ಲೋಕಸಭಾ ಚುನಾವಣೆ : ಬಿಜೆಪಿ ಟಿಕೆಟ್ಗೆ 12 ಕ್ಷೇತ್ರದಲ್ಲಿ ಪೈಪೋಟಿ!
Recommended Video

ಬೆಂಗಳೂರು, ಮಾರ್ಚ್ 06 : ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಪಡೆಯಲು ರಾಜ್ಯದ 12 ಕ್ಷೇತ್ರಗಳಲ್ಲಿ ಭಾರಿ ಪೈಪೋಟಿ ನಡೆಯುತ್ತಿದೆ. ಹೊಸದಾಗಿ ಪಕ್ಷಕ್ಕೆ ಸೇರಿದವರು, ಕಳೆದ ಚುನಾವಣೆಯಲ್ಲಿ ಸೋಲು ಕಂಡವರು ಸಹ ಟಿಕೆಟ್ಗಾಗಿ ಲಾಬಿ ಆರಂಭಿಸಿದ್ದಾರೆ.
ಹಾಲಿ ಸಂಸದರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಹೈಕಮಾಂಡ್ ಸಂದೇಶ ನೀಡಿದೆ. ಆದರೆ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ವಿಜಯಪುರ ಮುಂತಾದ ಕ್ಷೇತ್ರದಲ್ಲಿ ಹಾಲಿ ಸಂಸದರಿಗೆ ಟಿಕೆಟ್ ಬೇಡ ಎಂಬ ಕೂಗು ಕೇಳಿಬರುತ್ತಿದೆ.
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮಾರ್ಚ್ 15ರ ಬಳಿಕ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದು, ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಸಲಿದ್ದಾರೆ. ರಾಜ್ಯ ಘಟಕ ಸಿದ್ಧಪಡಿಸಿರುವ ಪಟ್ಟಿಯನ್ನು ನೀಡಲಿದ್ದಾರೆ.
12 ಕ್ಷೇತ್ರಗಳ ಟಿಕೆಟ್ಗೆ ಭಾರಿ ಪೈಪೋಟಿ ನಡೆಯುತ್ತಿದೆ. ಹೈಕಮಾಂಡ್ ನಾಯಕರು ಯಾರಿಗೆ ಟಿಕೆಟ್ ನೀಡುತ್ತಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ 20 + ಸ್ಥಾನಗಳಲ್ಲಿ ಜಯಗಳಿಸಬೇಕು ಎಂಬುದು ಬಿಜೆಪಿಯ ಗುರಿಯಾಗಿದೆ.

ಟಿಕೆಟ್ಗಾಗಿ ಪೈಪೋಟಿ
ಚಿಕ್ಕೋಡಿ ಕ್ಷೇತ್ರದ ಟಿಕೆಟ್ಗಾಗಿ ರಮೇಶ್ ಕತ್ತಿ ಮತ್ತು ಪ್ರಭಾಕರ ಕೋರೆ ಆಕಾಂಕ್ಷಿಗಳಾಗಿದ್ದಾರೆ.
ಗುಲ್ಬರ್ಗಾ ಕ್ಷೇತ್ರದಲ್ಲಿ ಡಾ.ಉಮೇಶ್ ಜಾಧವ್ ಅವರಿಗೆ ಟಿಕೆಟ್ ಸಿಗಬಹುದು. ಸ್ಥಳೀಯ ನಾಯಕರು ಸಹ ಟಿಕೆಟ್ ಪಡೆಯಲು ಪ್ರಯತ್ನ ನಡೆಸಿದ್ದಾರೆ.
ರಾಯಚೂರು ಕ್ಷೇತ್ರದ ಬಿಜೆಪಿ ಟಿಕೆಟ್ ಪಡೆಯಲು ಮಾಜಿ ಸಂಸದ ಸಣ್ಣ ಫಕೀರಪ್ಪ ಪ್ರಯತ್ನ ನಡೆಸಿದ್ದಾರೆ. ಹಾಲಿ ರಾಯಚೂರು ಸಂಸದರಾಗಿರುವ ಕಾಂಗ್ರೆಸ್ನ ಬಿ.ವಿ.ನಾಯಕ್ ಅವರು ಸಹ ಬಿಜೆಪಿಗೆ ಬರಬಹುದು ಎಂಬ ಸುದ್ದಿಗಳಿವೆ.

ಬಿಜೆಪಿ ಟಿಕೆಟ್ಗಾಗಿ ಪ್ರಯತ್ನ
ಬಳ್ಳಾರಿ ಕ್ಷೇತ್ರದ ಟಿಕೆಟ್ಗಾಗಿ ಶ್ರೀರಾಮುಲು ಸಹೋದರಿ ಜೆ.ಶಾಂತ, ಸುರೇಶ್ ಬಾಬು, ಶಾಸಕ ಬಿ.ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್ ಪ್ರಯತ್ನ ನಡೆಸುತ್ತಿದ್ದಾರೆ.
ತುಮಕೂರು ಕ್ಷೇತ್ರದ ಟಿಕೆಟ್ಗಾಗಿ ಮಾಜಿ ಶಾಸಕ ಸುರೇಶ್ ಗೌಡ ಪ್ರಯತ್ನ ನಡೆಸುತ್ತಿದ್ದಾರೆ. ಮಾಜಿ ಸಂಸದ ಜಿ.ಎಸ್.ಬಸವರಾಜು ಅವರ ಹೆಸರು ಸಹ ಕೇಳಿಬರುತ್ತಿದೆ.

ಬಿಜೆಪಿ ಟಿಕೆಟ್ ಯಾರಿಗೆ?
ಚಾಮರಾಜನರ ಕ್ಷೇತ್ರದ ಟಿಕೆಟ್ಗಾಗಿ ಎಂ.ಶಿವಣ್ಣ ಮತ್ತು ಎ.ಆರ್.ಕೃಷ್ಣಮೂರ್ತಿ ಪ್ರಯತ್ನ ನಡೆಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಟಿಕೆಟ್ಗಾಗಿ ಮಾಜಿ ಎಂಎಲ್ಸಿ ಸಿ.ಅಶ್ವಥ್ ನಾರಾಯಣ, ರಾಮನಗರ ಬಿಜೆಪಿ ಅಧ್ಯಕ್ಷ ರುದ್ರೇಶ್ ಪ್ರಯತ್ನಿಸುತ್ತಿದ್ದಾರೆ.
ಚಿಕ್ಕಬಳ್ಳಾಪುರ ಟಿಕೆಟ್ಗಾಗಿ ಪೈಪೋಟಿ ನಡೆಯುತ್ತಿದೆ. ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ ಮತ್ತು ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಅವರಲ್ಲಿ ಯಾರು ಅಭ್ಯರ್ಥಿ? ಎಂಬುದು ಇನ್ನೂ ತೀರ್ಮಾನವಾಗಬೇಕಿದೆ. ಕೋಲಾರ ಕ್ಷೇತ್ರದಲ್ಲಿ ಡಿ.ಎಸ್.ವೀರಯ್ಯ, ಎಂ.ನಾರಾಯಣಸ್ವಾಮಿ, ಚಿ.ನಾ.ರಾಮು, ಛಲವಾದಿ ನಾರಾಯಣಸ್ವಾಮಿ ಟಿಕೆಟ್ ಆಕಾಂಕ್ಷಿಗಳು.

ಅಭ್ಯರ್ಥಿ ಅಂತಿಮಗೊಂಡಿಲ್ಲ
ಚಿತ್ರದುರ್ಗ, ಬೆಂಗಳೂರು ದಕ್ಷಿಣ, ಮಂಡ್ಯ ಮತ್ತು ಹಾಸನ ಕ್ಷೇತ್ರಕ್ಕೆ ಬಿಜೆಪಿ ಇನ್ನೂ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ತಯಾರು ಮಾಡಿಲ್ಲ. ಎದುರಾಳಿ ಅಭ್ಯರ್ಥಿಗಳನ್ನು ನೋಡಿಕೊಂಡು ಅಂತಿಮಗೊಳಿಸುವ ಸಾಧ್ಯತೆ ಇದೆ.












Click it and Unblock the Notifications