ಇಂಜಿನಿಯರಿಂಗ್, ಡಿಪ್ಲೊಮಾ, ಪದವಿ ಪರೀಕ್ಷೆ ಕುರಿತು ಉನ್ನತ ಶಿಕ್ಷಣ ಇಲಾಖೆ ದಿಢೀರ್ ತೀರ್ಮಾನ!
ಬೆಂಗಳೂರು, ಜ. 08: ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್ ಪ್ರಥಮ ಮತ್ತು ದ್ವಿತಿಯ ವರ್ಷದ ವಿದ್ಯಾರ್ಥಿಗಳಿಗೆ ಆಫ್ಲೈನ್ ತರಗತಿಗಳನ್ನು ಸಂಕ್ರಾಂತಿ ಹಬ್ಬದ ನಂತರ ಆರಂಭಿಸಲು ಉನ್ನತ ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ. ಈ ಕುರಿತು ವರದಿ ನೀಡುವಂತೆ ಕುಲಪತಿಗಳಿಗೆ ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಸರಕಾರಿ-ಖಾಸಗಿ ವಲಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು, ಉನ್ನತ ಶಿಕ್ಷಣ ಇಲಾಖೆ ಸೇರಿದಂತೆ ಸಂಬಂಧಿತ ಎಲ್ಲ ಇಲಾಖೆಗಳ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಡಿಸಿಎಂ ಡಾ. ಅಶ್ವಥ್ ನಾರಾಯಣ ಅವರು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಇನ್ನೂ ಹಲವು ಮಹತ್ವದ ನಿರ್ಧಾರಗಳನ್ನು ಉನ್ನತ ಶಿಕ್ಷಣ ಇಲಾಖೆ ಕೈಗೊಂಡಿದ್ದು, ಆ ಕುರಿತು ಡಿಸಿಎಂ ಡಾ. ಅಶ್ವಥ್ ನಾರಾಯಣ್ ಮಾಹಿತಿ ನೀಡಿದ್ದಾರೆ. ಜೊತೆಗೆ ಪರೀಕ್ಷೆ ನಡೆಸಲೂ ತೀರ್ಮಾನ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನೇರ ತರಗತಿ ಕುರಿತು ಅಭಿಪ್ರಾಯ ಏನಿದೆ?
ತಮ್ಮ ಅಭಿಪ್ರಾಯ ತಿಳಿಸಿದ ಎಲ್ಲ ವಿವಿಗಳ ಕುಲಪತಿಗಳು, ಆದಷ್ಟು ಶೀಘ್ರ ನೇರ ತರಗತಿಗಳನ್ನು ಆರಂಭಿಸುವಂತೆ ಸರಕಾರಕ್ಕೆ ಸಲಹೆ ನೀಡಿದರು. ಎಲ್ಲ ತರಗತಿಗಳನ್ನು ಆರಂಭಿಸಲು ಸಂಬಂಧಿಸಿದ ವರದಿಯನ್ನು ಕೂಡಲೇ ಕಳಿಸುವಂತೆ ಸೂಚಿಸಲಾಗಿದ್ದು, ವರದಿ ಬಂದ ಬಳಿಕ ನಂತರ ಮೊದಲ ಮತ್ತು ದ್ವಿತೀಯ ವರ್ಷದ ನೇರ ತರಗತಿಗಳನ್ನು ಸಂಕ್ರಾಂತಿ ಹಬ್ಬದ ನಂತರ ಯಾವ ದಿನದಿಂದ ಆರಂಭಿಸಬೇಕು ಎಂಬ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಾ. ಅಶ್ವಥ್ ನಾರಾಯಣ ಹೇಳಿದರು.
ಈಗಾಗಲೇ ಅಂತಿಮ ವರ್ಷದ ವಿದ್ಯಾರ್ಥಿಗಳ ನೇರ ತರಗತಿಗಳು ಸರಿಯಾಗಿ ನಡೆಯುತ್ತಿವೆ. ಆ ಹಿನ್ನೆಲೆಯಲ್ಲಿ ಉಳಿದ ತರಗತಿಗಳನ್ನು ಶುರು ಮಾಡಲಾಗುವುದು. ಯುಜಿಸಿ ಮತ್ತು ಕೋವಿಡ್ ಮಾರ್ಗಸೂಚಿ ಪ್ರಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಮುಂದಿನ ಶೈಕ್ಷಣಿಕ ವರ್ಷ
ಮುಖ್ಯವಾಗಿ ಈ ಸಭೆಯಲ್ಲಿ 2021-22ರ ಶೈಕ್ಷಣಿಕ ವರ್ಷವನ್ನು ಯಾವಾಗಿನಿಂದ ಆರಂಭಿಸಬೇಕು ಎಂಬ ಬಗ್ಗೆ ಮಹತ್ವದ ಚರ್ಚೆ ನಡೆಯಿತು. ಮೇ ತಿಂಗಳ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಈಗಾಗಲೇ ಘೋಷಣೆ ಮಾಡಲಾಗಿದೆ. ಇದನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಉನ್ನತ ಶಿಕ್ಷಣದ ಶೈಕ್ಷಣಿಕ ವೇಳಾಪಟ್ಟಿಯನ್ನು ರೂಪಿಸುವ ತೀರ್ಮಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಬಂದಿದೆ.

ಪದವಿ ಪರೀಕ್ಷೆ ಯಾವಾಗ?
ಆನ್ಲೈನ್ ಪರೀಕ್ಷೆಗಳಿಗಿಂತ ಪೆನ್ ಮತ್ತು ಪೇಪರ್ ಆಧಾರಿತ ಆಫ್ಲೈನ್ ಪರೀಕ್ಷೆಯೇ ಉತ್ತಮ ಎಂದು ವಿಟಿಸಿಯು ಕುಲಪತಿ ಪ್ರೊ. ಕರಿಸಿದ್ದಪ್ಪ ಸೇರಿದಂತೆ ಎಲ್ಲ ಕುಲಪತಿ ಹಾಗೂ ಕುಲ ಸಚಿವರು ಸಲಹೆ ನೀಡಿದ್ದಾರೆ. ಇದನ್ನು ಸರಕಾರ ಗಂಭೀರವಾಗಿ ಪರಿಶೀಲಿಸಲಿದೆ. ಯುಜಿಸಿ ನಿಯಮದಂತೆ ಮಾರ್ಚ್ನಲ್ಲಿ ಪರೀಕ್ಷೆ ಮುಗಿಯಬೇಕಾಗುತ್ತದೆ. ಆದರೆ, ಇನ್ನು ಹಲವಾರು ವಿವಿಗಳ ವ್ಯಾಪ್ತಿಯಲ್ಲಿ ಪಾಠಗಳು ಮುಗಿಯದ ಕಾರಣ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಚಿಂತಿಸಲಾಗುತ್ತಿದೆ, ಶೀಘ್ರವೇ ಈ ಬಗ್ಗೆ ಅಂತಿಮ ಮಾಹಿತಿ ನೀಡಲಾಗುವುದು ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ್ ಹೇಳಿದರು.

ಬಸ್ ಪಾಸ್ ಮತ್ತು ಹಾಸ್ಟೆಲ್?
ವಿದ್ಯಾರ್ಥಿಗಳ ಬಸ್ ಪಾಸ್ ಬಗ್ಗೆ ಇರುವ ಗೊಂದಲದ ಬಗ್ಗೆ ಶೀಘ್ರದಲ್ಲಿಯೇ ಸಾರಿಗೆ ಸಚಿವರೂ ಆದ ಡಿಸಿಎಂ ಲಕ್ಷ್ಮಣ ಸವದಿ ಅವರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಹಳೆಯ ಪಾಸ್ ಇಟ್ಟುಕೊಂಡೇ ಓಡಾಡಬಹುದಾ? ಇಲ್ಲವಾ? ಎಂಬ ಬಗ್ಗೆ ಮಾಹಿತಿ ನೀಡಲಾಗುವುದು ಎಂದ ಡಿಸಿಎಂ, ಉಳಿದಂತೆ ತರಗತಿಗಳು ಆರಂಭವಾದ ಮೇಲೆ ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಲಾಗುವುದು. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದರು.
ವರ್ಚುವಲ್ ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ. ತಿಮ್ಮೇಗೌಡ ಸೇರಿದಂತೆ ರಾಜ್ಯದ ಎಲ್ಲ ವಿವಿಗಳ ಕುಲಪತಿ, ಕುಲ ಸಚಿವರು ಪಾಲ್ಗೊಂಡಿದ್ದರು.












Click it and Unblock the Notifications