ಕರಾವಳಿ ಕರ್ನಾಟಕಕ್ಕೆ ಆರೆಂಜ್ ಅಲರ್ಟ್, ಜುಲೈ 8ರವರೆಗೆ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ
ಬೆಂಗಳೂರು, ಜುಲೈ. 05: ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜುಲೈ 8 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯೊಂದಿಗೆ ಕರಾವಳಿ ಕರ್ನಾಟಕಕ್ಕೆ ಭಾರತೀಯ ಹವಾಮಾನ ಇಲಾಖೆ (IMD) ಬುಧವಾರ ಆರೆಂಜ್ ಅಲರ್ಟ್ ಘೋಷಿಸಿದೆ. ಜುಲೈ 8ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ಡಿಎಂಸಿ) ಪ್ರಕಟಣೆಯಲ್ಲಿ ತಿಳಿಸಿದೆ.
"ಸಕ್ರಿಯ ಮುಂಗಾರು ಪರಿಸ್ಥಿತಿಗಳು ಜುಲೈ 8 ರವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಇದರ ಪರಿಣಾಮವಾಗಿ ರಾಜ್ಯದಾದ್ಯಂತ ಹೆಚ್ಚಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತದೆ. ಅದರ ನಂತರ ರಾಜ್ಯದಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಕೆಎಸ್ಎನ್ಡಿಎಂಸಿ ಹೇಳಿದೆ.

ಮಂಗಳವಾರ ಮಧ್ಯಾಹ್ನ ಕರಾವಳಿ ಕರ್ನಾಟಕದ ಜಿಲ್ಲೆಗಳಿಗೆ ಐಎಂಡಿ ರೆಡ್ ಅಲರ್ಟ್ ಘೋಷಿಸಿತ್ತು. ಶಾಲೆಗಳು, ಅಂಗನವಾಡಿಗಳು ಮತ್ತು ಪದವಿ ಪೂರ್ವ ಕಾಲೇಜುಗಳನ್ನು ಮಂಗಳವಾರ ಮುಚ್ಚುವುದಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಘೋಷಿಸಿದೆ. ಭಾರೀ ಮಳೆ ಕಾರಣಕ್ಕೆ ಬುಧವಾರವೂ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಂಗಳವಾರ ಸುರಿದ ಭಾರೀ ಮಳೆಗೆ ಉಳ್ಳಾಲದಲ್ಲಿ ಎರಡು ಮನೆಗಳು ಭಾಗಶಃ ಹಾನಿಯಾಗಿದ್ದು, ಮೂಲ್ಕಿಯಲ್ಲಿ ಒಂದು ಮನೆಗೆ ತೀವ್ರ ಹಾನಿಯಾಗಿದೆ ಎಂದು ದಕ್ಷಿಣ ಕನ್ನಡ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಉಡುಪಿ ಜಿಲ್ಲೆಯ ಪಡುವರಿಯಲ್ಲಿ ಮಂಗಳವಾರ ಗರಿಷ್ಠ 221.5ಮಿಮೀ ಮಳೆಯಾಗಿದೆ. ಇದೇ ವೇಳೆ ಮಂಗಳೂರು ಮತ್ತು ಮೂಲ್ಕಿಯಲ್ಲಿ 150 ಮತ್ತು 170 ಮಿ.ಮೀ ಮಳೆಯಾಗಿದೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಮಲಶಿಲೆಯಲ್ಲಿ ನದಿಯಲ್ಲಿ ಮುಳುಗಿ ಅರ್ಚಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ರೆಡ್ ಅಲರ್ಟ್ ಘೋಷಣೆ ಮಾಡಿದ್ದರೂ ಮಂಗಳೂರು ಹೊರವಲಯದ ಹರೇಕಳ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಬೋಟ್ ಮಗುಚಿದೆ, ಬೋಟ್ನಲ್ಲಿದ್ದ ಯುವಕನನ್ನು ರಕ್ಷಣೆ ಮಾಡಲಾಗಿದೆ ಆದರೆ, ದೋಣಿ ಕೊಚ್ಚಿ ಹೋಗಿದೆ. ಜಿಲ್ಲೆಯ ಹಲವು ರಸ್ತೆಗಳು ಮುಳುಗಡೆಯಾಗಿದ್ದು ವಾಹನ ಸವಾರರು ಪರದಾಡುವಂತಾಗಿದೆ.
"ನೈಋತ್ಯ ಮಾನ್ಸೂನ್ ಮಂಗಳವಾರ ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನಲ್ಲಿ ಸಕ್ರಿಯವಾಗಿದೆ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿದೆ" ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಮಂಗಳವಾರ 1.3 ಮಿ.ಮೀ ಮಳೆಯಾಗಿದೆ.












Click it and Unblock the Notifications