Heavy Rain: ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ
ರಾಜ್ಯದಲ್ಲಿ ಹಿಂಗಾರು ಮಳೆ ಚುರುಕು ಪಡೆದುಕೊಂಡಿದೆ. ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಅಕ್ಟೋಬರ್ 22 ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಸೋಮವಾರ ಕೂಡ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದ್ದ ಹವಾಮಾನ ಇಲಾಖೆ, ಇಂದು (ಮಂಗಳವಾರ) ಕೂಡ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಕೊಟ್ಟಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಸೋಮವಾರ ಹಳದಿ ಎಚ್ಚರಿಕೆ ನೀಡಲಾಗಿತ್ತು. ಈ ಜಿಲ್ಲೆಗಳಲ್ಲಿ 65 ಮಿಮೀ - 115.5 ಮಿಮೀ ಮಳೆಯಾಗಲಿದೆ ಎಂದು ಮುನ್ಸೂಚನೆ ಕೊಟ್ಟಿತ್ತು.

ಮಂಗಳವಾರ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಿರುವ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಚಾಮರಾಜನಗರ, ಮಂಡ್ಯ, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಇಂದು 115.5 ಮಿ.ಮೀ - 204.5 ಮಿ.ಮೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.
ಅಕ್ಟೋಬರ್ 22ರವರೆಗೂ ಮಳೆ
ಅಕ್ಟೋಬರ್ 22ರವರೆಗೂ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಜಿಲ್ಲೆಗಳು ಮತ್ತು ಕರಾವಳಿಗೆ ಹೊಂದಿಕೊಂಡಂತಿರುವ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗಲಿದ್ದು, ಅಕ್ಟೋಬರ್ 17 ಮತ್ತು 18 ರಂದು ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗಲಿದ್ದು, ಅಕ್ಟೋಬರ್ 17 ಮತ್ತು 18 ರಂದು ದಕ್ಷಿಣ ಒಳನಾಡು ಪ್ರದೇಶದ ಪೂರ್ವ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಕ್ಟೋಬರ್ 18ರ ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಉತ್ತಮ ಮಳೆ
ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿರುವ ಪರಿಣಾಮ ಬೆಂಗಳೂರಿಗೂ ತಟ್ಟಿದೆ. ಸೋಮವಾರದಿಂದ ಬೆಂಗಳೂರು ಫುಲ್ ಕೂಲ್ ಆಗಿದ್ದು, ಇಡೀ ದಿನ ತುಂತುರು ಮಳೆಯಾಗುತ್ತಿತ್ತು, ಆಗಾಗ್ಗೆ ಮಳೆ ಜೋರಾಗುತ್ತಿತ್ತು. ಸೋಮವಾರ ರಾತ್ರಿಯಿಡೀ ಮಳೆಯಾಗಿದೆ.
ಮಂಗಳವಾರ ಮುಂಜಾನೆಯೇ ನಗರದ ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದೆ. ಮಂಗಳವಾರ ಸಂಜೆ ವೇಳೆಗೆ ಮಳೆ ತೀವ್ರವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.












Click it and Unblock the Notifications