ನಂದಿಬೆಟ್ಟದ ಬಳಿ ಆದಿಯೋಗಿ ಪ್ರತಿಮೆ ಸ್ಥಾಪನೆಗೆ ಹೈಕೋರ್ಟ್ ತಡೆ
ಬೆಂಗಳೂರು, ಜನವರಿ 11; ಚಿಕ್ಕಬಳ್ಳಾಪುರದ ನಂದಿಬೆಟ್ಟದ ಬಳಿ ಆದಿಯೋಗಿ ಪ್ರತಿಮೆ ಸ್ಥಾಪನೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನ್ಯಾಯಾಲಯ ಸೂಚನೆ ನೀಡಿರುವುದರಿಂದ ರಾಜ್ಯ ಸರ್ಕಾರ, ಈಶ ಯೋಗ ಕೇಂದ್ರಕ್ಕೆ ಭಾರೀ ಹಿನ್ನಡೆಯಾಗಿದೆ.
ಕೋರ್ಟ್ ಆದೇಶದಿಂದಾಗಿ ಸಂಕ್ರಾಂತಿಗೆ ನಡೆಸಲು ಉದ್ದೇಶಿಸಿದ್ದ ಬೃಹತ್ ಕಾರ್ಯಕ್ರಮಕ್ಕೂ ತಡೆ ಬಿದ್ದಿದೆ. ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಲೆ ನೇತೃತ್ವದ ಹೈಕೋರ್ಟ್ ವಿಭಾಗೀಯಪೀಠ ರಾಜ್ಯ ಸರ್ಕಾರ, ಈಶ ಯೋಗ ಕೇಂದ್ರ ಸೇರಿ ಎಲ್ಲಾ 13 ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ಅರ್ಜಿದಾರರ ಪರ ವಕೀಲರು, ನ್ಯಾಯಾಲಯದಲ್ಲಿ ಇದು ಪರಿಸರ ಸೂಕ್ಷ್ಮ ವಲಯವಾಗಿದೆ. ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗುತ್ತಿದೆ. ಸರ್ಕಾರ ಕಾನೂನುಬಾಹಿರವಾಗಿ ಜಮೀನು ಮಂಜೂರು ಮಾಡಿದೆ. ನಂದಿ ಬೆಟ್ಟಕ್ಕೆ ಐತಿಹಾಸಿಕ ಮಹತ್ವವಿದೆ ಎಂದರು.

ನ್ಯಾಯಾಲಯ, ಪರಿಸರದ ಮೇಲೆ ಪರಿಣಾಮ ಬೀರಬಹುದೆಂಬುದನ್ನು ಒಪ್ಪಬಹುದು ಎಂದು ಹೇಳಿತು. ಸರ್ಕಾರದ ಅಧಿಸೂಚನೆ ಪ್ರಶ್ನಿಸಲು ಅವಕಾಶ ನೀಡಿದ ಹೈಕೋರ್ಟ್, ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಆದೇಶ ನೀಡಿತು. ಜನವರಿ 15ರಂದು ಯೋಗೇಶ್ವರ ಲಿಂಗ ಸ್ಥಾಪನೆಗೆ ಉದ್ದೇಶಿಸಲಾಗಿತ್ತು.
ಯಥಾಸ್ಥಿತಿ ಆದೇಶ ತೆರವು: ನಂದಿಬೆಟ್ಟದ ಬಳಿ ಆದಿಯೋಗಿ ಪ್ರತಿಮೆ ಸ್ಥಾಪನೆ ವಿಚಾರ ಯಥಾಸ್ಥಿತಿ ಕಾಯ್ದುಕೊಳ್ಳಲು ನೀಡಿರುವ ಆದೇಶ ತೆರವುಗೊಳಿಸಬೇಕು ಎಂದು ಈಶ ಯೋಗ ಕೇಂದ್ರದಿಂದ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ಬುಧವಾರ ಸಂಜೆ ಯೋಗ ಕೇಂದ್ರದ ಪರ ವಕೀಲರು, ಇದೇ ಜನವರಿ 15ರ ಸಂಕ್ರಾಂತಿ ದಿನದಂದು ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆದಿಯೋಗಿ ಪ್ರತಿಮೆ ಬಳಿ ಬೃಹತ್ ಕಾರ್ಯಕ್ರಮ ನಡೆಯಬೇಕಿದೆ. ಯಥಾಸ್ಥಿತಿ ಆದೇಶದಿಂದ ಕಾರ್ಯಕ್ರಮಕ್ಕೆ ತೊಂದರೆಯಾಗುವ ಸಾಧ್ಯತೆಯಿದೆ ಎಂದರು.
ವಿಭಾಗೀಯ ಪೀಠ ಈ ಬಗ್ಗೆ ವಿಸ್ತೃತ ವಿಚಾರಣೆ ಅಗತ್ಯವಿದೆ ಎಂದು ಜನವರಿ 13ಕ್ಕೆ ಅರ್ಜಿಯ ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ.












Click it and Unblock the Notifications