ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ, ಪ್ರವಾಹ ಭೀತಿ
ಬೆಂಗಳೂರು, ಜುಲೈ 9: ಕಳೆದ ಎರಡು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ.
ಸಾಕಷ್ಟು ಕಡೆ ಪ್ರವಾಹ ಭೀತಿ ಹಾಗೆಯೇ ಗುಡ್ಡ ಕುಸಿಯುವ ಆತಂಕವೂ ಇದೆ.ಮುಂದಿನ ಕೆಲವು ದಿನ ಇನ್ನೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಗಂಗಾವಳಿ ನದಿಯು ಮೈದುಂಬಿ ಹರಿಯುತ್ತಿದ್ದು, ಪ್ರವಾಹ ಭೀತಿಯಲ್ಲಿ ಸಮುದ್ರ ಮತ್ತು ನದಿಪಾತ್ರದ ಜನರು ಇದ್ದಾರೆ. ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಎಡೆಬಿಡದೆ ಭಾರೀ ಮಳೆ ಸುರಿಯುತ್ತಿದೆ. ಇದರಿಂದಾಗಿ ತಗ್ಗು ಪ್ರದೇಶಗಳ ಜಲಾವೃತಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಮೂರು ದಿನ ನಿರಂತರ ಮಳೆಯಿಂದಾಗಿ ನದಿಗಳು ಮೈದುಂಬಿ ಹರಿಯುತ್ತಿವೆ. ಗಾಜನೂರು ಜಲಾಶಯಕ್ಕೆ 23,560 ಸಾವಿರ ಕ್ಯೂಸೆಕ್ ನೀರು ಬರುತ್ತಿದ್ದು, ಎಲ್ಲ 22 ಕ್ರಸ್ಟ್ಗೇಟ್ಗಳನ್ನು ತೆರೆದು ಅಷ್ಟೇ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದಾಗಿ ಶಿವಮೊಗ್ಗ ನಗರದಲ್ಲಿರುವ ಐತಿಹಾಸಿಕ ಕೋರ್ಪಲಯ್ಯನ ಛತ್ರದ ಮಂಟಪವು ಮುಳುಗಲು ಎರಡು ಅಡಿ ಬಾಕಿ ಇದೆ.
ಬಯಲು ಸೀಮೆ ಮಂಡ್ಯ ಮತ್ತು ಮೈಸೂರು ಭಾಗಗಳಲ್ಲೂ ಮಳೆರಾಯನ ಆರ್ಭಟ ಹೆಚ್ಚಾಗಿದೆ. ಕೇರಳ ಭಾಗದಲ್ಲಿ ಮಳೆ ಹೆಚ್ಚಾದ ಹಿನ್ನೆಲೆ, ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯದ ಒಳಹರಿವು 10 ಸಾವಿರ ಕ್ಯೂಸೆಕ್ ದಾಟಿದೆ. ಈ ಕಬಿನಿ ಜಲಾಶಯವು ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿದೆ.
ಕಡಲ ಅಬ್ಬರ ಜೋರಾಗಿರುವ ಹಿನ್ನೆಲೆ, ಸಾಂಪ್ರದಾಯಿಕ ಮೀನುಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ. ಇಷ್ಟೇ ಅಲ್ಲದೇ, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಅಕ್ಕಪಕ್ಕದಲ್ಲಿ ಗುಡ್ಡ ಕುಸಿಯುವ ಭೀತಿಯೂ ಹೆಚ್ಚಾಗಿದೆ.ಇನ್ನೂ ನಾಲ್ಕು ದಿನಗಳ ಕಾಲ ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕೊಡಗಿನಲ್ಲಿ ಮುಂಗಾರು ಮಳೆ ಚುರುಕಾದ ಹಿನ್ನೆಲೆ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್.ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯದ ಮಟ್ಟ100 ಅಡಿ ದಾಟಿದೆ. ಜಲಾಶಯಕ್ಕೆ 9 ಸಾವಿರ ಕ್ಯೂಸೆಕ್ ನೀರಿನ ಪ್ರಮಾಣ ಏರಿಕೆಯಾಗಿದೆ.












Click it and Unblock the Notifications