ಅಕ್ಟೋಬರ್ 1ರವರೆಗೂ ಕರ್ನಾಟಕದ ವಿವಿಧೆಡೆ ಭಾರಿ ಮಳೆಯ ಮುನ್ಸೂಚನೆ
ಬೆಂಗಳೂರು, ಸೆಪ್ಟೆಂಬರ್ 28: ಕರ್ನಾಟಕದ ವಿವಿಧೆಡೆ ಅಕ್ಟೋಬರ್ 1ರವರೆಗೂ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈಗಾಗಲೇ ಉತ್ತರ ಕರ್ನಾಟಕದಲ್ಲಿ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.
ಸೆಪ್ಟೆಂಬರ್ 30 ಹಾಗೂ ಅಕ್ಟೋಬರ್ 1 ರಂದು ಬೆಳಗಾವಿ, ಬೀದರ್, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ವಿಪರೀತ ಮಳೆ ಸುರಿಯಲಿದೆ.

ಇನ್ನು ಕೋಲಾರ, ರಾಮನಗರ, ತುಮಕೂರಿನಲ್ಲಿ ಕೂಡ ಸಾಧಾರ ಮಳೆಯಾಗಲಿದೆ. ರಾಯಚೂರಿನಲ್ಲಿ ಅತಿ ಹೆಚ್ಚು ಅಂದರೆ 7 ಸೆಂ.ಮೀ ಮಳೆಯಾಗಿದೆ.
ಮಡಿಕೇರಿ, ತಾಳಿಕೋಟೆ, ವಿಟ್ಲ, ಬಸವನಬಾಗೇವಾಡಿ, ಹುನಗುಂದ, ಕೆಂಭಾವಿ, ಭಾಗಮಂಡಲ, ಜಾಲಹಳ್ಳಿ, ಸಿದ್ದಾಪುರ, ಬಾದಾಮಿ, ಆಲಮಟ್ಟಿ, ವಿಜಯಪುರ, ಚಿಂಚೋಳಿ, ಕಲಬುರಗಿ, ಭೀಮರಾಯನಗುಡಿ, ಮಸ್ಕಿ, ಕಮ್ಮರಡಿ, ಆಗುಂಬೆಯಲ್ಲಿ ಮಳೆಯಾಗಿದೆ.
ಮುಂದಿನ 24 ಗಂಟೆಯಲ್ಲಿ ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕಲವೆಡೆ ಮಳೆಯಾಗುವ ನಿರೀಕ್ಷೆ ಇದೆ.ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಕಳೆದ ಮೂರು ದಿನಗಳಿಂದ ವಿಜಯಪುರ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಸಾಕಷ್ಟು ಅವಾಂತರ ಉಂಟಾಗಿದೆ. ಧಾರಾಕಾರ ಮಳೆಯಿಂದಾಗಿ ಚವನಬಾವಿ ಗ್ರಾಮದಲ್ಲಿ 12 ಮನೆಗಳಿಗೆ ಭಾಗಶಃ ಹಾನಿಯಾಗಿದೆ.
ಆಗಾಗ ಸುರಿಯುತ್ತಿರುವ ಸತತ ಮಳೆಯಿಂದಾಗಿ ನೀರು ತಾಗಿ ಮನೆಗಳ ಗೋಡೆಗಳು ನೆನೆದಿವೆ. ಹಳೆಯ ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ. ಇದರಿಂದಾಗಿ ಚವನಬಾಗಿ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ.
ಈ ಮಧ್ಯೆ ವಿಜಯಪುರ ನಗರದಲ್ಲಿ ಮತ್ತೆ ಮಳೆ ಆರಂಭವಾಗಿದೆ. ಆಗಾಗ ವರುಣ ಅಬ್ಬರಿಸುತ್ತಿದ್ದಾನೆ. ವಿಜಯಪುರ ಜಿಲ್ಲೆಯಲ್ಲಿ ಮೊನ್ನೆ ರಾತ್ರಿಯಿಂದ ಆಗಾಗ ಮಳೆ ಸುರಿಯುತ್ತಿದ್ದು, ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಇದರ ನಡುವೆಯೇ ಭಾನುವಾರದ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ನಡೆದಿದೆ.











Click it and Unblock the Notifications