Karnataka Rains: ಬಿಸಿಲಿನ ಝಳಕ್ಕೆ ಹೈರಾಣಾದ ಮಂದಿಗೆ ಗುಡ್ ನ್ಯೂಸ್: ಮುಂದಿನ 3 ದಿನ ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆ
ಬೆಂಗಳೂರು ಮಾರ್ಚ್ 27: ರಾಜ್ಯದಲ್ಲಿ ಕೆಲ ದಿನಗಳಿಂದ ಬಿಸಿಲಿನ ಝಳ ಹೆಚ್ಚಾಗಿದೆ. ತಾಪಮಾನ ಹೆಚ್ಚಾಗುತ್ತಿದ್ದು ಜನ ಮನೆಬಿಟ್ಟು ಹೊರಬರಲಾರದಂತ ಪರಿಸ್ಥಿತಿ ಎದುರಾಗಿದೆ. ಬಿಸಿಲಿನ ಬೇಗೆಯಿಂದ ಹೈರಾಣಾಗಿದ್ದ ಜನರಿಗೆ ಹವಾಮಾನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯದಲ್ಲಿ ಇಂದಿನಿಂದ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು ವರುಣ ತಂಪೆರೆಯಲಿದ್ದಾನೆ. ರಾಜ್ಯದಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿಸಿಲ ಧಗೆ ನಿಧಾನಕ್ಕೆ ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಅನೇಕ ಕಡೆ ಸೋಮವಾರದಿಂದ 3 ದಿನಗಳ ವರೆಗೆ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ ಮತ್ತು ಮೈಸೂರು ಭಾಗದಲ್ಲಿ ಮಾರ್ಚ್ 27, 28 ಮತ್ತು 29 ರಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಜೊತೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆ ನೀಡಲಾಗಿದ್ದು ಇಂದು (ಮಾರ್ಚ್ 27) ಕಲಬುರಗಿ, ಕೊಡಗು, ಬೀದರ್ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಬಹುತೇಕ ಭಾಗಗಳಲ್ಲಿ ಹವಾಮಾನ ಬದಲಾಗುತ್ತಿದೆ. ಬೇಸಿಗೆ ಆರಂಭವಾಗಿದ್ರೂ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಸೆಕೆ ಪ್ರಮಾಣ ಏರಿಕೆಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಇಂದು ಬೆಳಗಿನ ಜಾವ ಆರ್ಟಿ ನಗರ, ಹೆಬ್ಬಾಳ, ಯಲಹಂಕ, ಯಶವಂತಪುರ ಮತ್ತು ವಿಧಾನಸೌಧದ ಸುತ್ತಮುತ್ತ ಮಳೆಯಾಗಿದೆ.

ಇಂದು ಬೆಂಗಳೂರಿನಲ್ಲಿ ಗರಿಷ್ಠ 34 ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಇಂದು ಮಧ್ಯಾಹ್ನದ ನಂತರ ಕೆಲ ಭಾಗಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಗಳಿವೆ.ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಸಹ ಎರಡು ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ವಿಜ್ಞಾನಿ ಪ್ರಸಾದ್ ಹೇಳಿದ್ದಾರೆ.
ರಾಜ್ಯದಲ್ಲಿ ನೀರಿನ ಅಭಾವ
ಬೇಸಿಗೆಯ ತಾಪಮಾನ ಹೆಚ್ಚುತ್ತಿದ್ದು, ರಾಜ್ಯ ರಾಜಧಾನಿಯಲ್ಲಿ ನೀರಿನ ಅಭಾವ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನೀರನ್ನು ಕುಡಿಯಲು ಮತ್ತು ಅಡುಗೆಗೆ ಮಾತ್ರ ಬಳಸುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಾರ್ವಜನಿಕರಿಗೆ ಮನವಿ ಮಾಡಿದೆ. ಕಾವೇರಿ ನೀರನ್ನು ಮಿತವಾಗಿ ಬಳಸುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು ಪೂರ್ವದ ಕೆಲವು ಪ್ರದೇಶಗಳಲ್ಲಿ ಅಸಮರ್ಪಕ ನೀರು ಪೂರೈಕೆಯ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಪ್ರದೇಶಗಳಲ್ಲಿ ಹೆಚ್ಚು ಶುಲ್ಕ ವಿಧಿಸುವ ನೀರಿನ ಟ್ಯಾಂಕರ್ಗಳ ಮೇಲೆ ಜನರು ಅವಲಂಬಿತರಾಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರತಿ ದಿನ ಬೆಂಗಳೂರಿಗೆ 1,450 ಮಿಲಿಯನ್ ಲೀಟರ್ ಕಾವೇರಿ ಕುಡಿಯುವ ನೀರು ಪೂರೈಕೆಯಾಗುತ್ತಿದೆ ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಶೌಚಾಲಯ, ಉದ್ಯಾನ ಹಾಗೂ ವಾಹನಗಳನ್ನು ಸ್ವಚ್ಛಗೊಳಿಸಲು ಕಾವೇರಿ ನೀರನ್ನು ಬಳಸದಂತೆ ನಿವಾಸಿಗಳಿಗೆ ಮನವಿ ಮಾಡಲಾಗಿದೆ. ಅಂತಹ ಉದ್ದೇಶಗಳಿಗಾಗಿ ಕೊಳವೆ ಬಾವಿ ನೀರು ಮತ್ತು ತ್ಯಾಜ್ಯ ನೀರಿನ ಸ್ಥಾವರಗಳಿಂದ ಸಂಸ್ಕರಿಸಿದ ನೀರನ್ನು ಬಳಸಬೇಕು ಎಂದೂ ಮಂಡಳಿ ಕೇಳಿಕೊಂಡಿದೆ.












Click it and Unblock the Notifications