ಜಯಲಲಿತಾ ಚಿನ್ನಾಭರಣ ತಮಿಳುನಾಡಿಗೆ ಹಸ್ತಾಂತರಕ್ಕೆ ತಡೆ
ಬೆಂಗಳೂರು, ಮಾರ್ಚ್ 06: ಬೆಂಗಳೂರು ನಗರದ ವಿಶೇಷ ನ್ಯಾಯಾಲಯದ ಸುಪರ್ಧಿಯಲ್ಲಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರು ಅಕ್ರಮವಾಗಿಗಳಿಸಿದ್ದ ಚಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ.
ಹಾಗಾಗಿ ಬುಧವಾರದಿಂದ ವಿಶೇಷ ನ್ಯಾಯಾಲಯದಲ್ಲಿ ನಡೆಯಬೇಕಿದ್ದ ಚಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಪ್ರಕ್ರಿಯೆ ಸ್ಥಗಿತಗೊಳ್ಳಲಿದೆ. ಜಯಲಲಿತಾ ಮಗಳು ಜೆ. ದೀಪ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ. ಎಂ. ನವಾಜ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ, ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ ವಿಚಾರಣೆಯನ್ನು ಮಾ.26 ಕ್ಕೆ ಮುಂದೂಡಿದೆ.

ಆಭರಣ ತಮಗೆ ಸೇರಬೇಕು: ಅರ್ಜಿದಾರರ ಪರ ವಕೀಲರು, ಜಯಲಲಿತಾ ವಿರುದ್ದದ ಭ್ರಷ್ಟಾಚಾರ ಆರೋಪ ಸಂಬಂಧ ಸುಪ್ರೀಂಕೋರ್ಟ್ನಿಂದ ತೀರ್ಪು ಬರುವ ಮುನ್ನವೇ ಅವರ ಮೃತರಾಗಿದ್ದರು. ಆದ ಕಾರಣ ಅವರನ್ನು ಆರೋಪ ಮುಕ್ತರು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಆದ್ದರಿಂದ, ಅರ್ಜಿ ದಾರರು ಜಯಲಲಿತಾರ ಕಾನೂನು ಬದ್ದ ವಾರಸುದರಾಗಿದ್ದು, ಅವರ ಎಲ್ಲ ಚಿನ್ನಾಭರಣಗಳನ್ನು ಅರ್ಜಿದಾರರಿಗೆ ಹಸ್ತಾಂತರ ಮಾಡಬೇಕು ಎಂದು ಕೋರಿದರು.
ಈ ವಾದ ದಾಖಲಿಸಿಕೊಂಡ ನ್ಯಾಯಪೀಠ, ನಗರದ ವಿಶೇಷ ನ್ಯಾಯಾಲಯದಿಂದ ತಮಿಳುನಾಡು ಸರ್ಕಾರಕ್ಕೆ ಬುಧವಾರದಿಂದ ಆಗಬೇಕಾಗಿದ್ದ ಚಿನ್ನಾಭರಣಗಳ ಹಸ್ತಾರ ಪ್ರಕ್ರಿಯೆಗೆ ತಡೆ ನೀಡಿ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ.
ಪ್ರಕರಣದ ವಿಚಾರಣೆಗಾಗಿ ಕರ್ನಾಟಕ ಸರ್ಕಾರ ವೆಚ್ಚ ಮಾಡಿದ್ದ 5 ಕೋಟಿ ರೂ.ಗಳ ಡಿಡಿಯನ್ನು ಈಗಾಗಲೇ ತಮಿಳುನಾಡು ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ನೀಡಿದೆ. ಆದರೆ, ಇನ್ನೂ ರಾಜ್ಯ ಸರ್ಕಾರದ ಖಾತೆಗೆ ಬರುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವಕೀಲರು ತಿಳಿಸಿದ್ದಾರೆ.
ಚಿನ್ನಾಭರಣ ಸೇರಿ ಏನೇನಿದೆ?; ಜಯಲಲಿತಾ ಅವರಿಂದ ಪೊಲೀಸರು, 7040 ಗ್ರಾಂ ತೂಕದ 468 ಬಗೆಯ ಚಿನ್ನ ಹಾಗೂ ವಜ್ರಖಚಿತ ಆಭರಣಗಳು, 700 ಕೆ.ಜಿ. ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜೆರೇಟರ್, 10 ಟಿ.ವಿ. ಸೆಟ್ , 8 ವಿಸಿಆರ್, 1 ವಿಡಿಯೋ ಕ್ಯಾಮೆರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್ ರೇಕಾರ್ಡರ್, 1040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್, 1,93,202 ರು. ನಗದು ಸೇರಿದಂತೆ ಹಲವು ವಸ್ತುಗಳನ್ನು ಜಪ್ತಿ ಮಾಡಿದ್ದರು.












Click it and Unblock the Notifications