ಮುಂಗಾರು ಆಗಮನ; ಮಲೆನಾಡು, ಕರಾವಳಿ ಪ್ರದೇಶಗಳಿಗೆ ಮಳೆ ಸೂಚನೆ
ಬೆಂಗಳೂರು, ಜೂನ್ 08: ಮುಂಗಾರು ರಾಜ್ಯಕ್ಕೆ ಪ್ರವೇಶ ನೀಡಿದ್ದು, ಮಂಗಳವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬುಧವಾರದವರೆಗೂ ಕರಾವಳಿ ಹಾಗೂ ಉತ್ತರ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿರುವುದಾಗಿ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ತಿಳಿಸಿದೆ.
ಈಗಾಗಲೇ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಮಳೆಯಾಗುತ್ತಿದೆ. ಜೂನ್ ಮೂರನೇ ವಾರದ ವೇಳೆಗೆ ಕರ್ನಾಟಕದಲ್ಲಿ ಮಳೆ ಅಬ್ಬರ ಹೆಚ್ಚಾಗಲಿದೆ ಎಂದು ತಿಳಿಸಿದೆ. ಮುಂದೆ ಓದಿ...
ರಾಜ್ಯಾದ್ಯಂತ ಉತ್ತಮ ಮಳೆ
ಮಂಗಳವಾರ ರಾಜ್ಯಾದ್ಯಂತ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಕಡೆ ಮೋಡ ಕವಿದ ವಾತಾವರಣವಿರಲಿದೆ ಎಂದು ತಿಳಿಸಿದೆ. ಜೂನ್ 3ರಂದು ಕೇರಳ ಪ್ರವೇಶಿಸಿದ್ದ ಮುಂಗಾರು ಜೂನ್ 5ರಂದು ಕರ್ನಾಟಕ ಪ್ರವೇಶಿಸಿದ್ದು, ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿಗೆ ಆಗಮಿಸಿದೆ. ಹೀಗಾಗಿ ಜೂನ್ 9ರವರೆಗೂ ಅನೇಕ ಜಿಲ್ಲೆಗಳಿಗೆ ಹೆಚ್ಚಿನ ಮಳೆಯಾಗುವ ಸೂಚನೆ ನೀಡಲಾಗಿದೆ.
ಕರಾವಳಿ ಪ್ರದೇಶಗಳಲ್ಲಿ ಮಳೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭವಾಗಿದ್ದು, ಮಳೆಯ ಆರ್ಭಟ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅಧಿಕ ಮಟ್ಟದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.
ಕೆಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್
ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಇನ್ನು ಕೆಲವೆಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇರುವುದಾಗಿ ಇಲಾಖೆ ತಿಳಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎನ್ನಲಾಗಿದೆ. ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
Recommended Video
ಹಲವು ಜಿಲ್ಲೆಗಳಲ್ಲಿ ಎಸ್ಡಿಆರ್ಎಫ್ ಸಿಬ್ಬಂದಿ ನಿಯೋಜನೆ
2018ರಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿತ್ತು. ಈ ಬಾರಿ ಉತ್ತರ ಕರ್ನಾಟಕದಲ್ಲಿ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಮಲೆನಾಡು ಹಾಗೂ ಕರಾವಳಿಯಲ್ಲಿ ಭೂಕುಸಿತದ ಸಂಭವವಿರುವ ಕಾರಣ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ರಾಯಚೂರು, ಕೊಡಗು, ಬೆಳಗಾವಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಎಸ್ಡಿಆರ್ಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ತಿಳಿಸಿದ್ದಾರೆ.