ಬಳ್ಳಾರಿ ಹೊರತುಪಡಿಸಿ ರಾಜ್ಯದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಭಾರಿ ಮಳೆ
ಬೆಂಗಳೂರು, ಡಿಸೆಂಬರ್ 08: ಬಳ್ಳಾರಿಯನ್ನು ಹೊರತುಪಡಿಸಿ ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಡಿಸೆಂಬರ್ 12ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
2-3 ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ ತೀರ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿ. 12ರವರೆಗೂ ಮಳೆ ಸುರಿಯಲಿದೆ.
ನಿವಾರ್, ಬುರೆವಿ ಬಳಿಕ ಇದೀಗ ತಮಿಳುನಾಡಿಗೆ ಅಪ್ಪಳಿಸಲಿದೆ 'ಅರ್ನಬ್' ಚಂಡಮಾರುತ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದಕ್ಷಿಣ ಭಾರತದ ಕರಾವಳಿ ತೀರಕ್ಕೆ ಬುರೆವಿ ಚಂಡಮಾರುತ ಅಪ್ಪಳಿಸಿದೆ. ಇದರಿಂದ ಇನ್ನೂ 6 ದಿನಗಳ ಕಾಲ ಕರ್ನಾಟಕದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲೂ ಮಳೆ
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದಿನಿಂದ 6 ದಿನಗಳ ಕಾಲ ಅಂದರೆ ಡಿ. 12ರವರೆಗೂ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಚಳಿ ಹೆಚ್ಚಳವಾಗುವ ಸಾಧ್ಯತೆ
ಬೆಂಗಳೂರಿನಲ್ಲಿ ಇನ್ನು ಮೂರು ದಿನ ಬೆಂಗಳೂರಿನಲ್ಲಿ ಗರಿಷ್ಠ 24 ಹಾಗೂ ಕನಿಷ್ಟ 19 ಡಿಗ್ರಿ ಸೆಲ್ಷಿಯಸ್ ತಾಪಮಾನ ಇರಲಿದ್ದು, ಚಳಿ ಹೆಚ್ಚಾಗಲಿದೆ. ಜೊತೆಗೆ ತುಂತುರು ಮಳೆಯೂ ಸುರಿಯು ಸಾಧ್ಯತೆ ಇರುವುದರಿಂದ ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಹೆಚ್ಚಾಗಲಿದೆ.
ತಮಿಳುನಾಡಿನಲ್ಲಿ ಮಳೆ
ಬುರೆವಿ ಚಂಡಮಾರುತದ ಹಾವಳಿಯಿಂದ ತಮಿಳುನಾಡಿನ ದಕ್ಷಿಣ ಹಾಗೂ ಕರಾವಳಿಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಕಡ್ಡಲೂರ್ ಜಿಲ್ಲೆಯಲ್ಲಿ 66,000ಕ್ಕೂ ಅಧಿಕ ಜನರನ್ನು ಈಗಾಗಲೇ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. 5,000 ಜನರನ್ನು ರಾಮನಾಥಪುರಕ್ಕೆ ಸ್ಥಳಾಂತರಿಸಲಾಗಿದೆ.ತಮಿಳುನಾಡಿನ ಕನ್ಯಾಕುಮಾರಿ, ತಿರುನೆಲ್ವೇಲಿ, ತೂತುಕುಡಿ, ರಾಮನಾಥಪುರಂ, ಸಿವಗಂಗೈ ಮತ್ತು ಕೇರಳದ ತಿರುವನಂತಪುರಂ, ಕೊಲ್ಲಂ, ಪಟ್ಟಣಂತಿಟ್ಟ ಭಾಗದಲ್ಲಿ ಭಾರೀ ಮಳೆಯಾಗಿತ್ತು. ಇದರಿಂದ ಕೇರಳದಲ್ಲೂ ಅನೇಕ ಕಡೆ ಮನೆಗಳು ಮುಳುಗಡೆಯಾಗಿವೆ.
Recommended Video
ಉತ್ತರ ಕರ್ನಾಟಕದಲ್ಲೂ ಮಳೆ
ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಹಾವೇರಿ, ಗದಗ, ಧಾರವಾಡ, ಹುಬ್ಬಳ್ಳಿ ಭಾಗದಲ್ಲಿ ಕೂಡ ಡಿ. 10ರಿಂದ 12ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ಕೂಡ ಸಂಜೆಯ ಬಳಿಕ ಮಳೆಯಾಗುವ ಸಾಧ್ಯತೆಯಿದೆ.