ಬೆಂಗಳೂರಿನಲ್ಲಿ ಗಾಳಿ ಸಮೇತ ಭಾರಿ ಮಳೆ: ರಾಜ್ಯಾದ್ಯಂತ ಮುಂಗಾರು ಚುರುಕು
ಬೆಂಗಳೂರು, ಜೂನ್ 11: ಬೆಂಗಳೂರಿನಲ್ಲಿ ಗಾಳಿ ಸಮೇತ ಮಳೆಯಾಗುತ್ತಿದೆ. ಎರಡು ದಿನಗಳಿಂದ ಕೊಂಚ ಬಿಡುವು ಪಡೆದಿದ್ದ ಮಳೆ ಗುರುವಾರ ಸಂಜೆಯಿಂದ ಮತ್ತೆ ಆರಂಭವಾಗಿದೆ.
ಜಯನಗರ, ಮಲ್ಲೇಶ್ವರ, ಆರ್ಆರ್ನಗರ, ಮೈಸೂರು ರಸ್ತೆ, ಉತ್ತರಹಳ್ಳಿ, ಪದ್ಮನಾಭನಗರ, ಮಹಾಲಕ್ಷ್ಮೀ ಲೇಔಟ್ನಲ್ಲಿ ಹೆಚ್ಚಿನ ಮಳೆಯಾಗಿದೆ. ಇಂದಿನಿಂದ ಮುಂಗಾರು ಚುರುಕುಗೊಳ್ಳುವ ಸೂಚನೆಯನ್ನು ನೀಡಿದೆ.
ಮೋಡದ ಕವಿದ ವಾತಾವರಣ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ
ಹವಾಮಾನ ಇಲಾಖೆಯು ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದಲ್ಲಿ ಮಳೆ ಜೋರಾಗಲಿದೆ ಎಂದು ಮಾಹಿತಿ ನೀಡಿದ್ದು, ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಅವರು ಎಂಟು ವಲಯಗಳಲ್ಲಿರುವ ಸಹಾಯವಾಣಿಗಳ ಕುರಿತು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ವಿವಿಧೆಡೆ ತೀವ್ರ ಮಳೆ
ಮುಂದಿನ ಮೂರ್ನಾಲ್ಕು ದಿನಗಳವರೆಗೂ ರಾಜ್ಯದ ವಿವಿಧೆಡೆ ವಿವಿಧ ತೀವ್ರತೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಬೆಂಗಳೂರು, ಚಿಕ್ಕಬಳ್ಳಾಪುರ,ಚಿತ್ರದುರ್ಗ, ದಾವಣಗೆರೆಯಲ್ಲಿ ಜೂನ್ 12ರಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿದಿರುವುದರಿಂದ ಕರ್ನಾಟಕ ಸೇರಿದಂತೆ ದಕ್ಷಿಣ ಭಾಗದ ಹಲವು ಕಡೆ ಮಳೆಯಾಗಲಿದೆ. ರಾಜ್ಯದಲ್ಲಿ ಅಗತ್ಯ ಇರುವಷ್ಟು ವಾಡಿಕೆ ಮಳೆ ಈ ಒಂದು ವಾರದಲ್ಲಿ ಬೀಳುವ ಸಾಧ್ಯತೆ ಹೆಚ್ಚಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ. ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ.
ಕರಾವಳಿ ಭಾಗದಲ್ಲಿ ಉತ್ತಮ ಮಳೆ
ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಿದೆ. ಮಲೆನಾಡಿನಲ್ಲಿ ಉತ್ತಮ ಮಳೆಯಾಗಿದೆ. ಬೀದರ್ ಸೇರಿದಂತೆ ಹೈದರಾಬಾದ್-ಕರ್ನಾಟಕ ಭಾಗದಲ್ಲೂ ಮಳೆಯಾಗಿದೆ. 14ನೇ ತಾರೀಖಿನವರೆಗೂ ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಕೆಎಸ್ಎನ್ಡಿಎಂಸಿ ನಿರ್ದೇಶಕರು ಹೇಳಿದ್ದಾರೆ.
ಉತ್ತರ, ದಕ್ಷಿಣ ಒಳನಾಡಿನಲ್ಲಿ ಮಳೆ
ನೈಋತ್ಯ ಮುಂಗಾರು ಇನ್ನಷ್ಟು ಅಡಿ ಇಟ್ಟಿದೆ. ಕರ್ನಾಟಕ, ಗೋವಾ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶದ ಕೆಲ ಭಾಗಗಳಲ್ಲಿ ಮುಂದಿನ ಎರಡು ದಿನ ಮಳೆಯಾಗಬಹುದು ಎಂದು ಕೆಎಸ್ಎನ್ಡಿಎಂಸಿ ಟ್ವೀಟ್ ಮಾಡಿತ್ತು.