ರಾಜ್ಯದಲ್ಲಿ ಸೆಪ್ಟೆಂಬರ್ 5ರವರೆಗೂ ಮಳೆ, 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು, ಆಗಸ್ಟ್ 31: ರಾಜ್ಯದಲ್ಲಿ ಸೆಪ್ಟೆಂಬರ್ 5ರವರೆಗೂ ಮಳೆಯಾಗಲಿದ್ದು, 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ರಾಜ್ಯವ್ಯಾಪಿ ಮುಂಗಾರು ಮಳೆ ಚುರುಕಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಮೂರು ದಿನ ರಾಜ್ಯವ್ಯಾಪಿ ಉತ್ತಮ ಮಳೆಯ ನಿರೀಕ್ಷೆಯಿದೆ.
ದಕ್ಷಿಣ ಒಳನಾಡಿನ ಜಿಲ್ಲೆಯಲ್ಲಿ ಗುಡುಗು ಸಹಿತ ವ್ಯಾಪಕ ಮಳೆ ಮತ್ತು ಉತ್ತರ ಒಳನಾಡಿನ ಬಹುತೇಕ ಎಲ್ಲ ಕಡೆ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಬಹುತೇಕ ಎಲ್ಲ ಜಲಾಶಯಗಳು ಈಗಾಗಲೇ ಶೇ.90ಕ್ಕಿಂತ ಹೆಚ್ಚು ಭರ್ತಿಯಾಗಿದೆ.
ಕರಾವಳಿ ತೀರ ಪ್ರದೇಶದಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 40 ರಿಂದ 50 ಕಿಮೀ ಇರುವ ಸಾಧ್ಯತೆಯಿದ್ದು ಬುಧವಾರ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸೆಪ್ಟೆಂಬರ್ 5 ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಉಪಸಾಗರದ ಒಡಿಶಾ ಹಾಗೂ ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಂದಿನ ಕೆಲವು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಐದು ರಾಜ್ಯಗಳಲ್ಲಿ ಮಳೆ
ಸೆಪ್ಟಂಬರ್ 2ರವರೆಗೂ ಐದು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಸೂಚನೆ ನೀಡಿದೆ. ಕರ್ನಾಟಕದಲ್ಲಿ ಸೆಪ್ಟೆಂಬರ್ 1ರವರೆಗೂ ಮಳೆಯಾಗಲಿದೆ ಎಂದು ಐಎಂಡಿ ಈ ಹಿಂದೆ ಮಾಹಿತಿ ನೀಡಿತ್ತು. ಹಾಗೆಯೇ ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು.
ಐಎಂಡಿ ನೀಡಿರುವ ಮಾಹಿತಿ ಪ್ರಕಾರ, ಭಾರಿ ಮಳೆ ಸಾಧ್ಯತೆ ಇರುವ ರಾಜ್ಯಗಳಲ್ಲಿ ಕರ್ನಾಟಕ ಇಲ್ಲ. ಬಿಹಾರ, ಮಧ್ಯಪ್ರದೇಶದ ವಿವಿಧ ಭಾಗಗಳು, ಛತ್ತೀಸಗಡ, ಗುಜರಾತ್ ಮತ್ತು ಗೋವಾದಲ್ಲಿ ಸೆಪ್ಟೆಂಬರ್ 2ರವರೆಗೂ ವ್ಯಾಪಕ ಮಳೆಯಾಗಲಿದೆ. ಈ ವಾರದ ಹವಾಮಾನ ವರದಿ ನೀಡಿರುವ ಐಎಂಡಿ, ಕೊಂಕಣ ಪ್ರದೇಶ ಹಾಗೂ ಗೋವಾದಲ್ಲಿ ಮಂಗಳವಾರ ಮತ್ತು ಬುಧವಾರ ವಿಪರೀತ ಮಳೆ ಅಬ್ಬರ ಉಂಟಾಗಲಿದೆ ಎಂದಿದೆ.
ಭಾರತದ ದಕ್ಷಿಣ ಭಾಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ತೀವ್ರತೆ ಹೆಚ್ಚಾಗಿರಲಿದೆ. ತೆಲಂಗಾಣದಲ್ಲಿ ಸೋಮವಾರ ಮಳೆ ಆರ್ಭಟ ಭಾರಿ ಪ್ರಮಾಣದಲ್ಲಿ ಇರಲಿದೆ. ಈಶಾನ್ಯ ಭಾಗದಲ್ಲಿ ಬುಧವಾರದ ಬಳಿಕ ಮಳೆ ಅಧಿಕಗೊಳ್ಳುವ ನಿರೀಕ್ಷೆಯಿದೆ.
'ಮುಂದಿನ 4-5 ದಿನಗಳಲ್ಲಿ ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ಭಾರತದ ವಾಯವ್ಯ ಭಾಗದಲ್ಲಿ ಚೆದುರಿದಂತೆ ಮಳೆಯಾಗಲಿದೆ. ಆ.30ರಂದು ಉತ್ತರಾಖಂಡದ ಅಲ್ಲಲ್ಲಿ ಭರ್ಜರಿ ಮಳೆ ಸುರಿಯಲಿದೆ.

ಮಳೆಯಾಗಿರುವ ಪ್ರದೇಶಗಳು
ಸುಬ್ರಹ್ಮಣ್ಯದಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿ, ಹಡಗಲಿ, ಕುಂದಾಪುರ, ಮಂಕಿ, ಭಟ್ಕಳ,ಮೂಡುಬಿದಿರೆ, ಪುತ್ತೂರು, ಕೆಂಭಾವಿ, ಆಗುಂಬೆ, ಬೆಳ್ತಂಗಡಿ, ಮಾಣಿ, ವಿಟ್ಲ, ಧರ್ಮಸ್ಥಳ, ಹೊನ್ನಾವರ, ಭೀಮರಾಯನಗುಡಿ, ಭಾಗಮಂಡಲ, ಜಯಪುರ, ರಾಯಚೂರು, ಶ್ರೀಮಂಗಲ, ತಾಳಗುಪ್ಪ, ಮಂಡಗದ್ದೆ, ಗೋಪಾಲನಗರ, ಬೆಳೆಹೊನ್ನೂರು, ಮಡಿಕೇರಿಯಲ್ಲಿ ಮಳೆಯಾಗಿದೆ.

ಬೆಂಗಳೂರು ವಾತಾವರಣ ಹೇಗಿದೆ?
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ. ಎಚ್ಎಎಲ್ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಯಾವ್ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಈಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಅದರಲ್ಲೂ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಇಂದು ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ರಾಯಚೂರು, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಪ್ಪಳ, ಯಾದಗಿರಿಯಲ್ಲಿ ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.












Click it and Unblock the Notifications