ಇನ್ನೂ 4 ದಿನ ಮಳೆ, ಒದ್ದೆಮುದ್ದೆ ವಾರಾಂತ್ಯಕ್ಕೆ ಸಿದ್ಧರಾಗಿ!
ಬೆಂಗಳೂರು, ಸೆ. 23 : ಮಂಗಳವಾರ ಮುಂಜಾನೆ ಬೆಂಗಳೂರಿನ ರಸ್ತೆಗಳ ತುಂಬಾ ಕಸ, ನೀರು. ಚರಂಡಿಗಳು ತುಂಬಿ ರಸ್ತೆಗಳ ಮೇಲೆ ನೀರು ಹರಿಯುತ್ತಿದೆ. ಮಣ್ಣು ಕೊಚ್ಚಿಕೊಂಡು ಬಂದು ಕೆಲವು ರಸ್ತೆಗಳು ಕೆಸರು ಗದ್ದೆಯಾಗಿವೆ. ರಾತ್ರಿ ಸುರಿದ ಮಳೆಯ ಪ್ರಭಾವ ರಸ್ತೆಗಳ ಮೇಲೆ ಗಾಢವಾಗಿ ಕಾಣುತ್ತಿದೆ.
ಸೋಮವಾರ ರಾತ್ರಿ ಸುರಿದ ಮಳೆಗೆ ಬೆಂಗಳೂರು ತಂಪಾಗಿದೆ. ಪ್ರಸಕ್ತ ವರ್ಷದ ಮುಂಗಾರು ಅವಧಿಯ ಕೊನೆಯ ವಾರವಿದಾಗಿದ್ದು ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಜೂನ್ 1ರಿಂದ ಆರಂಭವಾದ ಮುಂಗಾರು ಸೆ.30ಕ್ಕೆ ಕೊನೆಗೊಳ್ಳುತ್ತದೆ. ಈ ಅವಧಿಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಬಾರಿ ಮುಂಗಾರು ಮಳೆ ಕೊಂಚ ತಡವಾಗಿ ಆರಂಭವಾದರೂ ಸರಾಸರಿಗಿಂತ ರಾಜ್ಯದಲ್ಲಿ ಅಧಿಕ ಮಳೆಯಾಗಿದೆ. ಇದುವರೆಗೆ 781.7 ಮಿ.ಮೀ. ಮಳೆಯಾಗಬೇಕಿತ್ತು. ಆದರೆ, 834.7 ಮಿ.ಮೀ. ಮಳೆಯಾಗಿದ್ದು, ಶೇ.7ರಷ್ಟು ಅಧಿಕ ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸದ್ಯ, ಮುಂಗಾರು ಅವಧಿ ಕೊನೆಗೊಳ್ಳುತ್ತಿದ್ದು, ಸೆಪ್ಟೆಂಬರ್ ಕೊನೆಯ ವಾರ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಳೆ ಕೊರತೆ : ಬೆಂಗಳೂರಿನಲ್ಲಿ ಈ ಬಾರಿ ಶೇ 26ರಷ್ಟು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಅವಧಿಯಲ್ಲಿ ಬೆಂಗಳೂರಿನಲ್ಲಿ ಶೇ 423.1 ಮಿ.ಮೀ ಮಳೆಯಾಗಬೇಕಿತ್ತು. ಆದರೆ, ಇದುವರೆಗೆ 314.1 ಮಿ.ಮೀ. ಮಳೆಯಾಗಿದೆ. ಸೆಪ್ಟೆಂಬರ್ನಲ್ಲಿ ಮುಂಗಾರು ಅಂತ್ಯಗೊಳ್ಳಲಿದ್ದು, ಈ ತಿಂಗಳಿನಲ್ಲಿಯೂ ತುಂತುರು ಮಳೆಯಾಗಿದೆ.

ಹವಾಮಾನ ಇಲಾಖೆ ಅಧಿಕಾರಿಗಳ ಪ್ರಕಾರ ಬೆಂಗಳೂರಿನಲ್ಲಿ ಈ ವಾರದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಚಾಂಪಿಯನ್ಸ್ ಲೀಗ್ ಟಿ20 ಕ್ರಿಕೆಟ್ ಪಂದ್ಯಗಳು ನಡೆಯುತ್ತಿದ್ದು, ರಾತ್ರಿ ಮಳೆ ಸುರಿದರೆ, ಕ್ರಿಕೆಟ್ ಪ್ರೇಮಿಗಳಿಗೆ ನಿರಾಸೆ ಉಂಟಾಗಲಿದೆ. [ಸ್ಟೇಡಿಯಂ ಸುತ್ತಾ ವಾಹನ ನಿಲುಗಡೆ, ನಿಷೇಧ ಎಲ್ಲೆಲ್ಲಿ?]












Click it and Unblock the Notifications