Karnataka Rain: ಮುಂದಿನ ನಾಲ್ಕು ವಾರಗಳಲ್ಲಿ ಕರ್ನಾಟಕದ ಹಲವೆಡೆ ಭಾರೀ ಮಳೆ: IMD ಮುನ್ಸೂಚನೆ
ಬೆಂಗಳೂರು ಸೆಪ್ಟೆಂಬರ್ 15: ಮುಂದಿನ ನಾಲ್ಕು ವಾರಗಳಲ್ಲಿ ಕರ್ನಾಟಕದ ಎಲ್ಲಾ ಭಾಗಗಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನಗಳಲ್ಲಿ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ, ಮಲೆನಾಡು ಮತ್ತು ರಾಜ್ಯದ ಕರಾವಳಿ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಐಎಂಡಿ ಸೂಚನೆ ನೀಡಿದೆ.
ಐಎಂಡಿ ಮೂಲಗಳ ಪ್ರಕಾರ ಜೂನ್ 1ರಿಂದ ಆಗಸ್ಟ್ 16, 2024 ರವರೆಗೆ ರಾಜ್ಯದಲ್ಲಿ ಸಾಮಾನ್ಯ 580.2 mmಗೆ ಹೋಲಿಸಿದರೆ 700.6 mm ಮಳೆಯಾಗಿದೆ. ರಾಜ್ಯದ ಸಿರುಗುಪ್ಪ, ದೇವದುರ್ಗ, ಔರಾದ್, ಬೀದರ್, ಕಮಲನಗರ, ಹುಬ್ಬಳ್ಳಿ, ಶಹಾಪುರ, ಯಾದಗಿರಿ ತಾಲೂಕುಗಳಲ್ಲಿ ಮಳೆ ಕೊರತೆಯಾಗಿದ್ದು, ಮುಂದಿನ ವಾರಗಳಲ್ಲಿ ಈ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.

ಅಧಿಕಾರಿಗಳೊಂದಿಗೆ ಸಿಎಂ ಸಭೆ
ಒಟ್ಟು 13 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ರಾಜ್ಯದಾದ್ಯಂತ ಅಂದಾಜು 81,589 ಹೆಕ್ಟೇರ್ನಲ್ಲಿ ಬೆಳೆದ ಬೆಳೆ ಮಳೆಯಿಂದಾಗಿ ಹಾನಿಯಾಗಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಚಿವ ಕೃಷ್ಣಬೈರೇಗೌಡ, ಕಂದಾಯ ಹಾಗೂ ಕೃಷಿ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.
ಈ ವೇಳೆ ರಾಜ್ಯದಲ್ಲಿನ ಮೂಲಸೌಕರ್ಯ, ಬೆಳೆ, ಮನೆಗಳಿಗೆ ಆಗಿರುವ ಹಾನಿಯ ಅವಲೋಕನ ಮಾಡಲಾಯಿತು. ಒಟ್ಟು 13 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಈ ಸಮೀಕ್ಷೆ ಪೂರ್ಣಗೊಂಡ ನಂತರ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಲಾಗುವುದು ಎಂದು ಸಿಎಂ ಸಭೆಯಲ್ಲಿ ಹೇಳಿದರು. ಈ ಬಾರಿ ಭಾರೀ ಮಳೆಗೆ 67 ಮಂದಿ ಸಾವನ್ನಪ್ಪಿದ್ದು, 66 ಪ್ರಕರಣಗಳಲ್ಲಿ 3.29 ಕೋಟಿ ಪರಿಹಾರ ವಿತರಿಸಲಾಗಿದೆ.
ಬಿಬಿಎಂಪಿ ಅಲರ್ಟ್
ಬೆಂಗಳೂರಿನಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪ್ರತಿದಿನ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಲು ಮತ್ತು ಮಳೆ ಹಾನಿ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ವಲಯ ಆಯುಕ್ತರು ಮತ್ತು ಇಂಜಿನಿಯರ್ಗಳು ಎಚ್ಚೆತ್ತುಕೊಳ್ಳುವಂತೆ ಸೂಚಿಸಲಾಗಿದೆ. ಮಳೆ ಹಾನಿ ನಿಯಂತ್ರಣಕ್ಕೆ ಕ್ರಮಕೈಗೊಳ್ಳಲು ವಿಫಲವಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಸಭೆಯಲ್ಲಿ ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕೃಷಿ, ಕಂದಾಯ, ಲೋಕೋಪಯೋಗಿ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳಿಗೆ ಮಳೆಯಿಂದಾಗುವ ಹಾನಿಯನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ತಿಳಿಸಿದರು.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚಿಸಿದರು. ಲೋಕೋಪಯೋಗಿ ಇಲಾಖೆಯಿಂದ ಸೇತುವೆಗಳ ಫಿಟ್ನೆಸ್ ಪ್ರಮಾಣ ಪತ್ರಗಳನ್ನು ತೆಗೆದುಕೊಳ್ಳುವಂತೆ ಮತ್ತು ವಾಹನಗಳ ಸುರಕ್ಷಿತ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಸಂಪರ್ಕ ರಸ್ತೆಗಳನ್ನು ಸರಿಪಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು. ಮಳೆಯ ನೀರಿನಲ್ಲಿ ಮುಳುಗಿರುವ ಸೇತುವೆಗಳ ಮೇಲೆ ವಾಹನಗಳ ಸಂಚಾರವನ್ನು ನಿಷೇಧಿಸುವಂತೆ ಅಧಿಕಾರಿಗಳಿಗೆ ಸಿಎಂ ತಿಳಿಸಿದರು.
ಇದೇ ವೇಳೆ ರಾಜ್ಯದ ಜಲಾಶಯಗಳು ಅವುಗಳ ಸಾಮರ್ಥ್ಯದ 89% ರಷ್ಟು ತುಂಬಿವೆ. ಕೆಳಭಾಗದಲ್ಲಿ ಪ್ರವಾಹವನ್ನು ತಪ್ಪಿಸಲು ನೀರಿನ ಒಳಹರಿವಿನ ಆಧಾರದ ಮೇಲೆ ಜಲಾಶಯಗಳಿಂದ ನೀರನ್ನು ಬಿಡುಗಡೆ ಮಾಡಲು ಅಧಿಕಾರಿಗಳಿಗೆ ತಿಳಿಸಲಾಯಿತು.












Click it and Unblock the Notifications