ಉನ್ನತ ಮಟ್ಟದ ಸಮಿತಿ: ಸರ್ಕಾರಿ ಕಾಲೇಜುಗಳಲ್ಲಿನ 14,000 ಅತಿಥಿ ಉಪನ್ಯಾಸಕರಿಗೆ ಒಲಿಯುವುದೇ ಅದೃಷ್ಟ?
ಬೆಳಗಾವಿ, ಡಿ.14: ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರ ಅಧಿಕಾರಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿದೆ.
ರಾಜ್ಯದಲ್ಲಿ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿವೆ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಹಿರಿತನ ಪರಿಗಣಿಸಿ ಕಾಯಂ ಮಾಡಬೇಕು, ಮಾಸಿಕ 25,000 ರೂ. ವೇತನ ನಿಗದಿ ಮಾಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಬೆಳಗಾವಿ ಆಧಿವೇಶನದ ಹಿನ್ನೆಲೆಯಲ್ಲಿಯೂ ಹೋರಾಟ ತೀವ್ರಗೊಂಡಿತ್ತು.
ಅತಿಥಿ ಉಪನ್ಯಾಸಕ ಬೇಡಿಕೆಗಳ ಸಂಬಂಧ ಉನ್ನತ ಶಿಕ್ಷಣ, ಹಣಕಾಸು, ಕಾನೂನು ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಮಿತಿಯನ್ನು ರಚನೆ ಮಾಡಲಾಗಿದೆ. ಈ ಸಮಿತಿಯು ಒಂದು ತಿಂಗಳ ಒಳಗಾಗಿ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ.
14,000 ಅತಿಥಿ ಶಿಕ್ಷಕರು:
ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 14 ಸಾವಿರ ಅಥಿತಿ ಉಪನ್ಯಾಸರ ಬೇಡಿಕೆ ಈಡೇರಿಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಹಾಗೂ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರ ನೇತೃತ್ವದಲ್ಲಿ ಬೆಳಗಾವಿ ಸುವರ್ಣ ಸೌಧದಲ್ಲಿ ಮಂಗಳವಾರ ಸಭೆ ನಡೆಯಿತು.
ಪಶ್ಚಿಮ ಬಂಗಾಳದಲ್ಲಿ ಅತಿಥಿ ಉಪನ್ಯಾಸಕರಿಗೆ ಉತ್ತಮ ರೀತಿಯ ಗೌರವಧನ ನೀಡಲಾಗುತ್ತಿದೆ. ಇದೇ ಮಾದರಿಯನ್ನು ಮುಂದಿಟ್ಟುಕೊಂಡು ರಾಜ್ಯದಲ್ಲಿ ಅತಿಥಿ ಉಪನ್ಯಾಸಕರಿಗೆ ಗೌವರಧನ ಹೆಚ್ಚಿಸಲು, ನೇರ ನೇಮಕಾತಿಯಲ್ಲಿ ಅನುಕೂಲವಾಗುವಂತೆ ಕೃಪಾಂಕಗಳನ್ನು ನೀಡುವ ಸಂಬಂಧ ಸಭೆಯಲ್ಲಿ ಚರ್ಚಿಸಲಾಯಿತು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, 'ಸೇವಾ ಹಿರಿತನ ಆಧರಿಸಿ ಅತಿಥಿ ಉಪನ್ಯಾಸಕರಿಗೆ ಕೃಪಾಂಕಗಳನ್ನು ನೀಡಬೇಕು. ಹಂತ ಹಂತವಾಗಿ ನೇರ ನೇಮಕಾತಿ ಕೈಗೊಳ್ಳಬೇಕು' ಎಂದು ಸೂಚನೆ ನೀಡಿದರು.
ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಮಾತನಾಡಿ, 'ಯುಜಿಸಿ ನಿಮಯಗಳ ಆಧಾರದ ಮೇಲೆ ಉಪನ್ಯಾಸಕರ ನೇಮಕಾತಿ ಮಾಡಬೇಕಿದೆ. ಈಗಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸುವುದರೊಂದಿಗೆ, ಕಾನೂನು ತೊಡಕುಗಳು ಆಗದಂತೆ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಪ್ರಯತ್ನಿಸಲಾಗುವುದು' ಎಂದರು.
ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ಅರುಣ್ ಶಹಾಪುರ, ಹನುಮಂತ ನಿರಾಣಿ, ಶ್ರೀಕಂಠೇಗೌಡ, ನಾರಾಯಣಸ್ವಾಮಿ, ಆರ್ಥಿಕ ಇಲಾಖೆ ಉಪಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್, ಉನ್ನತ ಶಿಕ್ಷಣ ಇಲಾಖೆ ಉಪಕಾರ್ಯದರ್ಶಿ ವಿ.ಟಿ.ರಾಜಶ್ರೀ, ಸಭಾಪತಿಗಳ ವಿಶೇಷ ಕರ್ತವ್ಯಾಧಿಕಾರಿ ಡಾ ಮಹೇಶ್ ವಾಳ್ವೇಕರ್ ಉಪಸ್ಥಿತರಿದ್ದರು.