ಖಾಸಗಿ ಆಸ್ಪತ್ರೆಗಳ ದುಬಾರಿ ವೆಚ್ಚಕ್ಕೆ ಸಂಬಂಧಿಸಿ ರೋಗಿಗಳ ನೆರವಿಗೆ ಹೈಕೋರ್ಟ್ ಸೂಚನೆ
ಬೆಂಗಳೂರು, ಜುಲೈ 30: ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ 19 ರೋಗಿಗಳ ಚಿಕಿತ್ಸೆಗಾಗಿ ಹೆಚ್ಚಿನ ಶುಲ್ಕವನ್ನು ವಿಧಿಸುತ್ತಿದೆ, ರೋಗಿಗಳ ಸಹಾಯಕ್ಕೆ ಧಾವಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಹಲವು ಖಾಸಗಿ ಆಸ್ಪತ್ರೆಗಳು ಹೆಚ್ಚಿನ ಶುಲ್ಕ ವಿಧಿಸುತ್ತಿರುವ ಕುರಿತು ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ. ಮೊದಲ ಕೊರೊನಾ ಅಲೆ ಸಂದರ್ಭದಲ್ಲಿ ಚಿಕಿತ್ಸಾ ಶುಲ್ಕಕ್ಕೆ ಸಂಬಂಧಿಸಿದಂತೆ ಸರ್ಕಾರ ತೆಗೆದುಕೊಂಡ ನಿರ್ಧಾರಗಳನ್ನು ಎರಡನೇ ಅಲೆ ಸಂದರ್ಭದಲ್ಲಿ ತೆಗೆದುಕೊಂಡಿಲ್ಲ.
ನ್ಯಾ. ಎಎಸ್ ಓಕಾ ನೇತೃತ್ವದ ಪೀಠ ರಾಜ್ಯದಲ್ಲಿ ಕೊರೊನಾ ನಿರ್ವಹಣೆಗೆ ಸಂಬಂಧಿಸಿದಂತೆ ಹಲವು ವಿಷಯಗಳನ್ನು ಆಲಿಸಿದೆ. ರಾಜ್ಯ ಸರ್ಕಾರದ ಕೋಟಾದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಕೂಡ ಅತಿಯಾದ ಶುಲ್ಕ ವಿಧಿಸಲಾಗುತ್ತಿದೆ. ಒಂದೊಮ್ಮೆ ರೋಗಿಗಳು ಶುಲ್ಕ ಪಾವತಿಸಿದರೂ ಬಳಿಕ ಸರ್ಕಾರದಿಂದ ಹಣವನ್ನು ಮರಳಿ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ರೋಗಿಗಳು ಅಳಲು ತೋಡಿಕೊಂಡಿದ್ದಾರೆ.
ಹೀಗಾಗಿ ಈ ಕುರಿತು ರಾಜ್ಯ ಸರ್ಕಾರವು ಕುಂದುಕೊರತೆ ನಿವಾರಣಾ ವ್ಯವಸ್ಥೆಯನ್ನು ಬೇಗ ಸ್ಥಾಪಿಸಬೇಕು ಈ ಪ್ರಕರಣದ ವಿಚಾರಣೆ ಆಗಸ್ಟ್ 10ರಂದು ನಡೆಯಲಿದೆ ಎಂದು ನ್ಯಾ. ಓಕಾ ತಿಳಿಸಿದ್ದಾರೆ.
ರಾಜ್ಯದ ಎಲ್ಲ ಜನರಿಗೆ ಕಾಲಮಿತಿಯಲ್ಲಿ ಲಸಿಕೆ ಹಾಕಲು ಯೋಜನೆಯನ್ನು ರೂಪಿಸಲಾಗಿದೆಯೇ ಎಂಬ ಬಗ್ಗೆ ವಿವರ ನೀಡುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಬುಧವಾರ ನಿರ್ದೇಶನ ನೀಡಿತು.
ಇದೇ ವೇಳೆ ರಾಜ್ಯ ಸರಕಾರ ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ಲಸಿಕೆ ಕೊರತೆಯಾಗುವುದಿಲ್ಲವೆಂಬ ಹೇಳಿಕೆ ಗಮನಿಸಿದ ನ್ಯಾಯಪೀಠ, ಸೋಂಕಿನ ತೀವ್ರತೆ ತಗ್ಗುತ್ತಿದೆ. ಹಾಗಾಗಿ ಲಸಿಕೆ ನೀಡುವುದನ್ನು ತೀವ್ರಗೊಳಿಸಬೇಕಿದೆ.
ಆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜನರಿಗೆ ಲಸಿಕೆಯನ್ನು ನೀಡಲು ಕಾಲಮಿತಿಯ ಯೋಜನೆ ಹಾಕಿಕೊಂಡಿದೆಯೇ? ಯೋಜನೆ ರೂಪಿಸಿದ್ದರೆ ಆ ಬಗ್ಗೆ ಮುಂದಿನ ವಿಚಾರಣೆ ವೇಳೆ ವಿವರಗಳನ್ನು ನೀಡಬೇಕು ಎಂದು ಸರಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಆ.10ಕ್ಕೆ ಮುಂದೂಡಿತು.
ಕೋವಿಡ್-19 ನಿರ್ವಹಣೆ ಸಂಬಂಧ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಿಜೆ ಎ.ಎಸ್. ಓಕ್ ಮತ್ತು ನ್ಯಾ.ಅರವಿಂದ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಮೂರನೇ ಸಂಭಾವ್ಯ ಕೊರೊನಾ ಅಲೆಯನ್ನು ತಡೆಯಲು ಕೈಗೊಂಡಿರುವ ಸಿದ್ಧತಾ ಕ್ರಮಗಳ ಬಗ್ಗೆ ಈ ಹಿಂದಿನ ಆದೇಶದಂತೆ ಕ್ರಿಯಾ ಯೋಜನೆಯನ್ನು ಸಲ್ಲಿಸಬೇಕು ಎಂದೂ ಸಹ ನ್ಯಾಯಾಲಯವು ಸರಕಾರಕ್ಕೆ ಆದೇಶಿಸಿತು.
ಕುಂದುಕೊರತೆ ನಿವಾರಣಾ ಘಟಕ ಸ್ಥಾಪನೆ: ಈ ಮಧ್ಯೆ, ಸರಕಾರಿ ಕೋಟಾದದಡಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ಕೋವಿಡ್ ರೋಗಿಗಳಿಗೆ ನಿಗದಿಗಿಂತ ಅಧಿಕ ಶುಲ್ಕ ವಿಧಿಸಲಾಗಿದೆ ಎಂಬ ಬಗ್ಗೆ ವ್ಯಾಪಕ ದೂರುಗಳು ಬಂದಿವೆ.
ಆ ಕುರಿತು ದೂರುಗಳ ವಿಲೇವಾರಿಗೆ ಸರಕಾರದಿಂದ ಏನಾದರೂ ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಬೇಕು ಎಂದು ವಕೀಲ ಶ್ರೀಧರ್ ಪ್ರಭು ಅವರು ನ್ಯಾಯಪೀಠದ ಗಮನ ಸೆಳೆದರು. ಆಗ ನ್ಯಾಯಪೀಠ, ಇಂತಹ ದೂರುಗಳ ಬಗ್ಗೆ ಪರಿಶೀಲನೆ ನಡೆಸಲು ಸರಕಾರವು ಕುಂದುಕೊರತೆ ನಿವಾರಣಾ ಘಟಕವನ್ನು ಸ್ಥಾಪನೆ ಮಾಡಬೇಕು ಎಂದು ನಿರ್ದೇಶನ ನೀಡಿತು.
ಜುಲೈ 29ರಂದು ಕರ್ನಾಟಕದಲ್ಲಿ ಪತ್ತೆಯಾದ ಪ್ರಕರಣಗಳೆಷ್ಟು?: ರಾಜ್ಯದಲ್ಲಿ ಒಂದು ದಿನದಲ್ಲಿ 2052 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1332 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 35 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 36491 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಗುರುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2901247ಕ್ಕೆ ಏರಿಕೆಯಾಗಿದೆ. ಒಟ್ಟು 2841479 ಸೋಂಕಿತರು ಗುಣಮುಖರಾಗಿದ್ದು. 23253 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.