ಹೈಕಮಾಂಡ್ನಿಂದ ತುರ್ತು ಕರೆ : ದೆಹಲಿಗೆ ತೆರಳಿದ ಸಿದ್ದರಾಮಯ್ಯ
Recommended Video

ಬೆಂಗಳೂರು, ಮಾರ್ಚ್ 21 : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ನಾಯಕರು ಕರೆ ಮಾಡಿದ್ದು ತುರ್ತಾಗಿ ದೆಹಲಿಗೆ ತೆರಳಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಮಾ.22ರಂದು ದೆಹಲಿಯಲ್ಲಿ ಸಭೆ ನಡೆಯಲಿದೆ.
ಗುರುವಾರ ಸಿದ್ದರಾಮಯ್ಯ ಅವರು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಮತ್ತು ಹಾಸನ ಜಿಲ್ಲಾ ಕಾಂಗ್ರೆಸ್ ನಾಯಕರ ಜೊತೆ ಸಭೆ ನಡೆಸಬೇಕಿತ್ತು. ಆದರೆ, ಹೈಕಮಾಂಡ್ ನಾಯಕರಿಂದ ಕರೆ ಬಂದ ಹಿನ್ನಲೆಯಲ್ಲಿ ತುರ್ತಾಗಿ ದೆಹಲಿಗೆ ತೆರಳಿದ್ದಾರೆ.
ಶುಕ್ರವಾರ ಹಾಸನದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಲಿದ್ದಾರೆ. ಅದರಲ್ಲಿ ಕಾಂಗ್ರೆಸ್ ನಾಯಕರು ಸಕ್ರಿಯವಾಗಿ ಭಾಗವಹಿಸುವ ಕುರಿತು ಸಿದ್ದರಾಮಯ್ಯ ಅವರು ಸಭೆ ನಡೆಸಬೇಕಿತ್ತು.
ಹಾಸನ ಭಾಗದ ಶಾಸಕರ ಸಭೆಯನ್ನು ಸಿದ್ದರಾಮಯ್ಯ ಅವರು ಶನಿವಾರಕ್ಕೆ ಮುಂದೂಡಿದ್ದು, ಹೈಕಮಾಂಡ್ ಕರೆ ಬಳಿಕ ದೆಹಲಿಗೆ ತೆರಳಿದ್ದಾರೆ. ಸಂಜೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜೊತೆ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.

ದೆಹಲಿಯಲ್ಲಿ ಸಂಜೆ ಸಭೆ
ಸಂಜೆ ದೆಹಲಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಕೆಪಿಸಿಸಿ ಅಧ್ಯ್ಷ ದಿನೇಶ್ ಗುಂಡೂರಾವ್, ಮಲ್ಲಿಕಾರ್ಜುನ ಖರ್ಗೆ ಅವರು ಸಭೆ ನಡೆಸಲಿದ್ದಾರೆ.

ತುರ್ತಾಗಿ ಕರೆ ಮಾಡಿದ್ದು ಏಕೆ?
ಮಾ.22ರಂದು ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಿಗದಿಯಾಗಿದೆ. ಅದರಲ್ಲಿ ಸಿದ್ದರಾಮಯ್ಯ ಪಾಲ್ಗೊಳ್ಳಬೇಕಿತ್ತು. ಆದರೆ, ಅದಕ್ಕೂ ಮೊದಲೇ ಹೈಕಮಾಂಡ್ ಕರೆ ಮಾಡಿದೆ. ಇದಕ್ಕೆ ಕಾರಣವಾಗಿರುವುದು ಮಂಡ್ಯ ಕ್ಷೇತ್ರದ ವಿಚಾರ.

ಸುಮಲತಾ ಅಂಬರೀಶ್
ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವಾಗ ಹಲವು ಕಾಂಗ್ರೆಸ್ ನಾಯಕರು ಜೊತೆಗಿದ್ದರು. ಈ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದರು. ಆದ್ದರಿಂದ, ಹೈಕಮಾಂಡ್ ಈ ಕುರಿತು ಚರ್ಚೆ ನಡೆಸಲಿದೆ.

ಶುಕ್ರವಾರ ಪಟ್ಟಿ ಬಿಡುಗಡೆ
ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಕರ್ನಾಟಕದಲ್ಲಿ ಕಾಂಗ್ರೆಸ್ ಲೋಕಸಭಾ ಚುನಾವಣೆಯನ್ನು ಎದುರಿಸುತ್ತಿದೆ. ಕಾಂಗ್ರೆಸ್ 20 ಸ್ಥಾನಗಳಲ್ಲಿ, ಜೆಡಿಎಸ್ 8 ಸ್ಥಾನಗಳಲ್ಲಿ ಕಣಕ್ಕಿಳಿಯಲಿವೆ. ಶುಕ್ರವಾರದ ಸಭೆಯ ಬಳಿಕ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.












Click it and Unblock the Notifications