Karnataka Rain Alert : ಕರ್ನಾಟಕದ ಈ ಜಿಲ್ಲೆಯಲ್ಲಿ ಮೂರು ದಿನ ಭರ್ಜರಿ ಮಳೆ: ಎಲ್ಲೆಲ್ಲಿ ವರುಣಾರ್ಭಟ
ಬೆಂಗಳೂರು, ಮಾರ್ಚ್24: ರಾಜ್ಯದಲ್ಲಿ ಬಿಸಿಲಿನಿಂದಾಗಿ ಜನತೆ ಈಗಾಗಲೇ ತತ್ತರಿಸಿ ಹೋಗಿದ್ದಾರೆ. ದಿನದಿಂದ ದಿನಕ್ಕೆ ಬಿಸಿಲಿನ ಬೇಗೆ ಕೂಡಾ ಹೆಚ್ಚಾಗುತ್ತಿದ್ದು, ಮಳೆ ಯಾವಾಗ ಬರುತ್ತದೆ ಎಂದು ಜನ ಕಾದು ಕುಳಿತಿದ್ದಾರೆ. ಇದೀಗ ರಾಜ್ಯದಲ್ಲಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ಮುಂದಿನ ದಿನಗಳಲ್ಲಿ ಬಿಸಿಲಿನ ತಾಪಮಾನ ಮತ್ತಷ್ಟು ಹೆಚ್ಚಾಗಲಿದೆ ಎಂದು ವರದಿಯಾಗಿತ್ತು. ಆದರೆ ಇತ್ತೀಚೆಗೆ ರಾಜ್ಯದ ಕೆಲವು ಕಡೆ ಮಳೆಯೂ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಮತ್ತು ನಾಳೆ ರಾಜ್ಯದ ಬಹುತೇಕ ಕಡೆಗಳಲ್ಲಿ ಪೂರ್ವ ಮುಂಗಾರು ಅಬ್ಬರಿಸುವ ಸಾಧ್ಯತೆ ಇದೆ. ಪ್ರಬಲ ಗಾಳಿ, ಗುಡುಗು, ಮಿಂಚು ಕೂಡ ಇರುವ ಮುನ್ಸೂಚನೆ ಸಿಕ್ಕಿದೆ. ಕರ್ನಾಟಕದಲ್ಲಿ ಇನ್ನೆರಡು ದಿನ ಸಂಜೆ ವೇಳೆಗೆ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೇ ಕೆಲವೆಡೆ ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಇರಲಿದೆ. ಎರಡು ದಿನದ ಬಳಿಕ ರಾಜ್ಯದಲ್ಲಿ ಮಳೆಯ ಕ್ರಮೇಣ ಕಡಿಮೆ ಆಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈಗಾಗಲೇ ರಾಜ್ಯದಲ್ಲಿ ವಿಪರೀತ ಉರಿ ಬಿಸಿಲು ಶುರುವಾಗಿದ್ದು, ಸೆಕೆಯಿಂದ ಜನ ಕಂಗಾಲಾಗಿದ್ದಾರೆ. ಮೊನ್ನೆಯ ದಿನ ಬೆಂಗಳೂರಲ್ಲಿ ಸಂಜೆ ವೇಳೆಗೆ ಭಾರೀ ಮಳೆಯಾಗಿದೆ. ಹೀಗಾಗಿ ಸಿಲಿಕಾನ್ ಸಿಟಿ ಜನರು ಖುಷ್ ಆಗಿದ್ದರು.ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಹಾಸನ, ಚಿಕ್ಕಮಗಳೂರು, ತುಮಕೂರು, ಕೊಡಗು,ಚಿಕ್ಕಬಳ್ಳಾಪುರ, ರಾಮನಗರ ಹಾಗೂ ಬೆಂಗಳೂರು ಭಾಗದಲ್ಲಿ ಭಾನುವಾರ ಮಳೆಯಾಗಿದ್ದು, ಇಂದು ಮತ್ತು ನಾಳೆ ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಳಗಾವಿ, ಧಾರವಾಡದಲ್ಲಿ ತುಂತುರು ಮಳೆಯನ್ನು ನಿರೀಕ್ಷೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರದಲ್ಲಿ ಇಂದು ಮಳೆಯಾಗಲಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನೂ ವಿಜಯನಗರ, ತುಮಕೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ವಿಜಯಪುರ, ಹಾವೇರಿ, ಗದಗ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರೆಯಲಿದೆ. ಮದ್ದೂರು, ಯಲಹಂಕ, ಮಾಗಡಿ, ಬೆಂಗಳೂರು ಏರ್ಪೋರ್ಟ್, ಮಾಗಡಿ, ಚಿಂತಾಮಣಿ, ಸರಗೂರು, ನಾಗಮಂಗಲ, ರಾಯಲ್ಪಾಡು, ಬೇಲೂರು, ಜಿಕೆವಿಕೆ, ಎಲೆಕ್ಟ್ರಾನಿಕ್ಸಿಟಿಯಲ್ಲಿ ಮಳೆಯಾಗಿದೆ.
ಮುಂದಿನ ಐದು ದಿನಗಳಲ್ಲಿ ರಾಜ್ಯದಾದ್ಯಂತ ಮಾರ್ಚ್ 26 ರವರೆಗೆ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾದ್ಯತೆಯಿದ್ದು ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications