ಉಪ ಚುನಾವಣೆ: ಮೂರು ಪಕ್ಷಗಳ ಸಂಭಾವ್ಯ ಅಭ್ಯರ್ಥಿಗಳ ಅಂತಿಮ ಪಟ್ಟಿ!
ಬೆಂಗಳೂರು, ಸೆ. 28: ಹಾನಗಲ್ ಹಾಗೂ ಸಿಂದಗಿ ಉಪ ಚುನಾವಣೆ ಘೋಷಣೆ ಆಗುತ್ತಿದ್ದಂತೆಯೆ ಮೂರು ರಾಜಕೀಯ ಪಕ್ಷಗಳಲ್ಲಿ ಸಂಚಲನ ಉಂಟಾಗಿದೆ. ಅಭ್ಯರ್ಥಿಗಳ ಆಯ್ಕೆ ಗೊಂದಲ ಸೃಷ್ಟಿಯಾಗಿದೆ. ಅದರಲ್ಲಿಯೂ ಆಡಳಿತ ಪಕ್ಷ ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ.
ಮಾಜಿ ಸಚಿವ ಸಿ.ಎಂ. ಉದಾಸಿ ಅವರ ನಿಧನದಿಂದ ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ. ಜೊತೆಗೆ ಹಾನಗಲ್ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದ್ದು, ಅಲ್ಲಿ ಅಸ್ತಿತ್ವ ಉಳಿಸಿಕೊಳ್ಳುವ ಸವಾಲು ಬಿಜೆಪಿಗೆ ಎದುರಾಗಿದೆ.
ಸಿಂದಗಿಯಲ್ಲಿ ಜೆಡಿಎಸ್ನಿಂದ ಆಯ್ಕೆಯಾಗಿದ್ದ ಮಾಜಿ ಸಚಿವ ಎಂ.ಸಿ. ಮನಗೂಳಿ ಅವರ ನಿಧನದಿಂದ ಉಪ ಚುನಾವಣೆ ಘೋಷಣೆಯಾಗಿದೆ. ಆದರೆ ಎಂ.ಸಿ. ಮನಗೂಳಿ ಅವರ ಪುತ್ರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಹೀಗಾಗಿ ಅಲ್ಲಿ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ಕೊಡಲು ಬಿಜೆಪಿ ನಾಯಕರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಎರಡೂ ಕ್ಷೇತ್ರಗಳಲ್ಲಿ ಮೂರು ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದರೂ ಈಗಾಗಲೇ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸಂಭಾವ್ಯ ಅಭ್ಯರ್ಥಿಗಳನ್ನು ಘೋಷಣೆ ಮಾಡಿವೆ. ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಸಂಪುರ್ಣ ವಿವರ ಮುಂದಿದೆ!
ಹಾನಗಲ್: ಬಿಜೆಪಿ ಟಿಕೆಟ್ಗೆ ಭಾರಿ ಪೈಪೋಟಿ!
ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಬದಲಾವಣೆಗೆ ಗಾಳಿ ಬೀಸುತ್ತಿದೆ. ಅಲ್ಲಿ ಈ ಹಿಂದೆ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ಸ್ಪರ್ಧೆ ಇರುತ್ತಿತ್ತು. ಪಕ್ಷಗಳು ಅನ್ನುವುದಕ್ಕಿಂತ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ಹಾಗೂ ದಿ. ಸಿ.ಎಂ. ಉದಾಸಿ ಅವರ ಮಧ್ಯೆ ನೇರ ಸ್ಪರ್ಧೆ ಇರುತ್ತಿತ್ತು. ದಿ. ಸಿ.ಎಂ. ಉದಾಸಿ ಅವರು ಜನತಾ ಪರಿವಾರ ತೊರೆದು ಬಿಜೆಪಿ ಸೇರಿದ ಮೇಲೂ ಆ ಸ್ಪರ್ಧೆ ಮುಂದುವರೆಯಿತು. ಹೀಗಾಗಿ ಹಾನಗಲ್ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿದೆ. ಅದರಿಂದಾಗಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಹಾನಗಲ್ ಕ್ಷೇತ್ರದಲ್ಲಿ ಮೂರು ಪಕ್ಷಗಳ ಸಂಭಾವ್ಯ ಅಭ್ಯರ್ಥಿಗಳು ಹೀಗಿದ್ದಾರೆ.
ಹಾನಗಲ್ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಗಳು
ಹಾನಗಲ್ ಕ್ಷೇತ್ರದ ಅಭ್ಯರ್ಥಿಯನ್ನು ಜೆಡಿಎಸ್ ಈಗಾಗಲೇ ಪ್ರಕಟಿಸಿದೆ. ಉಳಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ಅಧಿಕೃತವಾಗಿ ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕಿದೆ.
ದಿ. ಸಿ.ಎಂ. ಉದಾಸಿ ಪುತ್ರ ಹಾಗೂ ಸಂಸದ ಶಿವಕುಮಾರ್ ಉದಾಸಿ ಅವರು ತಮ್ಮ ಪತ್ನಿ ರೇವತಿ ಶಿವಕುಮಾರ್ ಉದಾಸಿ ಅವರಿಗೆ ಬಿಜೆಪಿ ಟಿಕೆಟ್ ಪಡೆಯಲು ತೀವ್ರ ಪ್ರಯತ್ನ ನಡೆಸಿದ್ದಾರೆ. ಅವರೊಂದಿಗೆ ಪುರಸಭೆ ಮಾಜಿ ಅಧ್ಯಕ್ಷ, ತಾಲೂಕಿನಲ್ಲಿ ಬಿಜೆಪಿ ಕಟ್ಟಿ ಬೆಳೆಸಿರುವ ಸಂಘ ಪರಿವಾರದ ಹಿನ್ನೆಲೆಯ ಕಲ್ಯಾಣ್ ಕುಮಾರ್ ಶೆಟ್ಟರ್,ಸ್ಥಳೀಯ ಮುಖಂಡ ರಾಜಶೇಖರಗೌಡ ಕಟ್ಟೇಗೌಡರ್, ಹಾವೇರಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೃಷ್ಣ ಈಳಗೇರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ಧರಾಜ ಕಲಕೋಟಿ, ಹಾನಗಲ್ ತಾಲೂಕಾ ಬಿಜೆಪಿ ಘಟಕದ ಅಧ್ಯಕ್ಷ ಮಹಾಂತೇಶ ಸೊಪ್ಪೀನ್ ಅವರು ಸೇರಿದಂತೆ ಒಟ್ಟು 6 ಜನರು ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡಿದ್ದ ಶ್ರೀನಿವಾಸ ಮಾನೆ ಅವರಿಗೆ ಟಿಕೆಟ್ ಸಿಗುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆ ಬಾಕಿಯಿದೆ.
ಸಿಂಧಗಿ ಉಪ ಚುನಾವಣೆ ಟಿಕೆಟ್ ಆಕಾಂಕ್ಷಿಗಳು!
ಜೆಡಿಎಸ್ನಿಂದ ಆಯ್ಕೆಯಾಗಿದ್ದ ದಿ. ಎಂ.ಸಿ. ಮನಗೂಳಿ ಅವರ ನಿಧನದಿಂದ ಕ್ಷೇತ್ರ ತೆರವಾಗಿದ್ದು, ಉಪ ಚುನಾವಣೆ ಎದುರಾಗಿದೆ. ದಿ. ಎಂ.ಸಿ. ಮನಗೂಳಿ ಅವರ ಪುತ್ರ ಅಶೋಕ್ ಮನಗೂಳಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಲು ಬಯಸಿದ್ದಾರೆ. ಅವರಿಗೆ ಟಿಕೆಟ್ ಕೊಡುವ ಭರವಸೆಯನ್ನು ರಾಜ್ಯ ಕಾಂಗ್ರೆಸ್ ನಾಯಕರು ಕೊಟ್ಟಿದ್ದಾರೆ. ಹೀಗಾಗಿ ಅಧಿಕೃತ ಘೋಷಣೆ ಬಾಕಿಯಿದೆ. ಅವರೊಂದಿಗೆ ವಿಠ್ಠಲ್ ಕೋಳೂರ, ಶರಣಪ್ಪ ಸುಣಗಾರ ಹಾಗೂ ಚನ್ನು ವಾರದ ಅವರು ಕಾಂಗ್ರೆಸ್ ಪಕ್ಷದ ಟಿಕೆಟ್ನ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.
ಇನ್ನು ಬಿಜೆಪಿಯಿಂದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಬಳಹಷ್ಟು ಪ್ರಯತ್ನ ನಡೆಸಿದ್ದರು ಎಂಬ ಮಾಹಿತಿಯಿತ್ತು. ಇದೀಗ ಕ್ಷೇತ್ರದ ಮಾಜಿ ಶಾಸಕ ರಮೇಶ್ ಭೂಸನೂರ ಅವರಿಗೆ ಟಿಕೆಟ್ ಕೊಡಲು ಬಿಜೆಪಿ ಹೈಕಮಾಂಡ್ ತೀರ್ಮಾನ ಮಾಡಿದೆ ಎಂಬ ಖಚಿತ ಮಾಹಿತಿಯಿದೆ. ಅವರೊಂದಿಗೆ ಸ್ಥಳೀಯ ಬಿಜೆಪಿ ಮುಖಂಡ ಅಶೋಕ್ ಅಲ್ಲಾಪುರ ಅವರು ಕೂಡ ಸಿಂದಗಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.
ಮೂರು ಪಕ್ಷಗಳ ಅಂತಿಮ ಅಭ್ಯರ್ಥಿಗಳು!
ಉಪ ಚುನಾವಣೆ ನಡೆಯಲಿರುವ ಎರಡೂ ಕ್ಷೇತ್ರಗಳಲ್ಲಿ ಮೂರು ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಅಂತಿಮಗೊಳಿಸಿವೆ. ಆದರೆ ಅಧಿಕೃತವಾಗಿ ಘೋಷಣೆ ಮಾಡುವುದು ಬಾಕಿಯಿದೆ. ತಮ್ಮ ತಮ್ಮ ಪಕ್ಷಗಳ ಆಂತರಿಕ ಪದ್ದತಿ ಘೋಷಣೆ ಮಾಡಲು ತೀರ್ಮಾನಿಸಿದ್ದಾರೆ ಎಂಬ ಮಾಹಿತಿಯಿದೆ.
ಹೀಗಾಗಿ ಹಾನಗಲ್ ಕ್ಷೇತ್ರದಲ್ಲಿ ಸಂಸದ ಶಿವಕುಮಾರ್ ಉದಾಸಿ ಅವರ ಪತ್ನಿ ರೇವತಿ ಉದಾಸಿ ಅಥವಾ ಕಲ್ಯಾಣ್ ಕುಮಾರ್ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ಖಚಿತವಾಗಿದೆ. ಇಬ್ಬರಲ್ಲಿ ಒಬ್ಬರನ್ನು ಕಣಕ್ಕಿಳಿಸಲು ಬಿಜೆಪಿ ತೀರ್ಮಾನಿಸಿದೆ ಎನ್ನಲಾಗಿದೆ. ಹಾನಗಲ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಶ್ರೀನಿವಾಸ ಮಾನೆ ಹಾಗೂ ಜೆಡಿಎಸ್ನಿಂದ ನಿಯಾಜ್ ಶೇಖ್ ಸ್ಪರ್ಧೆ ಮಾಡಲಿದ್ದಾರೆ ಎಂಬುದು ಖಚಿತವಾಗಿದೆ.
ಸಿಂದಗಿ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ರಮೇಶ್ ಭೂಸನೂರ, ಕಾಂಗ್ರೆಸ್ ಪಕ್ಷದಿಂದ ಅಶೋಕ್ ಮನಗೂಳಿ ಹಾಗೂ ಜೆಡಿಎಸ್ನಿಂದ ಸ್ಥಳೀಯ ಮುಸ್ಲಿಂ ಸಮುದಾಯದ ಮುಖಂಡರೊಬ್ಬರಿಗೆ ಟಿಕೆಟ್ ಕೊಡಲು ತೀರ್ಮಾನಿಸಲಾಗಿದೆ ಎಂಬ ಮಾಹಿತಿಯಿದೆ.