ಜಿಲ್ಲಾಧಿಕಾರಿಗಳ ಜೊತೆ ಯಡಿಯೂರಪ್ಪ ವಿಡಿಯೋ ಸಂವಾದ: ಪ್ರಮುಖಾಂಶಗಳು
ಬೆಂಗಳೂರು, ಜುಲೈ 13: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜಿಲ್ಲಾಧಿಕಾರಿಗಳ ಜೊತೆ ಇಂದು ಸಂವಾದ ನಡೆಸಿದರು.
Recommended Video
ಕೊವಿಡ್ ನಿಯಂತ್ರಣ, ಕೃಷಿ ಚಟುವಟಿಕೆ, ಪ್ರವಾಹ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದರು.ರಾಪಿಡ್ ಆಂಟಿಜೆನ್ ಟೆಸ್ಟ್ ನಡೆಸಲು ಆದ್ಯತೆ ನೀಡಿ. 1 ಲಕ್ಷ ಟೆಸ್ಟ್ ಕಿಟ್ ಖರೀದಿಸಲಾಗಿದೆ. ಈಗಾಗಲೇ ಜಿಲ್ಲೆಗಳಿಗೆ ವಿತರಿಸಲಾಗಿದ್ದು, ತುರ್ತು ಪ್ರಕರಣಗಳಲ್ಲಿ ವಿವೇಚನೆಯಿಂದ ಈ ಪರೀಕ್ಷೆ ನಡೆಸಲು ಸೂಚಿಸಲಾಯಿತು.
ಬೆಂಗಳೂರು ನಗರ ಹಾಗೂ ದಕ್ಷಿಣ ಕನ್ನಡ, ಧಾರವಾಡ, ಬಳ್ಳಾರಿ, ಉಡುಪಿ , ಕಲಬುರಗಿ ಹೆಚ್ಚು ಪ್ರಕರಣ ದಾಖಲಾಗಿದೆ. ಬೀದರ್, ಧಾರವಾಡ, ಗದಗ, ಮೈಸೂರು ಜಿಲ್ಲೆಗಳಲ್ಲಿ ಸಾವಿನ ಪ್ರಮಾಣ ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಕೊವಿಡ್ ಆಸ್ಪತ್ರೆಯಲ್ಲಿ ಸ್ವಚ್ಛತೆ ನಿರ್ವಹಣೆಯಲ್ಲಿ ತೊಡಗಿರುವ ಡಿ ಗ್ರೂಪ್ ನೌಕರರ ಪ್ರೋತ್ಸಾಹಧನ ಹೆಚ್ಚಳಕ್ಕೆ ಕ್ರಮ ವಹಿಸಲಾಗುವುದು. ಆಂಬ್ಯುಲೆನ್ಸ್ ಮತ್ತು ಚಿಕಿತ್ಸೆಗೆ ಹಾಸಿಗೆಗಳ ಕೊರತೆಯಾಗದಂತೆ ಎಚ್ಚರ ವಹಿಸುವಂತೆ ಸೂಚಿಸಿದರು..
ಡಿಜಿಟಲ್ ಎಕ್ಸ್ ರೇ ಯಂತ್ರಗಳ ಮೂಲಕ ಶ್ವಾಸಕೋಶದ ಸೋಂಕನ್ನು ತ್ವರಿತವಾಗಿ ಪತ್ತೆ ಹಚ್ಚಲು ಸಾಧ್ಯವಿದ್ದು, ಈ ಉಪಕರಣಗಳ ಬಳಕೆಗೆ ಆದ್ಯತೆ ನೀಡುವಂತೆ ಸೂಚಿಸಲಾಯಿತು.
ಕೊವಿಡ್ ಮಾರಣಾಂತಿಕ ಕಾಯಿಲೆ ಅಲ್ಲ, ಜನರು ಭಯಭೀತರಾಗುವ ಅಗತ್ಯವಿಲ್ಲ ಎಂದು ಜನರಿಗೆ ತಿಳುವಳಿಕೆ ನೀಡುವ ಅಗತ್ಯವಿದೆ.
ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಹೆಚ್ಚು ಮಳೆಯಾಗುತ್ತಿರುವ ಪ್ರದೇಶದಲ್ಲಿ ಜನರ ಸ್ಥಳಾಂತರಕ್ಕೆ ಮೊದಲೇ ಸ್ಥಳ ಗುರುತಿಸುವಂತೆ ಸೂಚಿಸಲಾಯಿತು..
ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲಾಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದು, ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ಹರಿದುಬರುವ ನೀರಿನ ಪ್ರಮಾಣದ ಕುರಿತು ಜಾಗೃತರಾಗಿರುವಂತೆ ತಿಳಿಸಿದರು. ಅಲ್ಲದೆ, ರಾಜಾಪೂರ ಬ್ಯಾರೇಜಿನಲ್ಲಿ ರಾಜ್ಯದ ಎಂಜಿನಿಯರ್ ಒಬ್ಬರನ್ನು ನಿಯೋಜಿಸುವಂತೆ ಸೂಚಿಸಲಾಯಿತು.
ಅಕ್ಟೋಬರ್ ವರೆಗೆ ಉತ್ತಮ ಮಳೆ ಆಗುವ ನಿರೀಕ್ಷೆ ಇದೆ. ಪ್ರವಾಹ ಕುರಿತು ಎಚ್ಚರ ವಹಿಸಿ. ಮಣ್ಣಿನ ತೇವಾಂಶ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ಬೆಳೆಹಾನಿಯಾಗದಂತೆ ಎಚ್ಚರ ವಹಿಸಲು ಸೂಚಿಸಿದರು. ಉತ್ತಮ ಮಳೆಯಾಗಿ, ಬಂಪರ್ ಬೆಳೆ ಬರುವ ಸಾಧ್ಯತೆ ಇದ್ದು, ಬೇಡಿಕೆ ಕಡಿಮೆ ಇರುವ ಕಾರಣ ಗೋಡೌನ್ ಗಳನ್ನು ಗುರುತಿಸಿ, ಕೃಷಿ ಉತ್ಪನ್ನ ದಾಸ್ತಾನಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸೂಚಿಸಲಾಯಿತು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ,, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಹಾಗೂ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಉಪಸ್ಥಿತರಿದ್ದರು.

ಬೀದರ್ನಲ್ಲಿ ಮರಣ ಪ್ರಮಾಣ ನಿಯಂತ್ರಿಸಲು ಸೂಚನೆ
ಬೀದರ್ ಜಿಲ್ಲೆ ಸಾವಿನ ಪ್ರಮಾಣ ದೇಶದ 5 ಜಿಲ್ಲೆಗಳಲ್ಲಿ ಒಂದಾಗಿದ್ದು, ಮರಣ ಪ್ರಮಾಣ ನಿಯಂತ್ರಿಸುವಂತೆ ಸೂಚಿಸಿದರು. ಈ ವರೆಗೆ ಸಂಭವಿಸಿದ ಮರಣಗಳ ಕುರಿತು ತಜ್ಞರ ವಿಶ್ಲೇಷಣಾ ವರದಿಯನ್ನು ಕೂಡಲೇ ಕಳುಹಿಸುವಂತೆ ತಿಳಿಸಲಾಯಿತು.

ಕಂಟೇನ್ಮೆಂಟ್ ಜೋನ್ಗಳಲ್ಲಿ ಕಟ್ಟುನಿಟ್ಟಿನ ಕ್ರಮ
ಕಂಟೇನ್ ಮೆಂಟ್ ಜೋನ್ ಗಳಲ್ಲಿ ಕಟ್ಟುನಿಟ್ಟಾಗಿ ಕ್ರಮ ವಹಿಸಬೇಕಾಗಿದೆ. ಅಲ್ಲದೆ, ಕ್ಷೇತ್ರ ಮಟ್ಟದ ಆರೋಗ್ಯ ಸಿಬ್ಬಂದಿ ಕೊರತೆ ಇರುವಲ್ಲಿ ಗುತ್ತಿಗೆ ಆಧಾರದಲ್ಲಿ 6 ತಿಂಗಳ ಅವಧಿಗೆ ನೇಮಕ ಮಾಡುವಂತೆ ಸೂಚಿಸಲಾಯಿತು.

ಹೊರಗಿನಿಂದ ವಲಸೆ ಬಂದಿರುವವರ ಮೇಲೆ ನಿಗಾ
ಹೊರಗಿನಿಂದ ವಲಸೆ ಬಂದವರ ಕ್ವಾರಂಟೈನ್ ಮತ್ತು ಹೆಚ್ಚಿನ ನಿಗಾ ವಹಿಸಲು ಸೂಚಿಸಲಾಯಿತು. ನಾನ್ ಕೊವಿಡ್ ರೋಗಿಗಳ ಚಿಕಿತ್ಸೆಗೆ ಯಾವುದೇ ಅಡ್ಡಿಯಾಗದಂತೆ ಎಚ್ಚರ ವಹಿಸುವಂತೆ ತಿಳಿಸಲಾಯಿತು.

ಸಾರ್ವಜನಿಕರ ಉತ್ಸವಗಳನ್ನು ನಡೆಸುವಂತಿಲ್ಲ
ಯಾವುದೇ ಕಾರಣಕ್ಕೆ ಸಾರ್ವಜನಿಕ ಉತ್ಸವಗಳ ಆಚರಣೆ ಮಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿದರು. ಬೆಂಗಳೂರಿನಲ್ಲಿ ಕೊವಿಡ್ ಮತ್ತು ನಾನ್ ಕೋವಿಡ್ ಚಿಕಿತ್ಸೆ ನೀಡಲು ಸಹಕರಿಸದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

ಸಂಪರ್ಕಿತರ ಪತ್ತೆ ಹಚ್ಚುವುದು
ಬೂತ್ ಮಟ್ಟದಲ್ಲಿ ಕ್ವಾರಂಟೈನ್, ಸಂಪರ್ಕಿತರ ಪತ್ತೆ ಹಚ್ಚುವುದು, ಮನೆ ಮನೆ ಸಮೀಕ್ಷೆ ನಡೆಸುವ ಪ್ರಕ್ರಿಯೆಯನ್ನು ಪರಿಶೀಲನೆ ನಡೆಸಲು ಬೂತ್ ಮಟ್ಟದ ಸಮಿತಿಗಳನ್ನು ರಚಿಸಿ,. ಜನಪ್ರತಿನಿಧಿಗಳು ಹಾಗೂ ಸ್ವಯಂ ಸೇವಕರ ಸಹಕಾರವನ್ನು ಪಡೆಯುವಂತೆ ಸೂಚಿಸಲಾಯಿತು.

60 ವರ್ಷ ಮೇಲ್ಪಟ್ಟವರನ್ನು ಪ್ರತ್ಯೇಕವಾಗಿರಿಸಿ
60 ವರ್ಷ ಮೇಲ್ಪಟ್ಟವರು ಹಾಗೂ ಇತರ ತೀವ್ರ ಸ್ವರೂಪದ ಕಾಯಿಲೆಯಿಂದ ಬಳಲುತ್ತಿರುವವರನ್ನು ಪ್ರತ್ಯೇಕವಾಗಿರಿಸಬೇಕು ಮತ್ತು ಐಎಲ್ಐ ಮತ್ತು ಉಸಿರಾಟದ ತೊಂದರೆ ಇರುವವರನ್ನು ಗುರುತಿಸಿ, ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೊಳಪಡಿಸಬೇಕು.

ಸೀಲ್ಡೌನ್ ಪರಿಣಾಮಕಾರಿಯಾಗಿ ಮಾಡಬೇಕು
ಸೀಲ್ ಡೌನ್ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ಮಾಡಬೇಕು. ಈ ಪ್ರದೇಶಗಳಲ್ಲಿ ಹೆಚ್ಚು ಪರೀಕ್ಷೆ ನಡೆಸಬೇಕು. ಜನರು ಧಾರ್ಮಿಕ ಸ್ಥಳಗಳಲ್ಲಿ, ಮಾರುಕಟ್ಟೆ ಮೊದಲಾದ ಸ್ಥಳಗಳಲ್ಲಿ ಜನ ಗುಂಪುಗೂಡದಂತೆ ಎಚ್ಚರ ವಹಿಸಬೇಕು.












Click it and Unblock the Notifications