ಬಸವಕಲ್ಯಾಣ ಕ್ಷೇತ್ರದಿಂದ 9 ಮಂದಿ ಅರ್ಜಿ; ಗೆಲ್ಲುವ ಅಭ್ಯರ್ಥಿಗೆ ಟಿಕೆಟ್: ಸಿದ್ದರಾಮಯ್ಯ ಹೇಳಿದ್ದೇನು.?
ಕಾಂಗ್ರೆಸ್ ಪಕ್ಷ ಒಂದು ಪ್ರಣಾಳಿಕೆಯನ್ನು ತಯಾರು ಮಾಡಿ, ಜನರಿಗೆ ಆ ಮೂಲಕ ಭರವಸೆಗಳನ್ನು ನೀಡಿದ್ದೇವೆ. ನಾವು ನೀಡಿದ ಭರವಸೆಗಳ ಈಡೇರಿಕೆಗೆ ನೂರಕ್ಕೆ ನೂರು ಬದ್ಧರಾಗಿರುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೀದರ್,ಫೆಬ್ರವರಿ3: ಬಸವಕಲ್ಯಾಣ ಮತಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಎಂದು 9 ಜನ ಅರ್ಜಿ ಹಾಕಿದ್ದಾರೆ. ಈ 9 ಜನಕ್ಕೂ ಟಿಕೇಟ್ ನೀಡಲು ಸಾಧ್ಯವಿಲ್ಲ. ಹೈಕಮಾಂಡ್ ನವರು ಕಾರ್ಯಕರ್ತರ ಅಭಿಪ್ರಾಯ ಪಡೆದು ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುತ್ತಾರೆ. ಟಿಕೆಟ್ ಸಿಗದ 8 ಜನರು ಬೇಸರ ಮಾಡಿಕೊಳ್ಳದೆ ಪಕ್ಷದ ಗೆಲುವಿಗಾಗಿ ಕೆಲಸ ಮಾಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮನವಿ ಮಾಡಿದರು.
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಒಂದು ಪ್ರಣಾಳಿಕೆಯನ್ನು ತಯಾರು ಮಾಡಿ, ಜನರಿಗೆ ಆ ಮೂಲಕ ಭರವಸೆಗಳನ್ನು ನೀಡಿದ್ದೇವೆ. ನಾವು ನೀಡಿದ ಭರವಸೆಗಳ ಈಡೇರಿಕೆಗೆ ನೂರಕ್ಕೆ ನೂರು ಬದ್ಧರಾಗಿರುತ್ತೇವೆ. ಅವನ್ನು ನಾವು ಅಧಿಕಾರಕ್ಕೆ ಬಂದ ನಂತರ ಖಂಡಿತಾ ಜಾರಿ ಮಾಡುತ್ತೇವೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರುವವರೆಗೆ ದೇಶವನ್ನು ಕಟ್ಟುವ ಕೆಲಸ ಮಾಡಿದೆ. ಸಂಘಪರಿವಾರದ ಜನ ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನು ಎಂದು ಪ್ರಶ್ನೆ ಮಾಡುತ್ತಾರೆ. ಈ ಪ್ರಶ್ನೆ ಕೇಳುವವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು ಯಾರು ಎಂದು ಉತ್ತರಿಸಲಿ. ಹಿಂದೂ ಮಹಾಸಭಾ, ಬಿಜೆಪಿ, ಆರ್,ಎಸ್,ಎಸ್, ಜನಸಂಘ ಈ ಯಾವುದೇ ಸಂಘಟನೆಯ ಒಬ್ಬನೇ ಒಬ್ಬ ವ್ಯಕ್ತಿ ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗಿಯಾಗಿದ್ದಾರ? ಒಬ್ಬರಾದರೂ ದೇಶಕ್ಕಾಗಿ ಹುತಾತ್ಮರಾಗಿದ್ದಾರ? ಮಹಾತ್ಮಾ ಗಾಂಧಿ ಅವರ ನೇತೃತ್ವದಲ್ಲಿ ತಮ್ಮ ಆಸ್ತಿ, ಪಾಸ್ತಿ ಕಳೆದುಕೊಂಡು, ಪ್ರಾಣ ತ್ಯಾಗ ಮಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು ಕಾಂಗ್ರೆಸ್ ನವರು. ಈ ಬಿಜೆಪಿಯವರಿಂದ ನಾವು ಪಾಠ ಕಲಿಯಬೇಕಾದ ಅಗತ್ಯ ಇದೆಯಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಸಾವರ್ಕರ್ ಅವರು ಜೈಲಿನಿಂದ ಬಿಡುಗಡೆಯಾಗಲು 5 ಬಾರಿ ಕ್ಷಮಾಪಣಾ ಪತ್ರ ಬರೆದಿದ್ದರು, ಆ ನಂತರ ಜೈಲಿನಿಂದ ಹೊರಬಂದು ಬ್ರಿಟಿಷರಿಂದ ಪಿಂಚಣಿ ತೆಗೆದುಕೊಳ್ಳುತ್ತಿದ್ದರು, ಗಾಂಧೀಜಿಯವರನ್ನು ಕೊಂದ ನಾಥೂರಾಮ್ ಗೋಡ್ಸೆ ಅವರನ್ನು ಪೂಜಿಸುವವರಿಂದ ನಾವು ಪಾಠ ಕಲಿಯಬೇಕ? ಗಾಂಧೀಜಿಯವರ ಹತ್ಯೆಗೆ ಪ್ರಚೋದನೆ ನೀಡಿದ್ದು ಇದೇ ಸಾವರ್ಕರ್. ಗಾಂಧೀಜಿಯವರು ಹಿಂದೂ ಮುಸ್ಲೀಂಮರನ್ನು ಒಂದು ಮಾಡುತ್ತಾರೆ, ಎಲ್ಲರೂ ಒಟ್ಟಾಗಿ ಬಾಳುವಂತೆ ಮಾಡುತ್ತಾರೆ ಎಂಬ ಕಾರಣಕ್ಕೆ ಅವರ ಹತ್ಯೆ ನಡೆಯಿತು. ಗೋಡ್ಸೆ ಮತ್ತು ಸಾವರ್ಕರರ ವಂಶಸ್ಥರೆ ಈ ಬಿಜೆಪಿಯವರು. ಇಂಥವರಿಗೆ ಮತ ನೀಡುತ್ತೀರ? ಇವರು ಸಂವಿಧಾನಕ್ಕೆ ವಿರುದ್ಧವಾಗಿದ್ದಾರೆ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧಿಯನ್ನು ಕೊಂದಿದ್ದಾರೆ. ಇಂಥವರಿಗೆ ಬೆಂಬಲ ನೀಡಬೇಕ? ಎಂದು ಪ್ರಶ್ನಿಸಿದ್ದಾರೆ.
ಇಂದು ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. 2014ರಲ್ಲಿ 50 ಕೆ.ಜಿಯ ಒಂದು ಚೀಲ ಡಿಎಪಿ ಬೆಲೆ 450 ರೂ. ಇದ್ದದ್ದು ಇಂದು 1350 ರಿಂದ 1400 ರೂ. ಆಗಿದೆ. ರೈತರ ಆದಾಯವನ್ನು ದುಪ್ಪಟ್ಟು ಮಾಡುತ್ತೇವೆ ಎಂದು ನರೇಂದ್ರ ಮೋದಿ ಅವರು ಹೇಳಿದ್ದರು, ಇಂದು ರೈತರ ಆದಾಯ ದುಪ್ಪಟ್ಟಾಗಿದೆಯಾ? ಯಾಕೆ ಸುಳ್ಳು ಹೇಳಿದ್ರಿ ಮೋದಿಜಿ? ಮನಮೋಹನ್ ಸಿಂಗ್ ಅವರ ಸರ್ಕಾರ ರೈತರ ಸಾಲ 78,000 ಕೋಟಿ ರೂ. ಅನ್ನು ಮನ್ನಾ ಮಾಡಿತ್ತು.
ಮೋದಿ ಸರ್ಕಾರ ಒಂದು ರೂಪಾಯಿಯಾದ್ರೂ ಮನ್ನಾ ಮಾಡಿದೆಯಾ? ಇಲ್ಲಿನ ಬಿಜೆಪಿ ಸರ್ಕಾರ ಮಾಡಿದೆಯಾ? ನಾನು ಮುಖ್ಯಮಂತ್ರಿಯಾಗಿರುವಾಗ 22 ಲಕ್ಷದ 27 ಸಾವಿರ ರೈತರ ರೂ.50,000 ವರೆಗಿನ ಸಹಕಾರಿ ಬ್ಯಾಂಕುಗಳ ರೂ.8,165 ಕೋಟಿ ಸಾಲ ಮನ್ನಾ ಮಾಡಿದ್ದೆ. ಈಗ ರೈತರ ಸಾಲ, ಕೃಷಿಗೆ ಹಾಕುವ ಬಂಡವಾಳ ಜಾಸ್ತಿಯಾಗಿದೆ ಆದರೆ ರೈತರ ಆದಾಯ ಜಾಸ್ತಿಯಾಗಿಲ್ಲ. ಹಾಲು, ಮೊಸರು, ನೋಟ್ ಬುಕ್, ಮಂಡಕ್ಕಿ, ಪೆನ್ನು ಇವುಗಳ ಮೇಲೆ 18% ತೆರಿಗೆ ಹಾಕಿದ್ದಾರೆ, ಮೋದಿ ಅವರಿಗೆ ಮನುಷ್ಯತ್ವ ಇದೆಯಾ? ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಂದೇ ಒಂದು ಹುದ್ದೆ ಭರ್ತಿ ಮಾಡಿದ್ದು ನಾನು ಕಂಡಿಲ್ಲ. ನಾವು ಅಧಿಕಾರಕ್ಕೆ ಬಂದ ಮೇಲೆ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಪ್ರತೀ ವರ್ಷ 5000 ಕೋಟಿ ರೂ. ಖರ್ಚು ಮಾಡುತ್ತೇವೆ ಮತ್ತು ಈ ಭಾಗದ ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂಬ ಭರವಸೆ ನೀಡಿದ್ದೇವೆ. ಪ್ರತೀ ಪಂಚಾಯತಿಗೆ ಒಂದು ಕೋಟಿ ಅನುದಾನ ನೀಡುತ್ತೇವೆ.
ನಾವು ಈಗಾಗಲೇ 200 ಯುನಿಟ್ ವಿದ್ಯುತ್ ಅನ್ನು ಎಲ್ಲ ಮನೆಗಳಿಗೆ ಉಚಿತವಾಗಿ ನೀಡುವ ಗೃಹಜ್ಯೋತಿ ಹಾಗೂ ಪ್ರತೀ ಮನೆಯ ಯಜಮಾನಿಗೆ ತಿಂಗಳಿಗೆ 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಘೋಷಣೆ ಮಾಡಿದ್ದೇವೆ.
ನಾವು ಅಧಿಕಾರದಲ್ಲಿದ್ದಾಗ ನಾಡಿನ ಬಡ ಜನರು ಎರಡು ಹೊತ್ತು ಊಟ ಮಾಡಲಿ ಎಂದು 7 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದ್ದೆವು, ಅದನ್ನು 5 ಕೆ.ಜಿ ಗೆ ಇಳಿಸಿದ್ದಾರೆ, ನಾವು ಮತ್ತೆ ಅಧಿಕಾರಕ್ಕೆ ಬಂದ ಮೊದಲ ದಿನದಂದಲೇ 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ, ನೀರಾವರಿ ಇಲಾಖೆಗೆ 5 ವರ್ಷಗಳಲ್ಲಿ 2 ಲಕ್ಷ ಕೋಟಿ ಹಣ ನೀಡಿ ಬಾಕಿ ಇರುವ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುತ್ತೇವೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ನಾನು ಮುಖ್ಯಮಂತ್ರಿಯಾಗುವಾಗ ನೀಡುವ ಅನುದಾನ 400 ಕೋಟಿ ರೂ. ಇತ್ತು, ನಾನು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ನಮ್ಮ ಕಡೆಯ ಬಜೆಟ್ ನಲ್ಲಿ 3150 ಕೋಟಿಗೆ ಏರಿಸಿದ್ದೆ. ನಾವು ಮತ್ತೆ ಅಧಿಕಾರಕ್ಕೆ ಬಂದರೆ ಇದನ್ನು 10,000 ಕೋಟಿಗೆ ಹೆಚ್ಚಳ ಮಾಡುತ್ತೇವೆ.
ಗೊಂಡ, ರಾಜಗೊಂಡ, ಕಾಡು ಕುರುಬ ಮುಂತಾದ ಸಮುದಾಯಗಳನ್ನು ಎಸ್,ಟಿ ಸೇರಿಸುವಂತೆ ನಾವು ಶಿಫಾರಸು ಮಾಡಿದ್ದೆವು, ಕೋಲಿ, ಕಬ್ಬಲಿಗ ಸಮಾಜವನ್ನು ಕೂಡ ಸೇರಿಸುವಂತೆ ಶಿಫಾರಸು ಮಾಡಿದ್ದೆವು. ಈಗ ಈ ಜನರಿಗೆ ಸಿಆರ್ಈ ಸೆಲ್ ನವರು ಕಿರುಕುಳ ನೀಡಲು ಆರಂಭ ಮಾಡಿದ್ದಾರೆ. ನಾವು ಅಧಿಕಾರಕ್ಕೆ ಬಂದ ತಕ್ಷಣ ಹೊಸ ಆದೇಶ ಮಾಡಿ ಅವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ.
ನಾರಾಯಣ್ ರಾವ್ ಅವರು ಇಂದು ನಮ್ಮ ನಡುವೆ ಇಲ್ಲ. ಅವರು ಹೋರಾಟದ ಮೂಲಕ ಶಾಸಕರಾಗಿದ್ದರು. ಬಡವರು, ದಲಿತರು, ಅವಕಾಶ ವಂಚಿತ ಜನರು, ರೈತರ ಪರವಾಗಿ ತಮ್ಮ ಜೀವನದುದ್ದಕ್ಕೂ ಹೋರಾಟ ಮಾಡಿಕೊಂಡು ಬಂದವರು. ನನಗೆ ಬಹಳಾ ಆಪ್ತರಾಗಿದ್ದವರು. ಅವರ ಅಗಲಿಕೆ ನನ್ನ ಕುಟುಂಬ ಸದಸ್ಯನನ್ನು ಕಳೆದುಕೊಂಡಷ್ಟೇ ನೋವಾಗಿದೆ. ಬಸವಕಲ್ಯಾಣದ ಅಭಿವೃದ್ಧಿಗೆ ಅವರು ನಮ್ಮ ಸರ್ಕಾರ ಇದ್ದಾಗ ಸಾಕಷ್ಟು ಅನುದಾನವನ್ನು ಕೇಳಿ ಪಡೆದುಕೊಂಡು, ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರು. ಮತ್ತೆ ನಾವು ಅಧಿಕಾರಕ್ಕೆ ಬಂದ ನಂತರ ಈ ಕ್ಷೇತ್ರದ ಅಭಿವೃದ್ಧಿಗೆ ಪೂರ್ಣ ಸಹಕಾರ ನೀಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಇಲ್ಲಿನ ಜನ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡುತ್ತೇನೆ.












Click it and Unblock the Notifications