ಹೊಸ ದಾಖಲೆ: ಕರ್ನಾಟಕದಲ್ಲಿ 60 ವರ್ಷ ಮೇಲ್ಪಟ್ಟವರಿಗೇ ಹೆಚ್ಚು ಲಸಿಕೆ!
ಬೆಂಗಳೂರು, ಮಾರ್ಚ್ 29: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಎರಡನೇ ಅಲೆ ಹರಡುತ್ತಿರುವುದರ ನಡುವೆ ಲಸಿಕೆ ವಿತರಣೆ ವೇಗ ಹೆಚ್ಚಿಸಲಾಗಿದೆ. ರಾಜ್ಯವು ಕೊವಿಡ್-19 ಲಸಿಕೆ ವಿತರಣೆಯಲ್ಲಿ ಹೊಸ ಇತಿಹಾಸ ಬರೆದಿದೆ.
ಮಾರ್ಚ್ 27ರ ವೇಳೆಗೆ 50 ಲಕ್ಷ ಜನರಿಗೆ ಕೊವಿಡ್-19 ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. ರಾಜ್ಯದಲ್ಲಿ ಈವರೆಗೂ 60 ವರ್ಷಕ್ಕಿಂತ ಮೇಲ್ಪಟ್ಟ 16,41,201 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ.
ರಾಜ್ಯದಲ್ಲಿ ಈ ಅವಧಿಗೆ 16 ಲಕ್ಷ ಮಂದಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿದ್ದು, ಶೇ.34.21ರಷ್ಟು ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ಅಂಕಿ-ಅಂಶಗಳ ಪ್ರಕಾರ, ಈವರೆಗೂ 5,47,370 ವೈದ್ಯಕೀಯ ಸಿಬ್ಬಂದಿಗೆ ಕೊವಿಡ್-19 ಲಸಿಕೆಯನ್ನು ನೀಡಲಾಗಿದೆ.

ರಾಜ್ಯದಲ್ಲಿ 3ನೇ ಹಂತದ ಕೊವಿಡ್-19 ಲಸಿಕೆ ವಿತರಣೆ
ಕರ್ನಾಟಕದಲ್ಲಿ ಮೂರನೇ ಹಂತದ ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ 45 ವರ್ಷಕ್ಕಿಂತ ಮೇಲ್ಪಟ್ಟ ಸಹ-ಅಸ್ವಸ್ಥತೆಯನ್ನು ಹೊಂದಿರುವ 16 ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿತ್ತು. ಈ ಪೈಕಿ ಶೇ.30.10ರಷ್ಟು ಲಸಿಕೆಯನ್ನು ನೀಡಲಾಗಿದೆ. ಅಂದರೆ ಈನವರೆಗೂ 4,81,749 ಜನರು ಕೊವಿಡ್-19 ಲಸಿಕೆ ಹಾಕಿಸಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.

ಮೊದಲ ಶ್ರೇಣಿ ಕಾರ್ಮಿಕರಿಗೆ ಕೊರೊನಾ ಲಸಿಕೆ
ರಾಜ್ಯದಲ್ಲಿ ಕೊರೊನಾವೈರಸ್ ಲಸಿಕೆ ಹಾಕಿಸಿಕೊಂಡ ವರ್ಗಗಳ ಪೈಕಿ ಮೊದಲ ಶ್ರೇಣಿ ಕಾರ್ಮಿಕರು ತೀರಾ ಹಿಂದಿದ್ದಾರೆ. 2 ಕೋಟಿ ಮೊದಲ ಶ್ರೇಣಿ ಕಾರ್ಮಿಕರಿಗೆ ಕೊವಿಡ್-19 ಲಸಿಕೆ ಹಾಕುವ ಗುರಿ ಇಟ್ಟುಕೊಳ್ಳಲಾಗಿದ್ದು, ಈ ಪೈಕಿ ಶೇ.1.11ರಷ್ಟು ಫಲಾನುಭವಿಗಳಿಗೆ ಮಾತ್ರ ಲಸಿಕೆ ನೀಡಲಾಗಿದೆ. ಅಂದರೆ, ಕೇವಲ 2,23,144 ಕಾರ್ಮಿಕರಿಗೆ ಲಸಿಕೆ ವಿತರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಗ್ರಾಮೀಣ ಪ್ರದೇಶದ ಜನರಲ್ಲಿ ಲಸಿಕೆ ಬಗ್ಗೆ ಹಿಂದೇಟು
ಕರ್ನಾಟಕದ ನಗರ ಪ್ರದೇಶಗಳಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರ ವರ್ಗದಲ್ಲಿ ವಿದ್ಯಾವಂತರು ತಾವಾಗಿಯೇ ಕೊರೊನಾವೈರಸ್ ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬರುತ್ತಿದ್ದಾರೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ವೃದ್ಧರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ಸಹ-ಅಸ್ವಸ್ಥತೆಯನ್ನು ಹೊಂದಿರುವ ಜನರು ಲಸಿಕೆ ಹಾಕಿಸಿಕೊಳ್ಳುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಇನ್ನು, ವೈದ್ಯಕೀಯ ಸಿಬ್ಬಂದಿ, ನರ್ಸ್, ಡಿ ಗ್ರೂಪ್ ನೌಕರರು ಸಾಮಾನ್ಯವಾಗಿ ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬರುತ್ತಿದ್ದಾರೆ ಎಂದು ಡಾ. ಶ್ರೀನಿವಾಸ್ ಎಂಬುವವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳು
ಕರ್ನಾಟಕದಲ್ಲಿ ಒಂದೇ ದಿನ 3082 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 987012ಕ್ಕೆ ಏರಿಕೆಯಾಗಿದ್ದು, 23037 ಸಕ್ರಿಯ ಪ್ರಕರಣಗಳಿವೆ. 24 ಗಂಟೆಗಳಲ್ಲಿ 12 ಮಂದಿ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 12504ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 6,05,30,435 ಫಲಾನುಭವಿಗಳಿಗೆ ಲಸಿಕೆ
ದೇಶದಲ್ಲಿ ಈವರೆಗೂ 6,05,30,435 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ.












Click it and Unblock the Notifications