ಅ.17ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅಧಿಕ ಮಳೆ, ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು, ಅಕ್ಟೋಬರ್ 15: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 17 ರಂದು ಅತ್ಯಧಿಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 17 ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ,ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ದಾವಣಗೆರೆ ಜಿಲ್ಲಾದ್ಯಂತ ಭಾರಿ ಮಳೆಯಿಂದಾಗಿ ನೂರಾರು ಎಕರೆ ಗದ್ದೆ ಜಲಾವೃತವಾಗಿದ್ದು, ನೂರಾರು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಹರಿಹರ ತಾಲೂಕಿನ ಯಲವಟ್ಟಿಗ್ರಾಮಸ್ಥರನ್ನು ರಾತ್ರೋರಾತ್ರಿ ಗ್ರಾಮದ ದೇವಸ್ಥಾನ, ಶಾಲೆಗಳು, ಸಮುದಾಯ ಭವನಗಳಿಗೆ ಸ್ಥಳಾಂತರಿಸಲಾಯಿತು. ಸೂಳೆಕೆರೆಯು ಕೋಡಿ ಬಿದ್ದಿದೆ.
ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಸೋಗಿ-1, ಮಾನ್ಯರ ಮಸಲವಾಡ-2 ಮನೆಗಳು ಭಾಗಶಃ ಕುಸಿದು ಬಿದ್ದು ಹಾನಿಯಾಗಿದೆ. ಮೆಕ್ಕೆ, ಹೈಬ್ರೀಡ್ ಜೋಳ ಕಟಾವು ಮಾಡಲು ತೀವ್ರ ತೊಂದರೆಯಾಗಿದೆ. ಸಂಡೂರು ತಾಲೂಕಿನ ತೋರಣಗಲ್ ಹೋಬಳಿಯ ಜೋಗದಲ್ಲಿ 18 ಎಕರೆಗೂ ಹೆಚ್ಚು ಜಮೀನಿನಲ್ಲಿ ಬೆಳೆಹಾನಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಹೆಚ್ಚಳವಾಗಿದೆ. ಜನಜೀವನ ಅಸ್ತವ್ಯಸ್ತಗೊಂಡಿತ್ತು. ಜಿಲ್ಲೆಯ ನದಿಗಳಲ್ಲಿ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಭತ್ತ ಕೊಯ್ಲಿಗೆ ಸಮಸ್ಯೆಯಾಗಿದೆ. ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ವರ್ಷಧಾರೆ ಮುಂದುವರೆದಿದೆ.
ಭಾರತೀಯ ಹವಾಮಾನ ಇಲಾಖೆ ಭಾರೀ ಮಳೆ ಮುನ್ಸೂಚನೆ ನೀಡಿರುವುದರಿಂದ ಬೆಟ್ಟ ಪ್ರದೇಶದಲ್ಲಿ ರಾತ್ರಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಮಳೆಯಿಂದ ಹಾನಿಯಾದರೆ ಕಾರ್ಯಾಚರಣೆಗಾಗಿ 6 ಎನ್ಡಿಆರ್ಎಫ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ.
ಮುಂದಿನ 3 ದಿನ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ
ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಪರಿಸ್ಥಿತಿ ಇನ್ನೂ ಎರಡು ದಿನ ಮುಂದುವರೆಯಲಿದೆ. ಇದರ ಪ್ರಭಾವದಿಂದ ಕೇರಳದಲ್ಲಿ ಮಳೆ ಅಕ್ಟೋಬರ್ 17ರ ತನಕ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕೇರಳ ಸರ್ಕಾರ ಘಟ್ಟ ಪ್ರದೇಶಗಳಲ್ಲಿ ಸಂಜೆ 7 ರಿಂದ ಬೆಳಗ್ಗೆ 7 ಗಂಟೆಯ ತನಕ ಪ್ರಯಾಣ ನಿರ್ಬಂಧಿಸಿದೆ.
ಎಲ್ಲಾ ಜಿಲ್ಲೆಗಳಲ್ಲಿ ಎಚ್ಚರದಿಂದ ಇರಲು ಕೇರಳ ಸರ್ಕಾರ ಸೂಚನೆ ನೀಡಿದೆ. ಹವಾಮಾನ ಇಲಾಖೆ ತಿರುವನಂತಪುರಂ ಸೇರಿದಂತೆ 13 ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆಯನ್ನು ನೀಡಿದೆ. 6 ಎನ್ಡಿಆರ್ಎಫ್ ತಂಡದ ಜೊತೆ ವಿವಿಧ ಇಲಾಖೆಗಳ ತಂಡಗಳು ಸಹ ಸನ್ನದ್ಧವಾಗಿರುವಂತೆ ಸೂಚನೆ ಕೊಡಲಾಗಿದೆ.
ಮಳೆಯಾಗಿರುವ ಪ್ರದೇಶಗಳು
ಎಲೆಕ್ಟ್ರಾನಿಕ್ ಸಿಟಿ, ಚಿಂತಾಮಣಿ, ಮಂಚಿಕೆರೆ, ಮಾಗಡಿ, ಚಿಕ್ಕಮಗಳೂರು, ಕುಣಿಗಲ್, ಶಿಡ್ಲಘಟ್ಟ, ಹಿರೆಕೆರೂರು, ಗೋಪಾಲನಗರ, ಧರ್ಮಸ್ಥಳ, ಬೆಳ್ತಂಗಡಿ, ಸವನೂರು, ಹೊಸದುರ್ಗ, ಆನವಟ್ಟಿ, ಜಯಪುರ, ಬಾಳೆಹೊನ್ನೂರು, ಗೌರಿಬಿದನೂರು, ದಾವಣಗೆರೆ, ಪಾಗಡದಲ್ಲಿ ಮಳೆಯಾಗಿದೆ.
ರಾಜ್ಯದ ವಾತಾವರಣ ಹೇಗಿರಲಿದೆ?
ಮುಂದಿನ 48 ಗಂಟೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಅಕ್ಟೋಬರ್ 17 ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ,ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ಬೆಂಗಳೂರು ಹವಾಮಾನ ವರದಿ
ಮೋಡಕವಿದ ವಾತಾವರಣ ಇರಲಿದೆ, ಗುರುವಾರ ಸಂಜೆಯಿಂದಲೇ ಮತ್ತೆ ಮಳೆ ಶುರುವಾಗಿದೆ. 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್ಎಎಲ್ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.Recommended Video
ಅತಿ ಹೆಚ್ಚು ಗರಿಷ್ಠ ಉಷ್ಣಾಂಶ
ಕಲಬುರಗಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಬೀದರ್ನಲ್ಲಿ 17.6 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.