ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು, ಜೂನ್ 17: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸಾಮಾನ್ಯವಾಗಿಯೇ ಮುಂಗಾರು ಪ್ರವೇಶಿಸಿತ್ತು. ಆದರೆ ಎರಡೇ ದಿನದಲ್ಲಿ ದುರ್ಬಲವಾಗಿತ್ತು. ಇದೀಗ ಮತ್ತೆ ಚುರುಕು ಪಡೆದಿದ್ದು, ಎಲ್ಲೆಡೆ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
3 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ 19 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾರ್ಕಳ, ಹೊಸನಗರ, ಕುಂದಾಪುರ, ಅಂಕೋಲಾ, ಕೊಟ್ಟಿಗೆಹಾರ, ಗೋಕರ್ಣ, ಕೊಲ್ಲೂರು, ಗೇರುಸೊಪ್ಪ, ತ್ಯಾಗರ್ತಿ, ಮಂಚಿಕೆರೆ, ಯಲ್ಲಾಪುರ, ಆನವಟ್ಟಿ, ಪಣಂಬೂರು, ಶೃಂಗೇರಿ, ಭಾಗಮಂಡಲ, ವಿರಾಜಪೇಟೆ, ನಿಪ್ಪಾಣಿ, ಬನವಾಸಿ, ತಾಳಗುಪ್ಪ, ಹೊನ್ನಾವರದಲ್ಲಿ ಮಳೆಯಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ
ಬಂಗಾಳಕೊಲ್ಲಿಯಲ್ಲಿ ಜೂನ್ 19ರ ವೇಳೆಗೆ ಮತ್ತೆ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ವಾತಾವರಣದಲ್ಲಿ ತೇವಾಂಶದಿಂದ ಕೂಡಿದ ಗಾಳಿ ಚಲನೆ ಆಗುತ್ತಿರುವ ಪರಿಣಾಮ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ.

ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ
ದಕ್ಷಿಣ ಒಳನಾಡಿನ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಂಗಳವಾರ ಉತ್ತಮ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ 115 ರಿಂದ 204 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯಲ್ಲಿ ಮಳೆ ನದಿಗಳ ಒಳಹರಿವು ಹೆಚ್ಚಳ
ರಾಜ್ಯ ಕರಾವಳಿ ಭಾಗ ಸೇರಿ ಕರ್ನಾಟಕದ ಅಲ್ಲಲ್ಲಿ ಮಂಗಳವಾರವೂ ಮಳೆಯಾಗಿದೆ. ನದಿತೊರೆಗಳು ಉಕ್ಕಿ ಹರಿಯುತ್ತಿದೆ. ಇದರ ಮಧ್ಯೆ ಕಡಲ್ಕೊರೆತದ ಅಬ್ಬರಕ್ಕೆ ಮನೆಯೊಂದು ಕೊಚ್ಚಿಕೊಂಡು ಹೋಗಿದೆ. ಉತ್ತರ ಕನ್ನಡದ ಘಟ್ಟದ ಮೇಲಿನ ತಾಲೂಕುಗಳಾದ ಸಿದ್ದಾಪುರ, ಶಿರಸಿ, ಯಲ್ಲಾಪುರದಲ್ಲೂ ಮಳೆಯಾಗಿದೆ. ಕಲಬುರಗಿ, ಬೆಳಗಾವಿ, ಬೀದರ್ ಜಿಲ್ಲೆಗಳಲ್ಲೂ ಮಳೆಯಾಗಿದೆ.

24 ಗಂಟೆಗಳಲ್ಲಿ ಎಲ್ಲೆಲ್ಲಿ ಮಳೆ?
ಮುಂದಿನ 24 ಗಂಟೆಗಳಲ್ಲಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಕೋಲಾರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಬೆಂಗಳೂರು, ಚಾಮರಾಜನಗರದಲ್ಲಿ ಮಳೆ ಬರುವ ಸಾಧ್ಯತೆ ಕಡಿಮೆ ಇದೆ.












Click it and Unblock the Notifications