ಜನಾರ್ದನ ರೆಡ್ಡಿ ಬಗ್ಗೆ ಬಳ್ಳಾರಿಯಲ್ಲಿ ಬಿಎಸ್ವೈ ಹೇಳಿದ್ದೇನು?
ಬಳ್ಳಾರಿ, ಜನವರಿ 05 : 'ಜನಾರ್ದನ ರೆಡ್ಡಿ ಅವರು ಪಕ್ಷದಲ್ಲಿ ಸಕ್ರಿಯವಾಗಿಲ್ಲ. ಅವರು ಪಕ್ಷದ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ' ಎಂದು ಯಡಿಯೂರಪ್ಪ ಹೇಳಿದರು.
ಬಳ್ಳಾರಿಯಲ್ಲಿ ಮಾತನಾಡಿದ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, 'ವಿಜಯನಗರ ಶಾಸಕ ಆನಂದ್ ಸಿಂಗ್ ಪಕ್ಷ ಬಿಡುವ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ' ಎಂದರು.

'ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಪಕ್ಷದ ಚಟುವಟಿಕೆಯಲ್ಲಿ ಈಗ ಸಕ್ರಿಯರಾಗಿಲ್ಲ. ಅವರು ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಬಗ್ಗೆ ಹೈಕಮಾಂಡ್ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ' ಎಂದರು.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಜನಾರ್ದನ ರೆಡ್ಡಿ ಅವರಿಗೆ 2015ರಲ್ಲಿ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ, ಬಳ್ಳಾರಿಗೆ ಭೇಟಿ ನೀಡದಂತೆ ಷರತ್ತು ವಿಧಿಸಿತ್ತು.
ಆದ್ದರಿಂದ, ಜನಾರ್ದನ ರೆಡ್ಡಿ ಅವರು ಬಳ್ಳಾರಿ ರಾಜಕೀಯದಿಂದ ದೂರವುಳಿದಿದ್ದಾರೆ. ಕೆಲವು ದಿನಗಳ ಹಿಂದೆ ಗದಗದಲ್ಲಿ ಸಂಸದ ಬಿ.ಶ್ರೀರಾಮುಲು ಅವರು ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದರು.
ಚುನಾವಣೆ ಹತ್ತಿರವಾಗುತ್ತಿರುವುದರಿಂದ ಜನಾರ್ದನ ರೆಡ್ಡಿ ಅವರ ರಾಜಕೀಯ ಪ್ರವೇಶದ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಜನಾರ್ದನ ರೆಡ್ಡಿ ಅವರು ಪುನಃ ರಾಜಕೀಯಕ್ಕೆ ಬರುವ ಬಗ್ಗೆ ಯಾವುದೇ ಹೇಳಿಕೆಗಳನ್ನು ನೀಡಿಲ್ಲ.












Click it and Unblock the Notifications