲ್ಲ
ಬೆಂಗಳೂರು, ಏಪ್ರಿಲ್ 8: ರಾಜ್ಯಾದ್ಯಂತ ಬುಧವಾರ ರಾತ್ರಿ ಗುಡುಗು ಸಹಿತ ಮಳೆ ಸುರಿದಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ರಾಮನಗರದಲ್ಲಿ ಇಂದು ಆನೆಕಲ್ಲು ಸಹಿತ ಭಾರಿ ಮಳೆಯಾಗಿದೆ.
ಬೆಂಗಳೂರಿನ ಹಲವೆಡೆ ಕೂಡ ಮಳೆಯಾಗಿದೆ. ಕಳೆದ ಒಂದು ದಿನದ ಹಿಂದೆಯೂ ಕೂಡ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಮಳೆಯಾಗಿತ್ತು.
ಮಸ್ಕಿ: ವರುಣನ ಆರ್ಭಟಕ್ಕೆ ಭತ್ತದ ಬೆಳೆ ನಾಶ, ಕಣ್ಣೀರಿಟ್ಟ ರೈತ
ಬೆಂಗಳೂರು ಹಾಗೂ ಇತರೆ ಕಡೆಗಳಲ್ಲಿ ಲಾಕ್ಡೌನ್ನಿಂದಾಗಿ ವಾಹನಗಳು ಅಷ್ಟಾಗಿ ಸಂಚರಿಸದ ಕಾರಣ ಯಾರಿಗೂ ಅಷ್ಟಾಗಿ ತೊಂದರೆಯಾಗಿಲ್ಲ. ಯಾವ ಟ್ರಾಫಿಕ್ ಜಾಮೂ ಉಂಟಾಗಿಲ್ಲ.
ಕೊಡಗು ಜಿಲ್ಲೆಯ ಹಲವೆಡೆ ಕೂಡ ವರುಣ ಅಬ್ಬರಿಸಿದ್ದಾನೆ. ವಿರಾಜಪೇಟೆ, ಗೋಣಿಕೊಪ್ಪ, ಸಿದ್ದಾಪುರದಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುತ್ತಿದೆ. ಆಲಿಕಲ್ಲು ಸಹಿತ ವರುಣ ಅಬ್ಬರಿಸುತ್ತಿದ್ದಾನೆ. ಕಳೆದ ಒಂದು ವಾರದಲ್ಲಿ ಮೂರು ದಿನ ಉತ್ತಮ ಮಳೆಯಾಗಿದ್ದು, ಕಾಫಿ ಬೆಳೆಗಾರರ ಮೊಗದಲ್ಲಿ ಸಂತಸ ಮೂಡಿಸಿದೆ.
ಶಿವಮೊಗ್ಗದಲ್ಲಿ ಸಂಜೆಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು ಹೀಗಾಗಿ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದೆ. ಬಿಸಿಲಿನಿಂದ ಬಳಲಿದ್ದ ಜನತೆಗೆ ವರುಣ ತಂಪೇರೆದಿದ್ದಾನೆ. ಜಿಲ್ಲೆಯ ಅಲ್ಲಲ್ಲಿ ಮಳೆಯಾಗುತ್ತಿರುವ ಬಗ್ಗೆ ವರದಿಯಾಗಿದೆ.
ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ದಿನ ಬಿಟ್ಟು ದಿನ ಮಳೆಯ ಅಬ್ಬರ ಜೋರಾಗ್ತಾನೆ ಇದೆ. ಜನಸಾಮಾನ್ಯರಿಗೆ ಒಂದೆಡೆ ಕೊರೊನಾ ಆತಂಕ, ಮತ್ತೊಂದೆಡೆ ಮಳೆ ಭಯವೂ ಎದುರಾಗಿದೆ. ಜಿಲ್ಲೆಯ ಮಲೆನಾಡಿನ ಕೆಲ ಭಾಗದಲ್ಲಿ ಸೋಮವಾರ ಧಾರಾಕಾರವಾಗಿ ಸುರಿದಿದ್ದ ಮಳೆ ಮಂಗಳವಾರ ಸ್ವಲ್ಪ ಬಿಡುವು ನೀಡಿತ್ತು
ಇಂದು ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಜಿಲ್ಲೆಯ ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ, ಬಾಳೆಹೊನ್ನೂರು, ತರೀಕೆರೆಯಲ್ಲಿ ಭಾರೀ ಮಳೆಯಾಗಿದೆ.
ರಾಮನಗರದಲ್ಲೂ ಗುಡುಗು, ಸಿಡಿಲು ಸಹಿತ ಜೋರು ಮಳೆ ಆಗಿದೆ. ಅಕಾಲಿಕ ಮಳೆಯಿಂದಾಗಿ ಅನಗತ್ಯವಾಗಿ ರಸ್ತೆಗಿಳಿದಿದ್ದ ವಾಹನ ಸವಾರರು ಪರದಾಡುವಂತಾಗಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನ ಸವಾರರು ಮಳೆಯಿಂದ ಹೈರಾಣಾಗಿದ್ದಾರೆ.