Karnataka Rains : ಕರ್ನಾಟಕದಾದ್ಯಂತ ಮಳೆ ಅಬ್ಬರ: ಬೆಂಗಳೂರಿನಲ್ಲಿ ಮುಂದಿನ 4 ದಿನ ಮಳೆ
ಬೆಂಗಳೂರು ಅಕ್ಟೋಬರ್ 15: ಬೆಂಗಳೂರಿನಲ್ಲಿ ಮತ್ತೆ ಮಳೆ ಅರ್ಭಟ ಹೆಚ್ಚಾಗಿದೆ. ಕಳೆದೆರೆಡು ದಿನಗಳಿಂದ ಸಂಜೆ ವೇಳೆ ಬೆಂಗಳೂರಿನಾದ್ಯಂತ ವರುಣನ ಅರ್ಭಟ ಜೋರಾಗಿತ್ತು. ಆದರೆ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಮತ್ತೆ ಸಿಲಿಕಾನ್ ಸಿಟಿ ತತ್ತರಿಸಿ ಹೋಗಿದೆ. ರಾತ್ರಿ ಇಡೀ ಸುರಿದ ಧಾರಾಕಾರ ಮಳೆಗೆ ಇಂದು ಅಲ್ಲಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಇನ್ನೂ ಮುಂದಿನ 4 ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಗರದಲ್ಲಿ ಶುಕ್ರವಾರ ಸಂಜೆಯ ಬಳಿಕ ಮಳೆಯ ಅಬ್ಬರ ಹೆಚ್ಚುತ್ತಿರುವುದರಿಂದ ರಾಜಕಾಲುವೆ, ತಗ್ಗು ಪ್ರದೇಶ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಸಂಜೆ ನಂತರ ಒಂದೇ ಸಮನೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಇದರಿಂದ ನಗರದ ರಸ್ತೆ ಸಂಚಾರ, ಜನಜೀವನ ಅಸ್ತವ್ಯಸ್ಥಗೊಂಡಿವೆ. ಬೆಳಿಗ್ಗೆ ಕೆಲಸಕ್ಕೆ ಹೋಗುವ ವಾಹನ ಸವಾರರು ರಸ್ತೆಗಳು ಜಲಾವೃತಗೊಂಡಿದ್ದರಿಂದ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ.

ಬೆಂಗಳೂರು ಮಳೆಗೆ ಜನ ತತ್ತರ
ರಾತ್ರಿ 8ಗಂಟೆ ಹೊತ್ತಿಗೆ ನಂದಿನಿ ಬಡಾವಣೆಯಲ್ಲಿ 42ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿದೆ. ಶುಕ್ರವಾರ ಬೆಳಗ್ಗೆಯಿಂದ ಸಂಜೆವರೆಗೆ ಎಂದಿನಂತೆಯೇ ನಗರದಲ್ಲಿ ಸಾಮಾನ್ಯ ವಾತಾವರಣ ಕಂಡು ಬಂತು. ಮಧ್ಯಾಹ್ನದ ನಂತರ ಮಬ್ಬು ವಾತಾವರಣ ಕವಿದು ಜಿಟಿ ಜಿಟಿ ಮಳೆ ಆರಂಭವಾಯಿತು. ಕೆಲ ಕಾಲ ಮಳೆ ವಿರಾಮ ಪಡೆಯಿತಾದರೂ ರಾತ್ರಿ 7ಗಂಟೆ ನಂತರ ಒಂದು ಗಂಟೆಗೂ ಹೆಚ್ಚು ಕಾಲ ಒಂದೇ ಸಮನೆ ಬೆಂಗಳೂರು ನಗರ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿಯತೊಡಗಿದೆ. ಈ ಮಳೆ ತಡರಾತ್ರಿವರೆಗೂ ಮುಂದುವರಿಯುವ ಲಕ್ಷಣಗಳು ಇವೆ ಎಂದು ರಾಜ್ಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

4 ದಿನ ಹಳದಿ ಅಲರ್ಟ್
ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿಗೆ ಮುಂದಿನ 4 ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಕರಾವಳಿಗೆ ಕೂಡ ಅ. 18ರಂದು ಹಳದಿ ಅಲರ್ಟ್ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕರ್ನಾಟಕದ ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವುದರಿಂದ ರಾಜ್ಯದಲ್ಲಿ ಇನ್ನೂ 4 ದಿನ ಅಧಿಕ ಮಳೆಯಾಗಲಿದೆ.
ಇಂದಿನಿಂದ 3 ದಿನಗಳ ಕಾಲ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆ ಇರಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಕರಾವಳಿ ಭಾಗದಲ್ಲೂ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

ಕಲಬುರಗಿ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಸೇರಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆ.ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇಂದು ತುಮಕೂರು, ಮಂಡ್ಯ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ 'ಹಳದಿ' ಅಲರ್ಟ್ ನೀಡಲಾಗಿದೆ.

ಎಲ್ಲೆಲ್ಲಿ ಮಳೆ ಸಾಧ್ಯತೆ?
ಇಂದು ಕರ್ನಾಟಕ ಮಾತ್ರವಲ್ಲದೆ ತಮಿಳುನಾಡಿನಲ್ಲೂ ತೀವ್ರ ಮಳೆಯಾಗಲಿದ್ದು, ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನಗಳವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ತೆಲಂಗಾಣ, ಗೋವಾ, ಕೇರಳದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಆಂಧ್ರಪ್ರದೇಶ, ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಜಾರ್ಖಂಡ್, ಪಶ್ಚಿಮ ಬಂಗಾಳ, ಛತ್ತೀಸ್ಗಢ, ಒಡಿಶಾ, ಮಹಾರಾಷ್ಟ್ರ ಮತ್ತು ಲಕ್ಷದ್ವೀಪಗಳಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ. ಉತ್ತರಾಖಂಡ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಮಧ್ಯಪ್ರದೇಶದಲ್ಲಿ ಕೂಡ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.












Click it and Unblock the Notifications