ಮುಂದಿನ 3 ದಿನ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ
ಬೆಂಗಳೂರು, ಅಕ್ಟೋಬರ್ 14: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 17ರವರೆಗೆ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ಚಾಮರಾಜನಗರ, ಚಿತ್ರದುರ್ಗ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಕಳೆದೆರಡು ವಾರಗಳಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆ ಈ ವಾರಾಂತ್ಯದವರೆಗೂ ಮುಂದುವರೆಯುವ ಸಾಧ್ಯತೆ ಇದ್ದು, ಅಕ್ಟೋಬರ್ 20ರಿಂದ ಈಶಾನ್ಯ ಮಾನ್ಸೂನ್ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮುಂದಿನ ಎರಡು ದಿನಗಳ ಕಾಲ ನಗರದಲ್ಲಿ ಇನ್ನೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಪ್ರಮುಖವಾಗಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಹೆಚ್ಚಿನ ಮಳೆಯಾಗುತ್ತಿದ್ದು, ಕಳೆದ 2 ದಿನಗಳಲ್ಲಿ ಅಂದರೆ ಸೋಮವಾರ ರಾತ್ರಿ ಮತ್ತು ಮಂಗಳವಾರ ಬೆಳಗಿನ ನಡುವೆ 18 ಸೆಂಮೀ ಮಳೆಯಾಗಿದೆ. ಅಲ್ಲದೆ ಇದು ಇನ್ನೂ 2 ದಿನಗಳ ಕಾಲ ಮುಂದುವರೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಿದ ಈ ವರೆಗಿನ ಅತ್ಯಧಿಕ ಮಳೆ ಪ್ರಮಾಣವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 2011ರಲ್ಲಿ KIA ಸ್ಥಾಪನೆಯಾಗಿತ್ತು.
ಇನ್ನು ಈ ಬಾರಿ ವಾಡಿಕೆಗಿಂತ ಅಧಿಕ ಮಳೆಯಾಗುತ್ತಿದೆ. ಅಕ್ಟೋಬರ್ 20 ರಿಂದ ಈಶಾನ್ಯ ಮಾನ್ಸೂನ್ ಆರಂಭವಾಗುವುದರೊಂದಿಗೆ ಇಡೀ ವಾರ ಮಳೆಯಾಗುವ ಮುನ್ಸೂಚನೆ ಇದೆ. ಮಳೆಯ ತೀವ್ರತೆಯು ವರ್ಷದಿಂದ ವರ್ಷಕ್ಕೆ ಭಿನ್ನವಾಗಿರುತ್ತದೆ.
ಅರಬ್ಬಿ ಸಮುದ್ರದ ಮೇಲೆ ಚಂಡಮಾರುತದ ಪರಿಚಲನೆ ಮೇಲೆ ಮಳೆ ಪ್ರಮಾಣ ಆದರಿಸಿದೆ. ಕರ್ನಾಟಕದ ಬಹುತೇಕ ಭಾಗಗಳು, ವಿಶೇಷವಾಗಿ ದಕ್ಷಿಣ ಒಳನಾಡಿನಲ್ಲಿ ನವೆಂಬರ್ ವರೆಗೂ ಮಳೆಯಾಗಲಿದೆ.
ಅ.17ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ
ನೈರುತ್ಯ ಮುಂಗಾರು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ತೀವ್ರವಾಗಿದೆ. ಅಲ್ಲದೆ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಸಕ್ರಿಯವಾಗಿದೆ. ಉತ್ತರ ಒಳನಾಡಿನ ಕರ್ನಾಟಕದಲ್ಲಿ ಮಳೆ ಸಾಮಾನ್ಯವಾಗಿದೆ ಎಂದು ಅವರು ಹೇಳಿದ್ದಾರೆ.
ಅಕ್ಟೋಬರ್ 12 ರವರೆಗೆ ಕರ್ನಾಟಕದಲ್ಲಿ 98.6 ಮಿಮೀ ಮಳೆಯಾಗಿದ್ದು, ಬೆಂಗಳೂರಿನಲ್ಲಿ 181.9 ಮಿಮೀ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶದಲ್ಲಿ 244ಮಿಮೀ ಮತ್ತು HAL ವಿಮಾನ ನಿಲ್ದಾಣ 150ಮಿಮೀ ಮಳೆಯಾಗಿದೆ ಎನ್ನಲಾಗಿದೆ.
ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಖಚಿತಪಡಿಸಿಕೊಳ್ಳಲು ಹವಾಮಾನ ಅಧಿಕಾರಿಗಳು ಮತ್ತು ವಿಪತ್ತು ನಿರ್ವಹಣಾ ಕೋಶವು ನಾಗರಿಕರಿಗೆ ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳು ಮತ್ತು ಇತರ ಅಂತಹ ದುರ್ಬಲ ಸ್ಥಳಗಳಲ್ಲಿ ನಿಲ್ಲದಂತೆ ಎಚ್ಚರಿಕೆ ನೀಡಿದೆ.
ಇನ್ನು ಮಂಡ್ಯ , ದಕ್ಷಿಣ ಕನ್ನಡ , ಉಡುಪಿ , ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವರ್ಷಧಾರೆ ಮುಂದುವರಿದಿದೆ. ಬಳ್ಳಾರಿ ಜಿಲ್ಲೆಯ ಹಲವೆಡೆ, ಮೈಸೂರಿನಲ್ಲಿ ಮನೆ ಗೋಡೆ ಕುಸಿದಿದೆ.
ದಾವಣಗೆರೆಯಲ್ಲಿ ಭರ್ಜರಿ ಮಳೆಗೆ ಏಷ್ಯಾದ 2ನೇ ಅತಿದೊಡ್ಡ ಕೆರೆ ಕೋಡಿ ಬಿದ್ದಿದೆ. ಗ್ರಾಮವೊಂದರ ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಚಿತ್ರದುರ್ಗದಲ್ಲೂ ಕೆರೆ ಕುಂಟೆ, ಹಳ್ಳಕೊಳ್ಳಗಳು ತುಂಬಿದ್ದು, ಬೋರ್ವೆಲ್ಗಳಲ್ಲಿ ನೀರು ಚಿಮ್ಮುತ್ತಿದೆ. ತುಮಕೂರು ಜಿಲ್ಲೆಯಲ್ಲಿ ಬಂಡೆಯೊಂದು ರಸ್ತೆಗೆ ಉರುಳಿ ಬಿದ್ದಿದೆ. ಚಿಕ್ಕಬಳ್ಳಾಪುರದಲ್ಲಿ ಗುಡಿಬಂಡೆಯಲ್ಲಿ ಕೆರೆ ತುಂಬಿ ರಸ್ತೆಯಲ್ಲಿ ಹರಿದಿದೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಸಂಜೆ ಸುರಿದ ಭಾರಿ ಮಳೆಯಿಂದ 20 ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿತ್ತು. ಸಂಜೆ 5.30ರಿಂದ ರಾತ್ರಿ 12ರ ವರೆಗೆ ರನ್ ವೇ ಸ್ಪಷ್ಟವಾಗಿ ಕಾಣದ್ದರಿಂದ ವಿಮಾನಗಳ ಟೇಕಾಫ್ ಹಾಗೂ ಲ್ಯಾಂಡಿಂಗ್ಗೆ ತೊಡಕಾಗಿತ್ತು.
ಮಳೆಯಾಗಿರುವ ಪ್ರದೇಶಗಳು
ಮಂಗಳೂರು ಏರ್ಪೋರ್ಟ್, ಬೆಳ್ತಂಗಡಿ, ಪಣಂಬೂರು, ಮೂಡುಬಿದಿರೆ, ಮಂಗಳೂರು, ಮಾಣಿ, ಕೋಟ, ಪುತ್ತೂರಿನಲ್ಲಿ ಮಳೆಯಾಗಿದೆ.
ಸುಳ್ಯ, ಕಾರ್ಕಳ, ಚಿಂತಾಮಣಿ, ವಿಟ್ಲ, ದಾವಣಗೆರೆ, ಸುಬ್ರಹ್ಮಣ್ಯ, ಜಯಪುರ, ಶೃಂಗೇರಿ, ಕನಕಪುರ, ಹೊಳೆ ಹೊನ್ನೂರು, ಬೆಂಗಳೂರು, ಕೊಟ್ಟಿಗೆಹಾರ, ಆನವಟ್ಟಿ, ಕಮ್ಮರಡಿ, ಆಗುಂಬೆ, ಹುಂಚದಕಟ್ಟೆ, ಮಧುಗಿರಿ, ಸಂತೆಬೆನ್ನೂರು, ಮುಲ್ಕಿ, ಭಾಗಮಡಲ, ಕೋಣನೂರು, ನೆಲಮಂಗಲ, ಬನವಾಸಿ, ಗೋಪಾಲನಗರ, ಕಡೂರು, ತ್ಯಾಗರ್ತಿ, ತಾಳಗುಪ್ಪ, ಸಾಲಿಗ್ರಾಮ, ಮದ್ದೂರು, ಶ್ರವಣಬೆಳಗೊಳದಲ್ಲಿ ಮಳೆಯಾಗಿದೆ.ಬೆಂಗಳೂರು ವಾತಾವರಣ ಹೇಗಿದೆ?
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ. 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಐಎಎಲ್ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ವಾತಾವರಣ ಹೇಗಿರಲಿದೆ?
ಮುಂದಿನ 24 ಗಂಟೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಉತ್ತರ ಕನ್ನಡ, ಚಾಮರಾಜನಗರ, ಚಿತ್ರದುರ್ಗ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಅತಿ ಗರಿಷ್ಠ ಉಷ್ಣಾಂಶ
ಕಲಬುರಗಿಯಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ, ಬೀದರ್ನಲ್ಲಿ 15.5 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Recommended Video