ಏಪ್ರಿಲ್ 17ರವರೆಗೂ ರಾಜ್ಯದ ಹಲವೆಡೆ ಮಳೆ; ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆ ಸೂಚನೆ
ಬೆಂಗಳೂರು, ಏಪ್ರಿಲ್ 16: ಗುರುವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದ್ದು, ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿದಿದೆ. ಚಿಕ್ಕಮಗಳೂರಿನಲ್ಲಿ ಅಬ್ಬರದ ಮಳೆ ಸುರಿದಿದ್ದು, ಮೂಡಿಗೆರೆಯಲ್ಲಿ ಭಾರೀ ಮಳೆಗೆ ಮರಗಳು ಉರುಳಿದ ಸಂಗತಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ರಾಮನರದಲ್ಲಿಯೂ ಗುರುವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಫಲವತ್ತಾಗಿ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣ ಉರುಳಿ ಬಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಸೀಗೇಕೋಟೆ ಗ್ರಾಮದಲ್ಲಿ ಮಳೆಯಿಂದಾಗಿ ನಷ್ಟ ಸಂಭವಿಸಿದೆ. ರಾಜ್ಯದ ಉತ್ತರ ಒಳನಾಡು ಭಾಗದಲ್ಲಿ ಸುಳಿಗಾಳಿಯಿಂದಾಗಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಸುರಿಯುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದೆ ಓದಿ...
ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆ ಸೂಚನೆ
ಗುರುವಾರ ಮಲೆನಾಡು ಭಾಗಗಳಲ್ಲಿ ಮಳೆಯಾಗಿದ್ದು, ಶುಕ್ರವಾರ ಕೂಡ ಮಳೆಯಾಗುವ ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವುದಾಗಿ ತಿಳಿಸಿದೆ. ಏಪ್ರಿಲ್ 17ರವರೆಗೂ ಮಳೆಯಾಗಲಿದ್ದು, ಏಪ್ರಿಲ್ 18ಕ್ಕೆ ತುಂತುರು ಮಳೆಯಾಗುವುದಾಗಿ ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಸಂಜೆ ಮಳೆ
ಬೆಂಗಳೂರಿನಲ್ಲಿ ಗುರುವಾರ ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆ ಸುರಿದಿದೆ. ಬೆಂಗಳೂರಿನ ಹಲವೆಡೆ ಮಳೆಯಾಗಿರುವ ವರದಿಯಾಗಿದೆ. ಏಪ್ರಿಲ್ 16ರಂದು ಕೂಡ ಬೆಂಗಳೂರಿನಲ್ಲಿ ಚದುರಿದ ಮಳೆಯಾಗಲಿದ್ದು, ಕೆಲವು ಭಾಗಗಳಲ್ಲಿ ಅತಿ ಹೆಚ್ಚಿನ ಮಳೆಯಾಗುವುದಾಗಿ ಕೆಎಸ್ಎನ್ಡಿಎಂಸಿ ಮಾಹಿತಿ ನೀಡಿದೆ. ಬೆಳ್ಳಂದೂರು, ವರ್ತೂರಿನಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಅಲ್ಪ ಮಳೆಯಾಗುವುದಾಗಿ ತಿಳಿಸಿದೆ. ಯಲಹಂಕದಲ್ಲಿ ತುಂತುರು ಮಳೆಯಾಗುವುದಾಗಿ ಸೂಚನೆ ನೀಡಿದೆ.
ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?
ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ, ಮೈಸೂರು, ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ರಾಯಚೂರು, ಯಾದಗಿರಿ ಹಾಗೂ ಬೆಂಗಳೂರು ನಗರ ಪ್ರದೇಶದಲ್ಲಿ ಏಪ್ರಿಲ್ 17ರವರೆಗೂ ಸಾಧಾರಣ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಬೀದರ್, ಹಾವೇರಿ, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಹಾಗೂ ಮೈಸೂರಿನಲ್ಲಿ ಏಪ್ರಿಲ್ 15 ಹಾಗೂ ಏಪ್ರಿಲ್ 16ರಂದು ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Recommended Video
ಏಪ್ರಿಲ್ 18ರ ನಂತರ ಒಣಹವೆ
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸೂಚನೆ ನೀಡಲಾಗಿದೆ. ಜೊತೆಗೆ ತಮಿಳುನಾಡು, ಕೇರಳ, ತೆಲಂಗಾಣದಲ್ಲಿ ಇನ್ನೂ ಮೂರು ದಿನ ಮಳೆಯಾಗಲಿರುವುದಾಗಿ ಇಲಾಖೆ ತಿಳಿಸಿದೆ. ಏಪ್ರಿಲ್ 18ರಿಂದ ರಾಜ್ಯದಲ್ಲಿ ಮಳೆ ಕಡಿಮೆಯಾಗಿ ಒಣಹವೆ ಮುಂದುವರೆಯಲಿರುವುದಾಗಿ ತಿಳಿದುಬಂದಿದೆ.