Karnataka Rain: ರಾಜ್ಯದಲ್ಲಿ ಅಬ್ಬರಿಸಲಿದೆ 'ಕೃತ್ತಿಕಾ' ಮಳೆ; ಗುಡುಗು, ಮಿಂಚು, ಭಾರಿ ಮಳೆ ಎಚ್ಚರಿಕೆ
ಅಂತೂ ಇಂತೂ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಲು ಆರಂಭಿಸಿದೆ. ಕಳೆದ ಕೆಲವು ದಿನಗಳಲ್ಲಿ ರಾಜ್ಯದ ಬಹುತೇಕ ಕಡೆ ವ್ಯಾಪಕ ಮಳೆಯಾಗುತ್ತಿದ್ದು, ಮೇ 15ರವರೆಗೂ ರಾಜ್ಯಕ್ಕೆ ಭಾರಿ ಮಳೆ ಮುನ್ಸೂಚನೆ ಸಿಕ್ಕಿದೆ.
ಭಾನುವಾರ ಮತ್ತು ಸೋಮವಾರ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಭಾಗದಲ್ಲಿ ಕೂಡ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗುವ ಮುನ್ಸೂಚನೆ ಕೊಟ್ಟಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ವರುಣನ ಆಶೀರ್ವಾದ ಸಿಕ್ಕಿದ್ದು, ಬುಧವಾರದವರೆಗೂ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚಿನೊಂದಿಗೆ ಭಾರಿ ಮಳೆಯಾಗಲಿದೆ.
ಕಳೆದ ಒಂದು ವಾರದಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮೈಸೂರು, ಬೆಂಗಳೂರು, ಮಂಡ್ಯ, ರಾಮನಗರ, ಚಾಮರಾಜನಗರ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ವ್ಯಾಪಕ ಮಳೆಯಾಗಿದೆ. ಮುಂದಿನ ದಿನಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರಿಗೆ ಭಾರಿ ಮಳೆ ಮುನ್ಸೂಚನೆ
ತಾಪಮಾನ ಹೆಚ್ಚಳದಿಂದ ಕಂಗೆಟ್ಟಿದ್ದ ಬೆಂಗಳೂರಿಗೆ ಕಳೆದ ಕೆಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಭಾರಿ ಮಳೆ ರಾಜಧಾನಿಯನ್ನು ತಂಪಾಗಿಸಿದ್ದು, ಬುಧವಾರದವರೆಗೂ ಭಾರಿ ಮಳೆ ಮುನ್ಸೂಚನೆ ಕೊಟ್ಟಿದೆ.
ಇಂದಿನಿಂದ (ಶನಿವಾರ) ಕೃತಿಕಾ ಮಳೆ ಆರಂಭವಾಗಲಿದ್ದು, ರಾಜ್ಯಕ್ಕೆ ವರುಣನ ಆಶೀರ್ವಾದ ಸಿಗಲಿದೆ. ಕಳೆದ ಬಾರಿ ಮಳೆ ಕೊರತೆ, ಭಾರಿ ತಾಪಮಾನ ಹೆಚ್ಚಳದಿಂದ ಕಂಗೆಟ್ಟಿದ್ದ ರಾಜ್ಯಕ್ಕೆ ಕೃತ್ತಿಕಾ ಮಳೆ ತಂಪೆರೆಯುವುದು ಖಚಿತವಾಗಿದೆ.
ಶನಿವಾರ ಸಂಜೆ ವೇಳೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಚಾಮರಾಜನಗರದಲ್ಲಿ ಬಿರುಗಾಳಿ ಮಳೆಗೆ ಬಾಳೆ ತೋಟಗಳು ನಾಶವಾಗಿದೆ. ಆಲಿಕಲ್ಲು ಮಳೆಯಿಂದ ಕೈಗೆ ಬಂದ ಬೆಳೆಗಳನ್ನು ಕಳೆದುಕೊಂಡ ರೈತರು ಕಂಗಾಲಾಗಿದ್ದಾರೆ.












Click it and Unblock the Notifications