ಮತ್ತೆ ವಾಯುಭಾರ ಕುಸಿತ: 2 ದಿನ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ
ಬೆಂಗಳೂರು, ಅಕ್ಟೋಬರ್ 30: ರಾಜ್ಯಾದ್ಯಂತ ಮತ್ತೆ ಎರೆಡು ದಿನ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮೊದಲು ಮುಂಗಾರು ಮಳೆ ಮುಂದುವರೆದಿತ್ತು, ಅದಾದ ಬಳಿಕ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿತ್ತು ಅದರಿಂದ ರಾಜ್ಯಾದ್ಯಂತ ಮತ್ತೆ ಪ್ರವಾಹ ಸ್ಥಿತಿ ನಿರ್ಮಾಣವಾಗಿತ್ತು. ಅದಾದ ಬಳಿಕ ಕ್ಯಾರ್ ಚಂಡಮಾರುತ ಅಪ್ಪಳಿಸಿ ಇಡೀ ಭಾರತದ ಹಲವಾರು ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣ ಮಾಡಿತ್ತು. ಇದೀಗ ತಮಿಳುನಾಡಿಗೆ ಹಿಂಗಾರು ಪ್ರವೇಶಿಸಿರುವ ಕಾರಣ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕ್ಯಾರ್ ಚಂಡಮಾರುತ ಕರ್ನಾಟಕದ ಕರಾವಳಿ ಭಾಗ, ಉಡುಪಿ, ಮಂಗಳೂರು, ಶಿವಮೊಗ್ಗ, ಉತ್ತರ ಕನ್ನಡ ಸೇರಿ ಹಲವು ಕಡೆ ಮತ್ತೆ ಪ್ರವಾಹ ಸ್ಥಿತಿಯನ್ನು ತಣದೊಡ್ಡಿತ್ತು, ಉತ್ತರ ಕರ್ನಾಟಕದ ಕೆಲವಡೆ ಮಳೆಯಾಗಿತ್ತು.

ಕರಾವಳಿಯ 3 ಜಿಲ್ಲೆ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆ
ಕರಾವಳಿಯ ಮೂರು ಜಿಲ್ಲೆ ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದ ಕೆಲ ಜಿಲ್ಲೆಗಳಲ್ಲಿ ಅ.31 ರಿಂದ 2 ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ತಮಿಳುನಾಡಿನಲ್ಲಿ ಗಾಳಿಯ ಒತ್ತಡ ಕಡಿಮೆ
ದಕ್ಷಿಣ ತಮಿಳುನಾಡು ಹಾಗೂ ಶ್ರೀಲಂಕಾ ಭಾಗದಲ್ಲಿ ಗಾಳಿಯ ಒತ್ತಡ ಕಡಿಮೆಯಾಗಿರುವ ವಾತಾವರಣ ನಿರ್ಮಾಣವಾಗಿದೆ. ಇದರ ಪ್ರಭಾವದಿಂದ ಅ.30 ಹಾಗೂ 31ರಂದು ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದ ಮೇಲೆ ಪ್ರಭಾವ ಬೀರಲಿದೆ.

ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ?
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ಚಿತ್ರದುರ್ಗ,ಶಿವಮೊಗ್ಗ, ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗಲಿದೆ. ನವೆಂಬರ್ 1ರವರೆಗೆ ರಾಜ್ಯದ ಕರಾವಳಿ ಭಾಗದಲ್ಲಿ ಗಂಟೆಗೆ 70-80 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, 2.5 ರಿಂದ 2.7 ಮೀಟರ್ನಷ್ಟು ಎತ್ತರದ ಅಲೆಗಳು ಏಳಲಿವೆ. ಹೀಗಾಗಿ ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮಂಗಳವಾರ ಚಿಕ್ಕಮಗಳೂರು ಜಿಲ್ಲೆಯ ಕಡೂರು ಹಾಗೂ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಸಿದ್ದಾಪುರ, ಕದ್ರಾ, ನುಗ್ಗೇನಹಳ್ಳಿ, ಚಿಕ್ಕಮಗಳೂರು, ಕುಷ್ಟಗಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.












Click it and Unblock the Notifications