ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ
ಬೆಂಗಳೂರು, ಜನವರಿ 09 : ರಾಜ್ಯ ಒಕ್ಕಲಿಗರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಿದ ಕ್ರಮ ಸರಿ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಆಡಳಿತಾಧಿಕಾರಿ ನೇತೃತ್ವದಲ್ಲಿಯೇ ಸಂಘಕ್ಕೆ ಚುನಾವಣೆ ನಡೆಸಬೇಕು ಎಂದು ಸೂಚನೆ ನೀಡಿದೆ.
ರಾಜ್ಯ ಒಕ್ಕಲಿಗರ ಸಂಘ ಮತ್ತು ಹಾಲಿ ನಿರ್ದೇಶಕ ಶಿವಲಿಂಗಯ್ಯ ಅವರು ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ನಿವೃತ್ತ ಐಎಎಸ್ ಅಧಿಕಾರಿ ಎಚ್.ಎಸ್. ಅಶೋಕಾನಂದ ಅವರನ್ನು ಆಡಳಿತಾಧಿಕಾರಿಯಾಗಿ ಕರ್ನಾಟಕ ಸರ್ಕಾರ ನೇಮಕ ಮಾಡಿದ್ದನ್ನು ಪ್ರಶ್ನಿಸಿದ್ದರು.
ಈ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಾಲಯ ಅಂತಿಮ ಆದೇಶ ನೀಡಿದೆ. 2018ರ ಆಗಸ್ಟ್ 20ರಂದು ರಾಜ್ಯ ಸರ್ಕಾರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿದ ಕ್ರಮ ಸರಿಯಾಗಿದೆ ಎಂದು ಹೇಳಿದೆ.

ರಾಜ್ಯ ಒಕ್ಕಲಿಗರ ಸಂಘದ ಅವಧಿ ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಎಚ್.ಎಸ್.ಅಶೋಕಾನಂದ ಅವರ ನೇತೃತ್ವದಲ್ಲಿ ಸಂಘದ ಚುನಾವಣೆ ನಡೆಸಬೇಕು. ಉನ್ನತ ಶ್ರೇಣಿಯ ಅಧಿಕಾರಿಯೊಬ್ಬರನ್ನು ಚುನಾವಣೆಯ ಮೇಲ್ವಿಚಾರಣೆಗೆ ನೇಮಿಸಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.
ವಾರ್ಷಿಕ ಲೆಕ್ಕ ಪರಿಶೋಧನಾ ವರದಿಯನ್ನು ಸಲ್ಲಿಸಿಲ್ಲ ಎಂಬ ಕಾರಣಕ್ಕೆ ಕರ್ನಾಟಕ ಸರ್ಕಾರ ರಾಜ್ಯ ಒಕ್ಕಲಿಗರ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿತ್ತು. ಸಂಘ ಈ ನೇಮಕವನ್ನು ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡಿತ್ತು.












Click it and Unblock the Notifications