ರುದ್ರೇಶ್ ಹತ್ಯೆ : ಎನ್ಐಎ ತನಿಖೆ ರದ್ದುಪಡಿಸಲು ಹೈಕೋರ್ಟ್ ನಕಾರ
ಬೆಂಗಳೂರು, ಮಾರ್ಚ್ 26: ಶಿವಾಜಿನಗರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್ಎಸ್ಎಸ್) ಮುಖಂಡ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶವನ್ನು ಸೋಮವಾರ(ಮಾರ್ಚ್ 26)ದಂದು ನೀಡಿದೆ.
ರಾಷ್ಟ್ರೀಯ ತನಿಖಾ ದಳ(ಎನ್ಐಎ)ದ ತನಿಖೆಯನ್ನು ಕರ್ನಾಟಕ ಹೈಕೋರ್ಟ್ ಏಕ ಸದಸ್ಯ ಪೀಠ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಎನ್ಐಎ ಅಧಿಕಾರಿಗಳು, ಹೈಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರಿದ್ದ ದ್ವಿಸದಸ್ಯ ಪೀಠವು, ಏಕಸದಸ್ಯ ಪೀಠದ ಅದೇಶವನ್ನು ರದ್ದುಗೊಳಿಸಿದೆ. ಎನ್ಐಎ ಸಲ್ಲಿಸಿದ ಗೌಪ್ಯ ದಾಖಲೆಗಳು ಸೂಕ್ತವಾಗಿದ್ದು, ತನಿಖೆ ಮುಂದುವರೆಯಲಿ ಎಂದು ಆದೇಶಿಸಿದೆ.
ಎನ್ಐಎ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಇರ್ಫಾನ್ ಪಾಷಾ ಸೇರಿ ಇತರ ಐವರು ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠ, ತಾಂತ್ರಿಕ ಕಾರಣಗಳಿಂದಾಗಿ ಎನ್ ಐಎ ತನಿಖೆಯನ್ನು ರದ್ದುಗೊಳಿಸಿತ್ತು.
ಮೊದಲಿಗೆ ಪ್ರಕರಣದ ತನಿಖೆ ನಡೆಸಿದ್ದ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಐವರನ್ನು ಬಂಧಿಸಿದ್ದರು. ಆರೋಪಿಗಳೆಲ್ಲರೂ ಪಾಪುಲರ್ ಫ್ರಂಟ್ ಆಫ್ ಇಂಡಿಯಾದ ಸದಸ್ಯರು ಎಂದು ವಿಚಾರಣೆ ವೇಳೆ ತಿಳಿದು ಬಂದಿತ್ತು.ಈ ಪ್ರಕರಣದಲ್ಲಿ ಇಂಡಿಯನ್ ಮುಜಾಹಿದೀನ್, ಎಸ್ ಡಿಪಿಐ, ಪಿಎಫ್ ಐ ಹಾಗೂ ಅಲ್ ಉಮ್ಮಾ ಸಂಘಟನೆಗಳ ಹೆಸರುಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ತನಿಖೆ ಜವಾಬ್ದಾರಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.












Click it and Unblock the Notifications